Belagavi News:
ಬಿಡದಿ ಟೌನ್ ಶಿಪ್ ಯೋಜನೆ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ !
ರಾಮನಗರ ಜಿಲ್ಲೆಯ ಬೈರಮಂಗಲ ಗ್ರಾಮದಲ್ಲಿ ರೈತರು ಹಾಗೂ ಮಹಿಳೆಯರು ಡೌನ್ ಶಿಪ್ ಮ್ಯಾಪ್ ಮೇಲೆ ರಕ್ತದ ಹನಿ ಸುರಿಸಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
"ಇಂದು ರಕ್ತ ಕೊಟ್ಟಿದೇವೆ.. ಅಗತ್ಯ ಬಂದರೆ ಮುಂದೆ ಪ್ರಾಣವನ್ನು ಕೊಡುತ್ತೇವೆ. ಆದರೆ ನಮ್ಮ ಭೂಮಿಯನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ" ಎಂದು ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡಿದ್ದಾರೆ.
ಬಿಡದಿ ಟೌನ್ ಶಿಪ್ ವಿರೋಧದ ಹೋರಾಟ ದಿನದಿಂದ ದಿನಕ್ಕೆ ಮತ್ತಷ್ಟು ತೀವ್ರಗೊಳ್ಳುತ್ತಿದ್ದು. ರೈತರ ಮುಂದಿನ ನಡೆ ಏನಾಗಲಿದೆ ಎಂಬುದರತ್ತ ಎಲ್ಲರ ಗಮನ ನೆಟ್ಟಿದೆ.
ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಬೆಂಬಲ ಸೂಚಿಸಿದ್ದು, ಪ್ರತಿಭಟನಾ ಸ್ಥಳದಲ್ಲೇ ಸರ್ಕಾರಕ್ಕೆ ಮನವಿ ಪತ್ರ ಬರೆದು ರೈತರ ಪರ ನಿಂತರು.
ಅಭಿವೃದ್ಧಿ ಹೆಸರಿನಲ್ಲಿ ರೈತರ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಬಾರದು ಎಂದು ಮನವಿ ಮಾಡಿದ ಅವರು, ರೈತರ ಅಭಿಪ್ರಾಯವನ್ನು ಕಡೆಗಣಿಸಿ ಯಾವುದೇ ಭೂಸ್ವಾಧೀನ ಪ್ರಕ್ರಿಯೆ ನಡೆಸಿದಂತೆ ಸರ್ಕಾರವನ್ನು ಆಗ್ರಹಿಸಿದರು. ಅಭಿವೃದ್ಧಿ ಯೋಜನೆಗಳ ಜಾರಿಯಲ್ಲಿ ರೈತರ ಹಕ್ಕುಗಳು ಮತ್ತು ಬದುಕಿಗೆ ಧಕ್ಕೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾ ಸ್ಥಳದಲ್ಲಿ ಮಾತನಾಡಿದ ಸಂತೋಷ್ ಹೆಗ್ಡೆ, ಆರೋಗ್ಯ ಸಮಸ್ಯೆಯಿಂದ ವೈದ್ಯರು ಮನೆಯಿಂದ ಹೊರ ಬರದಂತೆ ಸಲಹೆ ನೀಡಿದ್ದರೂ, ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿರುವುದನ್ನು ಕಂಡು ತಾವು ಸ್ಥಳಕ್ಕೆ ಬಂದಿರುವುದಾಗಿ ಹೇಳಿದರು.
" ಕೃಷಿಯಿಲ್ಲದೆ ಅಭಿವೃದ್ಧಿ ಸಾಧ್ಯವಿಲ್ಲ. ಎಷ್ಟೇ ಆಧುನಿಕ ತಂತ್ರಜ್ಞಾನ ಅಥವಾ ಕೃತಕ ಬುದ್ಧಿಮತ್ತೆ (AI) ಬಂದರು ಕೃಷಿ ಇಲ್ಲದೆ ಜನರ ಹೊಟ್ಟೆ ತುಂಬುವುದಿಲ್ಲ. ಕೃಷಿ ಕ್ಷೀಣಿಸಿದರೆ ಮುಂದಿನ ದಿನಗಳಲ್ಲಿ ಗಂಭೀರ ಪರಿಸ್ಥಿತಿ ಎದುರಾಗಬಹುದು," ಎಂದು ಆತಂಕ ವ್ಯಕ್ತಪಡಿಸಿದರು.
ನಗರ ಪ್ರದೇಶಗಳಲ್ಲಿ ಕೆರೆಗಳನ್ನು ಮುಚ್ಚಿ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಇಂತಹ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವಾಗ ಸರ್ಕಾರ ದೂರದೃಷ್ಟಿಯಿಂದ ಯೋಚಿಸಬೇಕು ಎಂದರು. " ಅಭಿವೃದ್ಧಿ ಬೇಕು, ಆದರೆ ಅದಕ್ಕಾಗಿ ಕೃಷಿಭೂಮಿಯನ್ನು ನಾಶ ಮಾಡುವುದು ಸರಿಯಲ್ಲ. ರೈತರ ಕಷ್ಟ ಅರ್ಥವಾಗದಿದ್ದರೆ ಆಡಳಿತ ನಡೆಸುವುದರ ಅರ್ಥವೇನು? ಎಂದು ಪ್ರಶ್ನಿಸಿದರು.
ಸರ್ಕಾರ ಮರಗಳಿಗೆ ಪರಿಹಾರ ನಿಗದಿ ಮಾಡಬಹುದು, ಆದರೆ ಒಂದು ಮರ ಬೆಳೆಯಲು ಬೇಕಾಗುವ ವರ್ಷಗಳನ್ನು ಹಿಂದಿರುಗಿಸಲು ಸಾಧ್ಯವಿಲ್ಲ ಎಂದು ಹೇಳಿದವರು ರೈತರ ಜೀವನೊಪಾಯ ಕಸಿದು ಬೇರೆ ಉದ್ಯೋಗ ನೀಡುವುದು ನ್ಯಾಯಸಮ್ಮತವಲ್ಲ ಎಂದು ಅಭಿಪ್ರಾಯಪಟ್ಟರು.
" ನಾನು ಇರುವವರೆಗೂ ರೈತರ ಹೋರಾಟಕ್ಕೆ ಬೆಂಬಲ ನೀಡುತ್ತೇನೆ. ಮೊದಲು ರೈತರನ್ನು ರಕ್ಷಿಸಿ, ನಂತರ ಅಭಿವೃದ್ಧಿಯ ಬಗ್ಗೆ ಯೋಚಿಸಿ. ಅಭಿವೃದ್ಧಿ ಹೆಸರಿನಲ್ಲಿ ಕೃಷಿ ಭೂಮಿಯನ್ನು ಹಾಳು ಮಾಡಬೇಡಿ," ಎಂದು ಸಂತೋಷ್ ಹೆಗ್ಡೆ ಸರ್ಕಾರಕ್ಕೆ ಮನವಿ ಮಾಡಿದರು.
Also Read:
ಚಂಡೀಗಢ ಕೊಲೆ ಪ್ರಕರಣದಲ್ಲಿ ಪಾಕಿಸ್ತಾನ ಸಂಪರ್ಕ ಶಂಕೆ: ಮೂವರು ಅರೆಸ್ಟ್