Belagavi News:
ನವದೆಹಲಿ: 27ನೇ ಕಾರ್ಗಿಲ್ ವಿಜಯ ದಿನದ ಅಂಗವಾಗಿ ಇಂದು (ಭಾನುವಾರ) ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಗಣ್ಯರು ಕಾರ್ಗಿಲ್ ಯುದ್ಧದ ವೀರ ಯೋಧರಿಗೆ ಭಾವಪೂರ್ಣ ಗೌರವ ಸಲ್ಲಿಸಿದರು. ದೇಶದ ಸಾರ್ವಭೌಮತ್ವ ಮತ್ತು ಭದ್ರತೆಯನ್ನು ಕಾಪಾಡಲು ಪ್ರಾಣತ್ಯಾಗ ಮಾಡಿದ ಸೈನಿಕರ ಶೌರ್ಯ, ತ್ಯಾಗ ಮತ್ತು ದೇಶಭಕ್ತಿಯನ್ನು ಸ್ಮರಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಕ್ಸ್ (X) ಮೂಲಕ ಸಂದೇಶ ಹಂಚಿಕೊಂಡು, "ಮಾತೃಭೂಮಿಯ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಧೀರ ಯೋಧರಿಗೆ ನನ್ನ ವಿನಮ್ರ ನಮನಗಳು. ಅವರ ಅಪ್ರತಿಮ ಶೌರ್ಯ, ಅಚಲ ಸಂಕಲ್ಪ ಮತ್ತು ದೇಶಭಕ್ತಿ ಮತ್ತು ಸಶಸ್ತ್ರ ಪಡೆಗಳ ಶ್ರೇಷ್ಠ ಸಂಪ್ರದಾಯಕ್ಕೆ ಮಾದರಿಯಾಗಿದೆ. ರಾಷ್ಟ್ರವು ಅವರ ತ್ಯಾಗಕ್ಕೆ ಎಂದೆಂದಿಗೂ ಋಣಿಯಾಗಿರುತ್ತದೆ" ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೂಡ ಕಾರ್ಗಿಲ್ ವೀರರಿಗೆ ಗೌರವ ಸಲ್ಲಿಸಿ, " ಭಾರತದ ಭದ್ರತೆಗಾಗಿ ಅಸಾಧಾರಣ ದೈರ್ಯ ಮತ್ತು ಬದ್ಧತೆಯನ್ನು ಪ್ರದರ್ಶಿಸಿದ ನಮ್ಮ ಸೈನಿಕರಿಗೆ ರಾಷ್ಟ್ರವು ಕೃತಜ್ಞತೆ ಸಲ್ಲಿಸುತ್ತದೆ. ಅತ್ಯಂತ ಕಠಿಣ ಪರಿಸ್ಥಿತಿಗಳಲ್ಲಿಯೂ ಅವರ ಶೌರ್ಯ ದೇಶದ ಹೆಮ್ಮೆಯ ಸಂಕೇತವಾಗಿದೆ ಅವರ ದೇಶಭಕ್ತಿ ಮತ್ತು ಕರ್ತವ್ಯನಿಷ್ಠೆ ಮುಂದಿನ ಪೀಳಿಗೆಗೆ ಸದಾ ಸ್ಪೂರ್ತಿಯಾಗಲಿದೆ" ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಕೂಡ ಕಾರ್ಗಿಲ್ ಯುದ್ಧದ ಹುತಾತ್ಮರನ್ನು ಸ್ಮರಿಸಿ ಗೌರವ ಸಲ್ಲಿಸಿದರು.
ಪ್ರತಿ ವರ್ಷ ಜುಲೈ 26ರಂದು ಕಾರ್ಗಿಲ್ ವಿಜಯ ದಿನವನ್ನು ಆಚರಿಸಲಾಗುತ್ತದೆ 1999ರ ಕಾರ್ಗಿಲ್ ಯುದ್ಧದಲ್ಲಿ ಭಾರತೀಯರ ಸಶಸ್ತ್ರ ಪಡೆಗಳು 'ಆಪರೇಷನ್ ವಿಜಯ್' ಮೂಲಕ ಪಾಕಿಸ್ತಾನದ ಒಳನುಸುಳುಕೋರರನ್ನು ಯಶಸ್ವಿಯಾಗಿ ಹೆಮ್ಮೆಟ್ಟಿಸಿ, ಕಾರ್ಗಿಲ್ ಪ್ರದೇಶವನ್ನು ಮರಳಿ ವಶಪಡಿಸಿಕೊಂಡ ಐತಿಹಾಸಿಕ ವಿಜಯದ ಸ್ಮರಣಾರ್ಥ ಈ ದಿನವನ್ನು ಆಚರಿಸಲಾಗುತ್ತದೆ. ಈ ದಿನವೂ ಭಾರತದ ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಹಾಗೂ ಸಶಸ್ತ್ರ ಪಡೆಗಳ ಅಪ್ರತಿಮ ಸಾಹಸವನ್ನು ಸ್ಮರಿಸುವ ಮಹತ್ವದ ದಿನವಾಗಿದೆ.