Belagavi News:
ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ತಾಲೂಕಿನ ಮುತ್ತೋಡಿ ಪ್ರಾದೇಶಿಕ ವಲಯ ವ್ಯಾಪ್ತಿಯ ಖಾಸಗಿ ಕಾಫಿ ತೋಟದಲ್ಲಿ ಗಂಡು ಹುಲಿಯ ಮೃತ ದೇಹ ಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಸೋಮವಾರ ಸಂಜೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ದೊರೆತ ಬಳಿಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು 8 ವರ್ಷದ ಗಂಡು ಹುಲಿ ಗುರುತಪಟ್ಟಿದ್ದು. ಸಾವು ಸಂಭವಿಸಿ ಸುಮಾರು ಒಂದು ದಿನ ಕಳೆದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹುಲಿಯ ದೇಹದಲ್ಲಿ ಗಾಯಗಳಿರುವ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು, ನಿಖರ ಸಾವಿನ ಕಾರಣ ಇನ್ನೂ ದೃಢಪಟ್ಟಿಲ್ಲ. ಪ್ರಾಬಲ್ಯಕ್ಕಾಗಿ ಮತ್ತೊಂದು ಹುಲಿಯೊಂದಿಗೆ ನಡೆದ ಕಾದಾಟ, ಅಥವಾ ಇತರ ಕಾರಣಗಳಿಂದ ಸಾವಾಗಿರಬಹುದೇ ಎಂಬ ಎಲ್ಲಾ ಆಯಾಮಗಳಿಂದ ತನಿಖೆ ಮುಂದುವರಿದಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದಿಂದ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು. ಕೇಂದ್ರ ಸರ್ಕಾರದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA) ಮಾರ್ಗಸೂಚಿಯಂತೆ ಮಂಗಳವಾರ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ. ವರದಿ ಬಂದ ಬಳಿಕವೇ ಹುಲಿಯ ಸಾರಿಗೆ ನಿಖರ ಕಾರಣವೇನು ಎಂಬುದು ಸ್ಪಷ್ಟವಾಗಲಿದೆ.
ಘಟನೆಯ ಹಿನ್ನೆಲೆಯಲ್ಲಿ ಹಿರಿಯ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಪ್ರಕರಣದ ಕುರಿತು ತನಿಖೆ ಆರಂಭಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖಾಸಗಿ ಮಾಧ್ಯಮ ಒಂದಕ್ಕೆ ಪ್ರತಿಕ್ರಿಯೆ ನೀಡಿದರು, "ಮುತ್ತೋಡಿ ಅಭಯಾರಣ್ಯದ ಸಮೀಪದ ಹೊಸ ತೋಟದಲ್ಲಿ ಗಂಡು ಹುಲಿ ಮೃತಪಟ್ಟಿರುವ ಮಾಹಿತಿ ದೊರೆತ ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕವಾಗಿ ಎರಡು ಹುಲಿಗಳ ನಡುವೆ ನಡೆದ ಕಾದಾಟದಿಂದ ಈ ಘಟನೆ ಸಂಭವಿಸಿರಬಹುದು ಎಂಬ ಅನುಮಾನವಿದೆ. ಆದರೆ ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ" ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA) ಮಾರ್ಗಸೂಚಿಯಂತೆ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು, ಅದರ ವರದಿ ಬಂದ ಬಳಿಕವೇ ಸಾವಿನ ಹಿಂದಿನ ನಿಖರ ಕಾರಣ ಸ್ಪಷ್ಟವಾಗಲಿದೆ. ಅರಣ್ಯ ಇಲಾಖೆ ಈಗಾಗಲೇ ಘಟನೆ ಸ್ಥಳದಿಂದ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ತನಿಖೆಯನ್ನು ಮುಂದುವರಿಸಿದೆ.
ಇದೆ ವೇಳೆ, ಹುಲಿಯ ಸಾವು ಗಂಭೀರ ವಿಷಯವಾಗಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ವನ್ಯಜೀವಿ ಪ್ರೇಮಿಗಳು ಆಗ್ರಹಿಸಿದ್ದಾರೆ. ಯಾವುದೇ ಅಕ್ರಮ, ವಿಷಪ್ರಯೋಗ ಅಥವಾ ನಿರ್ಲಕ್ಷ್ಯ ಕಂಡು ಬಂದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ವ್ಯಕ್ತವಾಗಿದೆ.
ಇತ್ತೀಚೆಗಷ್ಟೆ ಮೈಸೂರು ಜಿಲ್ಲೆಯ ಹೆಚ್ .ಡಿ . ಕೋಟೆ ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮೇಟಿಕುಪ್ಪೆ ವನ್ಯಜೀವಿ ವಲಯದಲ್ಲೂ ಮೂರು ವರ್ಷದ ಗಂಡು ಹುಲಿ ಉರುಳಿಗೆ ಸಿಲುಕಿ ಮೃತಪಟ್ಟಿತ್ತು. ಆ ಪ್ರಕರಣದಲ್ಲಿ ಅರಣ್ಯ ಇಲಾಖೆ ತನಿಖೆ ನಡೆಸಿ ಜಮೀನಿನ ಮಾಲೀಕರ ವಿರುದ್ಧ ದೂರು ದಾಖಲಿಸಿತ್ತು. ಇದೀಗ ಚಿಕ್ಕಮಗಳೂರಿನ ಈ ಘಟನೆ ಕೊಡ ರಾಜ್ಯದಲ್ಲಿ ಹುಲಿಗಳ ಸಂರಕ್ಷಣೆ ಮತ್ತು ಮಾನವ-ವನ್ಯಜೀವಿ ಸಂಘರ್ಷದ ಕುರಿತು ಮತ್ತೆ ಚರ್ಚೆಗೆ ಕಾರಣವಾಗಿದೆ.