belagavi news :
ನವದೆಹಲಿ: ವಿದ್ಯಾರ್ಥಿಗಳು ನೀಟ್ (NEET UG) ಮರು ಪರೀಕ್ಷೆಗೆ ನಿರ್ಭಯವಾಗಿ ಮತ್ತು ಆತಂಕಮುಕ್ತರಾಗಿ ಹಾಜರಾಗುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕರೆ ನೀಡಿದ್ದಾರೆ. ಪರೀಕ್ಷೆಯ ಕುರಿತು ಅನಗತ್ಯ ಗೊಂದಲಗಳಿಗೆ ಕಿವಿಗೊಡದೆ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸುವಂತೆ ಅವರು ಸಲಹೆ ನೀಡಿದ್ದಾರೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ National Testing Agency (ಎನ್ಟಿಎ), ರಾಜ್ಯ ಸರ್ಕಾರಗಳು, ಜಿಲ್ಲಾಡಳಿತ ಶಿಕ್ಷಣ ಸಮುದಾಯ ಹಾಗೂ ವಿದ್ಯಾರ್ಥಿಗಳ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದ ಅವರು, "ಇಂದು ಸುಮಾರು 22 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯಲಿದ್ದಾರೆ. ಅವರು ಯಾವುದೇ ಭಯ ಅಥವಾ ಅತಂಕವಿಲ್ಲದೆ ಪರೀಕ್ಷೆಗೆ ಹಾಜರಾಗಬೇಕು. ತಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟು ಉತ್ತಮ ಪ್ರದರ್ಶನ ನೀಡುತ್ತಾರೆ ಎಂಬ ವಿಶ್ವಾಸವಿದೆ. ಎಲ್ಲ ವಿದ್ಯಾರ್ಥಿಗಳಿಗೆ ನನ್ನ ಶುಭ ಹಾರೈಕೆಗಳು ಎಂದು ಹೇಳಿದ್ದಾರೆ.
ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಯಾವುದೇ ರೀತಿಯ ವರ್ತನೆಯ ಅಥವಾ ಹೇಳಿಕೆಗಳನ್ನು ತಪ್ಪಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ ಪ್ರಧಾನ್ , "ಭಾರತದ ಹೊಸ ಪೀಳಿಗೆಯ ಭವಿಷ್ಯದೊಂದಿಗೆ ಆಟವಾಡಬೇಡಿ. ಕೆಲವು ಗಂಟೆಗಳ ಬಳಿಕ ಲಕ್ಷಾಂತರ ವಿದ್ಯಾರ್ಥಿಗಳು ಮಹತ್ವದ ಪರೀಕ್ಷೆ ಬರೆಯಲಿದ್ದಾರೆ. ಅವರ ಮನೋಸ್ಥೈರ್ಯಕ್ಕೆ ಧಕ್ಕೆ ಉಂಟುಮಾಡುವ ಪ್ರಯತ್ನಗಳನ್ನು ಯಾರು ಮಾಡಬಾರದು" ಎಂದು ಹೇಳಿದರು.
ಇದೇ ವೇಳೆ, ಯಾರು ಹೆಸರನ್ನು ಉಲ್ಲೇಖಿಸದೆ ಕೆಲ ಜವಾಬ್ದಾರಿಯುತ ವ್ಯಕ್ತಿಗಳು ತಪ್ಪು ಉದ್ದೇಶದಿಂದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುವ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಪರೋಕ್ಷವಾಗಿ ಟೀಕಿಸಿದರು. "ನೀವು ಭಾರತದ ನಿಜವಾದ ನಾಗರಿಕರಾಗಿದ್ದರೆ, ಜನರ ಪ್ರತಿನಿಧಿಗಳಾಗಿದ್ದರೆ ನಿಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳಿ. ವಿದ್ಯಾರ್ಥಿಗಳಿಗೆ ತೊಂದರೆ ಉಂಟುಮಾಡುವ ಯಾವುದೇ ಕ್ರಮಗಳಿಂದ ದೂರವಿರಿ" ಎಂದು ಅವರು ಎಚ್ಚರಿಸಿದರು.
ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ಹಿನ್ನೆಲೆಯಲ್ಲಿ ಎನ್ ಟಿಎ ಮೇ 3ರಂದು ನಡೆಯಬೇಕಿದ್ದ NEET UG 2026 ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಪ್ರಕರಣದ ಸಮಗ್ರ ತನಿಖೆಯನ್ನು ಕೇಂದ್ರ ಸರ್ಕಾರ Central Bureau of Investigation (ಸಿಬಿಐ) ಗೆ ವಹಿಸಿದ್ದು, ತನಿಖೆ ಮುಂದುವರೆದಿದೆ. ಈ ನಡುವೆ ಮರು ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಾ ಪ್ರಯತ್ನವಾಗಿ ಧರ್ಮೇಂದ್ರ ಪ್ರಧಾನ ಈ ಸಂದೇಶ ನೀಡಿದ್ದಾರೆ.
ನೀಟ್ ಮರುಪರೀಕ್ಷೆ: ಯಾವುದೇ ಅಕ್ರಮಕ್ಕೆ ಅವಕಾಶ ನೀಡಬೇಡಿ ಎಂದ ರಾಹುಲ್ ಗಾಂಧಿ
ನೀಟ್ ಮರುಪರೀಕ್ಷೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರಕ್ಕೆ ಮಹತ್ವದ ಸಲಹೆ ನೀಡಿದ್ದಾರೆ. "ಈ ಸಲವಾದರೂ ನೀಟ್ ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕವಾಗಿ ಮತ್ತು ದೋಷರಹಿತವಾಗಿ ನಡೆಸಿ ಯಾವುದೇ ಸಮಸ್ಯೆ ಅಥವಾ ಅಕ್ರಮಗಳಿಗೆ ಅವಕಾಶ ನೀಡಬೇಡಿ ಎಂದು ಅವರು ಆಗ್ರಹಿಸಿದ್ದಾರೆ.
ನೀಟಾಗಿ ಅಭ್ಯರ್ಥಿಗಳ ಪರವಾಗಿ ಧ್ವನಿ ಎತ್ತಿರುವ ರಾಹುಲ್ ಗಾಂಧಿ ಈಗಾಗಲೇ ವಿದ್ಯಾರ್ಥಿಗಳು ಸಾಕಷ್ಟು ಮಾನಸಿಕ ಒತ್ತಡವನ್ನು ಎದುರಿಸಿದ್ದಾರೆ. ಮತ್ತಷ್ಟು ಸಮಸ್ಯೆಗಳನ್ನು ಎದುರಿಸುವ ಸ್ಥಿತಿಯಲ್ಲಿ ಅವರು ಇಲ್ಲ ಎಂದು ಎಕ್ಸ್ ನಲ್ಲಿ ಹಂಚಿಕೊಂಡಿರುವ ವೀಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.
ಜೂನ್ 21ರಂದು ನಡೆಯಲಿರುವ ಮರುಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಅವರು, "ನೀವು ಅದ್ಭುತ ಪ್ರತಿಭೆಗಳು, ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ನಿಮ್ಮ ಉಜ್ವಲ ಭವಿಷ್ಯಕ್ಕಾಗಿ ಮತ್ತು ನಿಮ್ಮ ಹಕ್ಕುಗಳ ರಕ್ಷಣೆಗೆ ನಾವು ಸದಾ ನಿಮ್ಮೊಂದಿಗಿದ್ದೇವೆ" ಎಂದು ಭರವಸೆ ನೀಡಿದ್ದಾರೆ.
Also Read: