Belagavi News:
ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಕುರಿತು ಕೇಂದ್ರದ ಆಯೋಗವೇ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ಮಾಜಿ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಮಾಡಿದ್ದ ಆರೋಪಿಗಳಿಗೆ ಪ್ರತಿಕ್ರಿಯಿಸಿ, ಗೃಹಲಕ್ಷ್ಮಿ ಯೋಜನೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಮಹತ್ವದ ಕೊಡುಗೆ ನೀಡಿದೆ ಎಂದು ಹೇಳಿದರು.
" ಗೃಹಲಕ್ಷ್ಮಿ ಯೋಜನೆ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ನೆರವಾಗಿರುವ ವಿಶ್ವಮಟ್ಟದ ಮಾದರಿ ಕಾರ್ಯಕ್ರಮವಾಗಿದೆ. ಕರ್ನಾಟಕದಲ್ಲಿ ಜಾರಿಗೆ ತಂದ ಈ ಯೋಜನೆಯ ಮಾದರಿಯನ್ನು ದೇಶದ ಹಲವು ರಾಜ್ಯಗಳು ಅನುಸರಿಸುತ್ತಿವೆ. ಕರ್ನಾಟಕ ಮಾದರಿಯನ್ನು ಇತರರು ಅಳವಡಿಸಿಕೊಂಡಿರುವುದು ಎಲ್ಲರಿಗೂ ತಿಳಿದಿರುವ ವಿಚಾರ," ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು, ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಇಲ್ಲಿಂದ 11 ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ. ಜಿಲ್ಲೆಗೆ ಇನ್ನೂ ಎರಡು ಸಚಿವ ಸ್ಥಾನಗಳು ಸಿಗುವ ನಿರೀಕ್ಷೆಯಿದೆ ಎಂದು ತಿಳಿಸಿದರು. ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಯಾವಾಗ ಸಿಹಿ ಸುದ್ದಿ ಸಿಗಲಿದೆ ಎಂಬ ಪ್ರಶ್ನೆಗೆ, ಈ ಬಗ್ಗೆ ಮುಖ್ಯಮಂತ್ರಿಗಳನ್ನೇ ಕೇಳಿ ಎಂದು ಪ್ರತಿಕ್ರಿಯಿಸಿದರು.
ಬಿಜೆಪಿ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದ ಹೆಬ್ಬಾಳ್ಕರ್, ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗಗಳ ಅಭಿವೃದ್ಧಿಗೆ ಒತ್ತು ನೀಡಬೇಕಿದ್ದು , ಬೆಳಗಾವಿ ರಾಜ್ಯದ ಪ್ರಮುಖ ನಗರವಾಗಿರುವುದರಿಂದ ಕೈಗಾರಿಕೆಗಳ ಬೆಳವಣಿಗೆ ಹಾಗೂ ಉದ್ಯಮ ಸೃಷ್ಟಿಗೆ ಹೆಚ್ಚಿನ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.
ಗೋವಾ ಹಾಗೂ ಮುಂಬೈಗೆ ಸಮೀಪದಲ್ಲಿರುವ ಬೆಳಗಾವಿಗೆ ಹೆಚ್ಚಿನ ಕೈಗಾರಿಕೆಗಳು ಬಂದರೆ ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ವೇಗ ಸಿಗಲಿದೆ ಎಂದು ಅವರು ಅಭಿಪ್ರಾಯ ಪಟ್ಟರು.
ಇದೇ ವೇಳೆ ಬೆಳಗಾವಿ ಜಿಲ್ಲೆ ವಿಭಜನೆ ವಿಚಾರ ಸದ್ಯಕ್ಕೆ ಅಪ್ರಸ್ತುವಾಗಿದ್ದು, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೊಂದಿಗೆ ಈ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ರಾಜ್ಯ ಹಾಗೂ ಬೆಳಗಾವಿ ಜಿಲ್ಲೆಯ ಜನರು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದು ಅವರು ಜನರ ವಿಶ್ವಾಸವನ್ನು ಹುಸಿ ಮಾಡುವುದಿಲ್ಲ ಎಂಬ ನಂಬಿಕೆ ಇದೆ ಎಂದು ಹೆಬ್ಬಾಳ್ಕರ್ ಹೇಳಿದರು.
Also Read:
ಡಿ.ಕೆ. ಶಿವಕುಮಾರ್ ಸ್ವಾಗತಕ್ಕೆ ಬೆಳಗಾವಿ ಸಜ್ಜು: ಕಾಂಗ್ರೆಸ್ ನಲ್ಲಿ ಸಂಭ್ರಮದ ವಾತಾವರಣ