BELAAGVI NEWS :
ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆ ಮತ್ತು ಅವುಗಳ ದುರಸ್ತಿಗೆ ಸರ್ಕಾರ ಘೋಷಿಸಿರುವ ಸಾವಿರಾರು ಕೋಟಿ ರೂಪಾಯಿಗಳ ಅನುದಾನದ ಕುರಿತು ಸಂಸದ ತೇಜಸ್ವಿ ಸೂರ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು ದಕ್ಷಿಣ ಸಂಸದರಾದ ಅವರು, ನಗರದಲ್ಲಿ ರಸ್ತೆ ಗುಂಡಿ ಸಮಸ್ಯೆ ದಿನೇದಿನೇ ಹೆಚ್ಚುತ್ತಿದ್ದು, ಇದರ ನಿವಾರಣೆಗೆ ಘೋಷಿಸಿರುವ ಅನುದಾನದ ಬಳಕೆ ಕುರಿತು ಸ್ಪಷ್ಟತೆಯ ಅಗತ್ಯವಿದೆ ಎಂದು ಹೇಳಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ರಸ್ತೆ ಕಾಮಗಾರಿ ಹಾಗೂ ಗುಂಡಿ ನಿರ್ವಹಣೆಗೆ ಎಷ್ಟು ಹಣ ಖರ್ಚಾಗಿದೆ ಎಂಬ ವಿವರಗಳನ್ನು 30 ದಿನಗಳೊಳಗೆ ಶ್ವೇತಪತ್ರ ರೂಪದಲ್ಲಿ ಬಿಡುಗಡೆ ಮಾಡಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ನಗರದ ಮೂಲಸೌಕರ್ಯ ನಿರ್ವಹಣೆಯಲ್ಲಿ ಪಾರದರ್ಶಕತೆ ಕೊರತೆಯಿದೆ ಎಂದು ಆರೋಪಿಸಿರುವ ಅವರು, ರಸ್ತೆ ಗುಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ಸರ್ಕಾರ ಗಂಭೀರವಾಗಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರು ರಸ್ತೆ ಅಭಿವೃದ್ಧಿ ಮತ್ತು ಗುಂಡಿ ದುರಸ್ತಿಗೆ ಸಂಬಂಧಿಸಿದಂತೆ ವಿವಿಧ ಹಂತಗಳಲ್ಲಿ ಘೋಷಿಸಿರುವ ಅನುದಾನಗಳ ಕುರಿತು ಸ್ಪಷ್ಟತೆ ಇಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಸರ್ಕಾರವನ್ನು ಟೀಕಿಸಿದ್ದಾರೆ. ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ವಿವಿಧ ಸಚಿವರು ಬೇರೆ ಬೇರೆ ಸಂದರ್ಭಗಳಲ್ಲಿ ಘೋಷಿಸಿರುವ ಹಣಕಾಸು ಮೊತ್ತಗಳಲ್ಲಿ ಗೊಂದಲವಿದೆ ಎಂದು ಅವರು ಆರೋಪಿಸಿದ್ದಾರೆ.
1,225 ಕೋಟಿ, 1,700 ಕೋಟಿ, 1,900 ಕೋಟಿ, 450 ಕೋಟಿ, 7 ಕೋಟಿ, 12 ಕೋಟಿ, 750 ಕೋಟಿ, 1,100 ಕೋಟಿ, 2,200 ಕೋಟಿ, 4,000 ಕೋಟಿ, 1,241 ಕೋಟಿ ಹಾಗೂ 4,800 ಕೋಟಿ ಮತ್ತು 5,500 ಕೋಟಿ ರೂಪಾಯಿಗಳಂತಹ ವಿಭಿನ್ನ ಮೊತ್ತಗಳನ್ನು ಉಲ್ಲೇಖಿಸಿರುವ ಅವರು, ಇವೆಲ್ಲವೂ ಒಂದೇ ಯೋಜನೆಯ ಭಾಗವೇ ಅಥವಾ ಪ್ರತ್ಯೇಕ ಯೋಜನೆಗಳೇ ಎಂಬ ಬಗ್ಗೆ ಜನರಿಗೆ ಸ್ಪಷ್ಟ ಮಾಹಿತಿ ನೀಡಬೇಕಾಗಿದೆ ಎಂದು ಹೇಳಿದ್ದಾರೆ.
ತೆರಿಗೆದಾರರ ಹಣ ಎಲ್ಲಿಗೆ ಹೋಗುತ್ತಿದೆ ಎಂಬುದರ ಬಗ್ಗೆ ಸರ್ಕಾರ ಉತ್ತರ ನೀಡಬೇಕು ಎಂದು ಆಗ್ರಹಿಸಿರುವ ಸೂರ್ಯ, ಅನುದಾನ ಬಳಕೆಯಲ್ಲಿ ಪಾರದರ್ಶಕತೆಯ ಅಗತ್ಯವಿದೆ ಎಂದು ಒತ್ತಾಯಿಸಿದ್ದಾರೆ. ರಸ್ತೆ ಅಭಿವೃದ್ಧಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಅವರು ಮತ್ತೊಮ್ಮೆ ಸರ್ಕಾರವನ್ನು ಕೇಳಿಕೊಂಡಿದ್ದಾರೆ.
ಸಚಿವ ಕೃಷ್ಣ ಬೈರೇಗೌಡ ಅವರನ್ನು ಭೇಟಿ ಮಾಡಿ ಬೆಂಗಳೂರಿನ ಅಭಿವೃದ್ಧಿ ಹಾಗೂ ನಾಗರಿಕರ ಜೀವನಮಟ್ಟ ಸುಧಾರಣೆಗೆ ಸಂಬಂಧಿಸಿದ 15 ಪ್ರಮುಖ ವಿಷಯಗಳ ಕುರಿತು ವಿಸ್ತೈತ ಚರ್ಚೆ ನಡೆಸಿದ್ದೇನೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.
ನಗರದ ಅಭಿವೃದ್ಧಿಗೆ ಅಗತ್ಯವಾದ ಕ್ರಮಗಳಿಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಶೇ. 100ರಷ್ಟು ಸಹಕಾರ ಮತ್ತು ಬೆಂಬಲ ನೀಡಲಾಗುವುದು ಎಂದು ಭರವಸೆ ನೀಡಿರುವ ಅವರು, ಅಭಿವೃದ್ಧಿ ಯೋಜನೆಗಳ ಕುರಿತು ಅಂಕಿ- ಅಂಶಗಳ ಸಮೇತ ಸಚಿವರಿಗೆ ವಿವರವಾದ ಮಾಹಿತಿ ಸಲ್ಲಿಸಿದ್ದೇನೆ ಎಂದರು. ರಾಜ್ಯ ಸರ್ಕಾರದ 30ಕ್ಕೂ ಹೆಚ್ಚು ಯೋಜನೆಗಳು ಇನ್ನೂ ಬಾಕಿ ಉಳಿದಿದ್ದು, ಹೊಸ ಯೋಜನೆಗಳನ್ನು ಘೋಷಿಸುವುದಕ್ಕಿಂತ ಮೊದಲು ಈಗಾಗಲೇ ಆರಂಭವಾಗಿರುವ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಸಲಹೆ ನೀಡಿರುವುದಾಗಿ ಹೇಳಿದರು.
ಬೆಂಗಳೂರು ನಗರದಲ್ಲಿ ಬಿಎಂಆರ್ ಸಿಎಲ್, ಬಿಡಿಎ, ಬಿಎಂಎಲ್ ಟಿಎ, ಕೆಆರ್ ಐಡಿಎಲ್ ಸೇರಿದಂತೆ 12ಕ್ಕೂ ಹೆಚ್ಚು ಮೂಲಸೌಕರ್ಯ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಆದರೆ ಇವುಗಳ ನಡುವೆ ಸಮನ್ವಯ ಸಾಧಿಸುವ ಕೇಂದ್ರಿತ ವ್ಯವಸ್ಥೆಯ ಕೊರತೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಹಿನ್ನೆಲೆಯಲ್ಲಿ ಬಿಎಂಎಲ್ ಟಿಎಗೆ ಅಧ್ಯಕ್ಷರನ್ನು ನೇಮಿಸಿ ಅದನ್ನು ನೋಡಲು ಏಜೆನ್ಸಿಯಾಗಿ ಕಾರ್ಯನಿರ್ವಹಿಸುವಂತೆ ಮಾಡಬೇಕು ಎಂದು ಅವರು ಒತ್ತಾಯಿಸಿದರು. ಮೆಟ್ರೋ ವಿಸ್ತರಣೆ, ರಸ್ತೆ ಗುಂಡಿನ ದುರಸ್ತಿ, ಪಾದಚಾರಿ ಮಾರ್ಗಗಳ ಅಭಿವೃದ್ಧಿ ಸೇರಿದಂತೆ ಹಲವು ಪ್ರಮುಖ ನಗರ ಮೂಲಸೌಕರ್ಯ ವಿಷಯಗಳ ಕುರಿತು ಸಚಿವರೊಂದಿಗೆ ಚರ್ಚಿಸಲಾಗಿದೆ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.
Also Read:
ವಿದ್ಯುತ್ ನೀಡುವ ಡ್ಯಾಂ, ಆದರೆ ಕಚೇರಿಯಲ್ಲಿ ಕತ್ತಲೆ: ಹಿಡಕಲ್ ಡ್ಯಾಂ ನ ವಿಚಿತ್ರ ಸ್ಥಿತಿ