belagavi news :
ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಹರಿದಾಡುತ್ತಿರುವ ಸುಳ್ಳು ಸುದ್ದಿಗಳು ಹಾಗೂ ವಿಪಕ್ಷಗಳು ಹಬ್ಬಿಸುತ್ತಿರುವ ವದಂತಿಗಳಿಗೆ ಸಾರ್ವಜನಿಕರು ಕಿವಿ ಕೊಡಬಾರದು ಎಂದು ಅವರು ಮನವಿ ಮಾಡಿದ್ದಾರೆ.
ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟತೆ ನೀಡಿರುವ ಅವರು,ಕೆಲವರು ಮೃತರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬ್ಯಾಂಕ್ ಖಾತೆ ತೆರೆದು ಯೋಜನೆಗಳ ಸೌಲಭ್ಯ ಪಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿರುವುದರಿಂದ ಫಲಾನುಭವಿಗಳ ಮರುದೃಢೀಕರಣ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಫಲಾನುಭವಿಗಳ ಹೆಸರು, ವಿಳಾಸ, ಬ್ಯಾಂಕ್ ಖಾತೆ ಸಂಖ್ಯೆ ಸೇರಿದಂತೆ ಅಗತ್ಯ ಮಾಹಿತಿಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಮತ್ತೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಇದನ್ನು ಯೋಜನೆಗಳನ್ನು ನಿಲ್ಲಿಸುವ ಕ್ರಮ ಎಂದು ತಪ್ಪಾಗಿ ಅರ್ಥೈಸಬಾರದು ಎಂದು ಅವರು ಹೇಳಿದ್ದಾರೆ.
ರಾಜ್ಯದ ಎಲ್ಲಾ ಗ್ಯಾರಂಟಿ ಯೋಜನೆಗಳು ಶೇ.೧೦೦ರಷ್ಟು ಮುಂದುವರೆಯಲಿದ್ದು,ಯಾವುದೇ ಫಲಾನುಭವಿಯು ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಯೋಜನೆಗಳ ಪಾರದರ್ಶಕ ಅನುಷ್ಠಾನ ಮತ್ತು ನೈಜ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಓಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಶನಿವಾರ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಮಾಧ್ಯಮಗೋಷ್ಟಿ ನಡೆಸಿ ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳ ಕುರಿತು ಮಹತ್ವದ ಮಾಹಿತಿ ನೀಡಿದರು.
ಗ್ಯಾರಂಟಿ ಯೋಜನೆಗಳ ಲಾಭ ಕೇವಲ ನೈಜ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಮಾಡಲು ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿ ಯೋಜನೆಗಳ ಫಲಾನುಭವಿಗಳು ಮತ್ತೊಮ್ಮೆ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು. ಈ ಪ್ರಕ್ರಿಯೆ ಮೂಲಕ ಫಲಾನುಭವಿಗಳ ಮಾಹಿತಿಯನ್ನು ಪರಿಶೀಲಿಸಿ, ಅನರ್ಹರನ್ನು ಕೈ ಬಿಡಲಾಗುವುದು ಎಂದರು.
ಗೃಹಲಕ್ಷ್ಮಿ ಯೋಜನೆಯಲ್ಲಿ ಅನಾರರು ಸುಮಾರು ೧೦೦ ಕೋಟಿ ರೂ.ಗಳಷ್ಟು ಹಣ ಪಡೆದಿರುವುದು ತನಿಕೆಯಲ್ಲಿ ಪತ್ತೆಯಾಗಿದೆ ಎಂದು ಸಿಎಂ ಹೇಳಿದರು. ಕೆಲವು ಪ್ರಕರಣಗಳಲ್ಲಿ ನೀಡಿರುವ ದೂರವಾಣಿ ಸಂಖ್ಯೆಗೆ ಕರೆ ಮಾಡಿದಾಗ ಬೇರೆ ಮನೆಗಳಿಂದ ಸಂಪರ್ಕವಾಗುತ್ತಿದೆ.ಜೊತೆಗೆ ಯೋಜನೆಯ ಹಣ ಯಾವ ಬ್ಯಾಂಕ್ ಖಾತೆಗೆ ಜಮೆಯಾಗುತ್ತಿದೆ,ಅದು ನಿಜವಾದ ಅರ್ಹ ಫಲಾನುಭವಿಗಳಿಗೆ ತಲುಪುತ್ತಿದೆಯೇ ಅಥವಾ ಬೇರೆ ಉದ್ದೇಶಗಳಿಗೆ ಬಳಕೆಯಾಗುತ್ತಿದೆ ಎಂಬುದನ್ನು ಪರಿಶೀಲಿಸುವ ಅಗತ್ಯವಿದೆ ಎಂದು ವಿವರಿಸಿದರು.
ಈ ಕಾರಣದಿಂದ ಫಲಾನುಭವಿಗಳಿಂದ ಮರು ಅರ್ಜಿ ಪಡೆಯಲಾಗುವುದು.ಆದರೆ ಗ್ಯಾರಂಟಿ ಯೋಜನೆಗಳ ಹಣವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯೋಜನೆಯ ನೆರವು ಮನೆಯ ಅರವ ಯಜಮಾನಿಗೆ ತಲುಪಬೇಕು ಮತ್ತು ಸಾರ್ವಜನಿಕರ ಹಣದ ದುರುಪಯೋಗಕ್ಕೆ ಕಡಿವಾಣ ಹಾಕುವುದು ಸರ್ಕಾರದ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಗೃಹ ಜ್ಯೋತಿ ಫಲಾನುಭವಿಗಳ ಮರುಪರಿಶೀಲನೆ;ಅರ್ಹರಿಗೆ ಮಾತ್ರ ಸೌಲಭ್ಯ:ಸಿಎಂ
ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಸರ್ಕಾರ ಕ್ರಮ ಕೈಗೊಂಡಿದ್ದು,ಮನೆ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಿ ಅಗತ್ಯ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಪ್ರಸ್ತುತ ಗೃಹ ಜ್ಯೋತಿ ಯೋಜನೆಯಡಿ ಸುಮಾರು 1.64 ಲಕ್ಷ ಫಲಾನುಭವಿಗಳಿದ್ದು, ಅದರಲ್ಲಿ ನಿಜವಾದ ಫಲಾನುಭವಿಗಳು ಯಾರು? ಹಾಗೂ ಯೋಜನೆಗೆ ಅರ್ಹರು ಯಾರು ಎಂಬುದನ್ನು ಖಚಿತಪಡಿಸಿಕೊಳ್ಳಲು ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.ಕೆಲವು ಕಡೆಗಳಲ್ಲಿ ಗೃಹ ಜ್ಯೋತಿ ಯೋಜನೆಯ ಸೌಲಭ್ಯವನ್ನು ಗೃಹ ಬಳಕೆಯ ಜೊತೆಗೆ ವಾಣಿಜ್ಯ ಉದ್ದೇಶಗಳಿಗೂ ಬಳಸುತ್ತಿರುವ ಮಾಹಿತಿ ಲಭ್ಯವಾಗಿದೆ ಎಂದು ತಿಳಿಸಿದರು.
ಹಿನ್ನೆಲೆಯಲ್ಲಿ ಫಲಾನುಭವಿಗಳಿಗೆ ಹೊಸ ಅರ್ಜಿಯನ್ನು ನೀಡುವ ಪ್ರಕ್ರಿಯೆ ಆರಂಭಿಸಲಾಗಿದ್ದು, ಅದರ ಮೂಲಕ ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ ಪರಿಶೀಲನೆ ನಡೆಸಲಾಗುತ್ತದೆ.ಮರು ದೃಢೀಕರಣದ ಬಳಿಕ ಅರ್ಹರಿಗೆ ಮಾತ್ರ ಯೋಜನೆಯ ಸೌಲಭ್ಯ ತಲುಪುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.
Also Read:
ಕೊನೆಗೂ ಬಂದ ಜಯ! 36 ವರ್ಷಗಳ ಬಳಿಕ ಫಿಫಾ ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್ ಗೆ ಗೆಲುವು!