Belagavi news:
ತಿರುವನಂತಪುರಂ: ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ 10 ವರ್ಷಗಳ ಬಳಿಕ ಕೇರಳದಳಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿದೆ.
ತಿರುವನಂತಪುರಂ ಸೆಂಟ್ರಲ್ ಮೈದಾನದಲ್ಲಿ ನಡೆದ ಭವ್ಯ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೆಕರ್ ಅವರು ಸತೀಶನ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸತೀಶನ್ ಅವರು ಕೇರಳದ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವ ಭರವಸೆ ವ್ಯಕ್ತಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ 20 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಹೊಸ ಸಚಿವ ಸಂಪುಟ ರಚನೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಹೊಸ ಸರ್ಕಾರದ ಆಡಳಿತಾತ್ಮಕ ಕಾರ್ಯಾರಂಭ ಅಧಿಕೃತವಾಗಿ ಆರಂಭವಾಗಿದೆ.
ಕೇರಳದ ನೂತನ ಮುಖ್ಯಮಂತ್ರಿ ವಿ. ಡಿ. ಸತೀಶನ್ ಅವರ ಪ್ರಮಾಣವಚನ ಸಮಾರಂಭವು ಭಾರಿ ರಾಜಕೀಯ ಸಾನ್ನಿಧ್ಯದಲ್ಲಿ ಇಂದು ನಡೆಯಿತು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕರ ರಾಹುಲ್ ಗಾಂಧಿ, ವಯನಾಡ ಸಂಸದೆ ಪ್ರಿಯಾಂಕ ಗಾಂಧಿ ಸೇರಿದಂತೆ ಹಲವಾರು ಹಿರಿಯ ನಾಯಕರು ಭಾಗವಹಿಸಿದ್ದರು.
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಎಡಪಂಥೀಯ ನಾಯಕರು ಹಾಗೂ ಬಿಜೆಪಿ ಜನ ಪ್ರತಿನಿಧಿಗಳು ಕೂಡ ಸಮಾರಂಭದಲ್ಲಿ ಉಪಸ್ಥಿತರಿದ್ದರು. ವಿವಿಧ ರಾಜಕೀಯ ಪಕ್ಷಗಳ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡುದು ಕಾರ್ಯಕ್ರಮಕ್ಕೆ ವಿಶೇಷ ರಾಜಕೀಯ ಮಹತ್ವ ನೀಡಿತು.
ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿ, ಹೊಸ ಸರ್ಕಾರದ ಆರಂಭವನ್ನು ಸಂಭ್ರಮಿಸಿದರು. ಸಮಾರಂಭದ ಮೇಲೆ ರಾಜಕೀಯ ಒಗ್ಗಟ್ಟು ಹಾಗೂ ಸಹಕಾರದ ಸಂದೇಶವು ಸ್ಪಷ್ಟವಾಗಿ ವ್ಯಕ್ತವಾಯಿತು.
104 ಸದಸ್ಯ ಬಲದ ಕೇರಳ ವಿಧಾನಸಭೆಗೆ ಏಪ್ರಿಲ್ 9 ರಂದು ನಡೆದ ಚುನಾವಣೆ ಫಲಿತಾಂಶ ಮೇ 4ರಂದು ಪ್ರಕಟವಾಗಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ 102 ಸ್ಥಾನಗಳನ್ನು ಗೆದ್ದು ಭರ್ಜರಿ ಬಹುಮತ ಸಾಧಿಸಿದೆ. ಇನ್ನು ಕಳೆದ 10 ವರ್ಷಗಳಿಂದ ಆಡಳಿತ ನಡೆಸುತ್ತಿದ್ದ ಎಲ್ ಡಿಎಫ್ ಕೇವಲ 35 ಕ್ಷೇತ್ರಗಳಲ್ಲಿ ಮಾತ್ರ ಜಯ ಸಾಧಿಸಿದೆ. ಇದೇ ಮೊದಲ ಬಾರಿಗೆ 3 ಕ್ಷೇತ್ರಗಳಲ್ಲಿ ಬಿಜೆಪಿ ಗೆಲವು ದಾಖಲಿಸುವ ಮೂಲಕ ತನ್ನ ಖಾತೆ ತೆರೆದಿದೆ.
ಚುನಾವಣೆಯ ಬಳಿಕ ಮುಖ್ಯಮಂತ್ರಿ ವಿಚಾರವು ರಾಜ್ಯ ರಾಜಕೀಯದಲ್ಲಿ ಪ್ರಮುಖ ಚರ್ಚೆಯ ವಿಷಯವಾಗಿತ್ತು. ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಂಸದ ಕೆ. ಸಿ. ವೇಣುಗೋಪಾಲ್ ಮತ್ತು ಮಾಜಿ ಪ್ರತಿಪಕ್ಷ ನಾಯಕ ವಿ.ಡಿ. ಸತೀಶನ್ ನಡುವೆ ಸಿಎಂ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆದಿತ್ತು. ಹಲವು ದಿನಗಳ ಚರ್ಚೆ ಮತ್ತು ಹೈಕಮಾಂಡ್ ಮಟ್ಟದ ಸಮಾಲೋಚನೆಯ ನಂತರ ಫಲಿತಾಂಶ ಪ್ರಕಟವಾದ 11 ದಿನಗಳ ಬಳಿಕ ಸತೀಶನ್ ಅವರನ್ನು ಮುಖ್ಯಮಂತ್ರಿ ಆಗಿ ಅಧಿಕೃತವಾಗಿ ಘೋಷಿಸಲಾಯಿತು. ಈ ಬೆಳವಣಿಗೆ ಕೇರಳ ರಾಜಕೀಯದಲ್ಲಿ ಹೊಸ ಅಧ್ಯಾಯಕ್ಕೆ ದಾರಿ ಮಾಡಿ ಕೊಟ್ಟಿದ್ದು, ಯುಡಿಎಫ್ ಸರ್ಕಾರದ ಮುಂದಿನ ಆಡಳಿತದತ್ತ ಎಲ್ಲರ ಗಮನ ಸೆಳೆದಿದೆ.
Also Read: