Belagavi News:
ನವದೆಹಲಿ: ವಿದ್ಯಾರ್ಥಿಗಳು ಹಾಗೂ ಯುವಕರ ಮೇಲೆ ಪೊಲೀಸರು ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ, ಪೊಲೀಸ್ ಕಿರುಕುಳ ಮುಂದುವರಿದರೆ ದೇಶಾದ್ಯಂತ ಬೃಹತ್ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ತಮ್ಮ ಎಕ್ಸ್(X) ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳನ್ನು ಅನಗತ್ಯವಾಗಿ ಗುರಿಯಾಗಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕು ಇದ್ದು, ಅದನ್ನು ಹತ್ತಿಕ್ಕುವ ಯಾವುದೇ ಕ್ರಮವನ್ನು ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.
"ಪೊಲೀಸರ ಕಿರುಕುಳ ಮುಂದುವರಿದರೆ ವಿದ್ಯಾರ್ಥಿಗಳು ಮತ್ತು ಯುವಕರೊಂದಿಗೆ ಸೇರಿ ದೇಶದ್ಯಂತ ಮತ್ತೆ ಬೃಹತ್ ಶಾಂತಿಯುತ ಚಳುವಳಿಯನ್ನು ಆರಂಭಿಸಲಾಗುವುದು" ಎಂದು ದಿಪ್ಕೆ ಎಚ್ಚರಿಸಿದ್ದಾರೆ.
ವಿದ್ಯಾರ್ಥಿಗಳ ಧ್ವನಿ ಕೇಳಬೇಕು: ಸಿಜೆಪಿ
ವಿದ್ಯಾರ್ಥಿಗಳ ವಿರುದ್ಧ ಆಯ್ದ ಕ್ರಮ ಕೈಗೊಳ್ಳುವುದನ್ನು ನಿಲ್ಲಿಸುವಂತೆ ಆಗ್ರಹಿಸಿರುವ ದಿಪ್ಕೆ , ವಿದ್ಯಾರ್ಥಿಗಳು ದೇಶದ ಭವಿಷ್ಯವಾಗಿದ್ದು, ಅವರ ಸಮಸ್ಯೆಗಳನ್ನು ಸಂವಾದದ ಮೂಲಕ ಪರಿಹರಿಸಬೇಕು ಎಂದು ಹೇಳಿದ್ದಾರೆ. ಶಾಂತಿಯುತ ಪ್ರತಿಭಟನೆ ನಡೆಸುವ ವಿದ್ಯಾರ್ಥಿಗಳನ್ನು ಬೆದರಿಸುವ ಬದಲು ಅವರ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಸರ್ಕಾರ ಭರವಸೆ ಉಳಿಸಿಕೊಳ್ಳಲಿ : ಸೌರವ್ ದಾಸ್
ಸಿಜೆಪಿ ವಕ್ತಾರ ಸೌರವ್ ದಾಸ್ ಕೂಡ ಎಕ್ಸ್ ಪೋಸ್ಟ್ ಮೂಲಕ ಪ್ರತಿಕ್ರಿಯಿಸಿದ್ದು, ಜುಲೈ 25ರಂದು ಕೇಂದ್ರ ಸರ್ಕಾರ ಪ್ರತಿಭಟನಾಕಾರರ ವಿರುದ್ಧ ದಾಖಲಾದ ಎಲ್ಲಾ ಎಫ್ಐಆರ್ ಗಳನ್ನು ಹಿಂಪಡೆಯುವುದಾಗಿ ಹಾಗೂ ಯಾರನ್ನೂ ಗುರಿಯಾಗಿಸುವುದಿಲ್ಲ ಎಂದು ಭರವಸೆ ನೀಡಿತ್ತು ಎಂದು ತಿಳಿಸಿದ್ದಾರೆ.
"ಆ ಭರವಸೆಯ ಆಧಾರದ ಮೇಲೆಯೇ ನಾವು ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದೆವು. ಆದರೆ ಈಗ ಸುಪ್ರೀಂ ಕೋರ್ಟ್ ಆದೇಶವನ್ನು ನೇಪವಾಗಿಸಿಕೊಂಡು ಕೇಂದ್ರ ಸರಕಾರ ಹಾಗೂ ಬಿಜೆಪಿ ಆಡಳಿತದ ರಾಜ್ಯಗಳು ಪ್ರತಿಭಟನಕಾರರಿಗೆ ಕಿರುಕುಳ ನೀಡುವ ಸಾಧ್ಯತೆ ಇದೆ. ಸರ್ಕಾರ ತನ್ನ ಎಲ್ಲಾ ಭರವಸೆಗಳನ್ನು ಈಡೇರಿಸಿ ವಿದ್ಯಾರ್ಥಿಗಳ ವಿರುದ್ಧದ ಎಫ್ಐಆರ್ ಗಳನ್ನು ಹಿಂಪಡೆಯಬೇಕು" ಎಂದು ಅವರು ಆಗ್ರಹಿಸಿದ್ದಾರೆ.
ಸರ್ಕಾರ ತನ್ನ ಮಾತು ತಪ್ಪಿದರೆ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಗೆ ಭರವಸೆ ನೀಡದಿದ್ದರೆ, ದೇಶಾದ್ಯಂತ ಮತ್ತೆ ಶಾಂತಿಯುತ ಪ್ರತಿಭಟನೆಗಳನ್ನು ಆರಂಭಿಸಲಾಗುವುದು ಎಂದು ಸಿಜೆಪಿ ಸ್ಪಷ್ಟಪಡಿಸಿದೆ.