belagavi news :
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಬಗ್ಗೆ ಕಾಂಗ್ರೆಸ್ ನಾಯಕರು ಅತಿಯಾದ ಅನುಕಂಪ ತೋರಿಸುತ್ತಿದ್ದು, ಅದರ ಹಿಂದೆ ರಾಜಕೀಯ ಉದ್ದೇಶ ಅಡಗಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಅನುಕಂಪದ ಅಸ್ತ್ರ ಪ್ರಯೋಗಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ತಗ್ಗಹಳ್ಳಿ ಗ್ರಾಮದಲ್ಲಿ ಸಿಎಸ್ಆರ್ ನಿಧಿಯಿಂದ ನಿರ್ಮಾಣಗೊಂಡ ನೂತನ ಸಾಲ ಕೊಠಡಿಗಳ ಉದ್ಘಾಟನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯಸಭೆ ಟಿಕೆಟ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಅನಗತ್ಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ದೇವೇಗೌಡರ ಬಗ್ಗೆ ಕಾಂಗ್ರೆಸ್ ಗೆ ಏಕಾಏಕಿ ಎಲ್ಲಿಲ್ಲದ ಅನುಕಂಪ ಬಂದಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು ತರಲು ನಡೆಸುತ್ತಿರುವ ಪ್ರಯತ್ನಗಳು ಫಲಿಸುವುದಿಲ್ಲ ಎಂದು ಅವರು ಹೇಳಿದರು.
ರಾಜ್ಯಸಭೆ ಟಿಕೆಟ್ಗೆ ದೇವೇಗೌಡರು ಅರ್ಜಿಯನ್ನೇ ಸಲ್ಲಿಸಿಲ್ಲ ಎಂದು ಸ್ಪಷ್ಟಪಡಿಸಿದ ಕುಮಾರಸ್ವಾಮಿ, ಕಾಂಗ್ರೆಸ್ ತನ್ನ ವೈಫಲ್ಯಗಳು ಮತ್ತು ಆಂತರಿಕ ಬೆಳವಣಿಗೆಗಳಿಂದ ಜನರ ಗಮನ ಬೇರೆ ಸೆಳೆಯಲು ದೇವೇಗೌಡರನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
"ದೇವೇಗೌಡರ ದು ಹೋರಾಟದ ಬದುಕು. ಅವರು ಎಂದಿಗೂ ಅಧಿಕಾರಕ್ಕಾಗಿ ಹಪಾಹಪಿಸಿದವರಲ್ಲ . ಸ್ವಾಭಿಮಾನಕ್ಕೆ ಧಕ್ಕೆಯಾಗದ ಪ್ರಧಾನಿ ಹುದ್ದೆಯನ್ನೇ ತ್ಯಜಿಸಿ ಬಂದವರು. ಇಂದ ವ್ಯಕ್ತಿತ್ವದ ಬಗ್ಗೆ ಕಾಂಗ್ರೆಸ್ ಈಗ ಅನುಕಂಪದ ರಾಜಕಾರಣ ಮಾಡುತ್ತಿರುವುದು ಆಶ್ಚರ್ಯಕರ", ಎಂದು ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದರು.
ಕಳೆದ ಬಾರಿ ದೇವೇಗೌಡರ ಅವಿರೋಧ ಆಯ್ಕೆಗೆ ಕಾಂಗ್ರೆಸ್ ಬೆಂಬಲದ ಬಗ್ಗೆಯೂ ಮಾತನಾಡಿದ ಕುಮಾರಸ್ವಾಮಿಯವರು, ಆಗ ದೇವೇಗೌಡರ ವಿರುದ್ಧ ಇನ್ನೊಬ್ಬ ಅಭ್ಯರ್ಥಿ ನಿಲ್ಲುವ ಅವಕಾಶ ಇರಲಿಲ್ಲ. ಆ ಸಂದರ್ಭದಲ್ಲಿ ಯಾವುದೇ ಪಕ್ಷಕ್ಕೆ ತನ್ನ ಅಭ್ಯರ್ಥಿಯನ್ನು ನಿಲ್ಲಿಸಿ ಗೆಲ್ಲಿಸಿಕೊಳ್ಳುವಷ್ಟು ಸಂಖ್ಯಾಬಲ ಇರಲಿಲ್ಲ. ನಮ್ಮ ಪಕ್ಷಕ್ಕೆ ಸಂಖ್ಯಾಬಲ ಇತ್ತು, ಹೀಗಾಗಿ ರಾಜ್ಯಸಭೆಗೆ ದೇವೇಗೌಡರು ಆಯ್ಕೆಯಾದರು. ಅವರು ಕಾಂಗ್ರೆಸ್ ಬೆಂಬಲದಿಂದ ರಾಜ್ಯಸಭೆಗೆ ಹೋಗಲಿಲ್ಲ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಒಕ್ಕಲಿಗ ಸಮುದಾಯದ ಮುಖ್ಯಮಂತ್ರಿ ಆಗಬೇಕಾದರೆ ರಾಜ್ಯಸಭೆ ಸ್ಥಾನ ಪಡೆದು ಏನು ಮಾಡುತ್ತಾರೆ ಎಂದು ಪ್ರಶ್ನಿಸಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, "ಇನ್ನೆರಡು ತಿಂಗಳು ಕಾದು ನೋಡೋಣ, ಅವರು ಏನು ಮಾಡುತ್ತಾರೆ ಎಂಬುದನ್ನು ಗಮನಿಸೋಣ"ಎಂದು ಹೇಳಿದರು.
ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಅಗಲಿದ್ದಾರೆ ಎಂಬ ಹಿನ್ನೆಲೆಯಲ್ಲಿ ದೇವೇಗೌಡರ ಮನೆಯಲ್ಲಿ ಸೂತಕ ಆವರಿಸಿದೆ ಎಂದು ಮಾಜಿ ಸಚಿವರೊಬ್ಬರು ನೀಡಿದ್ದ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಲು ಕುಮಾರಸ್ವಾಮಿ ನಿರಾಕರಿಸಿದರು.
ಇದೇ ವೇಳೆ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ತಮ್ಮ ಸಂಪರ್ಕದಲ್ಲಿದ್ದಾರೆ ಎಂಬ ವದಂತಿಗಳನ್ನು ಕೂಡ ಅವರು ಸ್ಪಷ್ಟವಾಗಿ ತಳ್ಳಿ ಹಾಕಿದರು."ಕಾಂಗ್ರೆಸ್ ನ ಯಾವುದೇ ನಾಯಕರನ್ನು ನಾನು ಸಂಪರ್ಕಿಸಿಲ್ಲ"ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ತಮ್ಮ ನಿವಾಸಕ್ಕೆ ಭೇಟಿ ನೀಡಿ ಸಲಹೆ ನೀಡಲಿ ? ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿ ಆಗಿ ಏನು ಮಾಡಿದ್ದಾರೆ ಎಂದು ಅವರೇ ಪ್ರಶ್ನಿಸಿದ್ದಾರೆ. ಹಾಗಿರುವಾಗ ನನ್ನ ಬಳಿ ಬಂದು ಯಾವ ಸಲಹೆ ಕೇಳುತ್ತಾರೆ." ಎಂದು ವ್ಯಂಗ್ಯವಾಡಿದರು .
"ನಾನು ಏನನ್ನೂ ಮಾಡಿಲ್ಲ ಎಂದು ಕೇಳುವವರು ಈಗ ಸಲಹೆ ಕೇಳಲು ಬರುತ್ತಾರೆ ಎನ್ನುವುದು ವಿಚಿತ್ರ. ಎಲ್ಲವನ್ನೂ ನಾನು ಗಮನಿಸುತ್ತಿದ್ದೇನೆ .ಹಿರಿಯರು ಹೇಳಿರುವ ' ಅತಿ ವಿನಯಂ ಧೂರ್ತ ಲಕ್ಷಣಂ ' ಎಂದು ಮಾತು ನನಗೆ ಪದೇಪದೇ ನೆನಪಾಗುತ್ತಿದೆ" ಎಂದು ಕುಮಾರಸ್ವಾಮಿ ಕುಟುಕಿದರು.
ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಪಕ್ಷ ಅಭ್ಯರ್ಥಿ ಹಾಕಿರುವ ವಿಚಾರದ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ ಅವರು, ನಮಗೂ ಎರಡು ಮತ ಬೇಕು, ಕಾಂಗ್ರೆಸ್ ಪಕ್ಷಕ್ಕೂ ಎರಡು ಮತ ಬೇಕು. ಇದರಲ್ಲಿ ಯಾವುದೇ ಗೇಮ್ ಪ್ಲಾನ್ ಇಲ್ಲ. ನಾವು ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಮತ ಹಾಕುವಂತೆ ಕೇಳುತ್ತೇವೆ . ನಮ್ಮ ಪ್ರಯತ್ನ ನಾವು ಮಾಡುತ್ತೇವೆ .ಕಾಂಗ್ರೆಸ್ ಅವರಿಗೆ ಹಣ ಬಲ, ಅಧಿಕಾರ ಬಲ ಇದೆ. ಮುಂದೆ ನೋಡೋಣ ಏನಾಗುತ್ತದೆ ಎಂದು ತಿಳಿಸಿದರು.
ಅಡುಗೆ ಅನಿಲ ಮತ್ತು ಪೆಟ್ರೋಲ್ ಬೆಲೆ ಏರಿಕೆ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ,ಜಾಗತಿಕ ಯುದ್ಧ ಪರಿಸ್ಥಿತಿಗಳ ಪರಿಣಾಮವಾಗಿ ಇಂಧನ ದರಗಳು ಏರಿಕೆಯಾಗಿವೆ ಎಂದು ಹೇಳಿದರು. "ಇದು ಭಾರತಕ್ಕೆ ಮಾತ್ರ ಆಗಿರುವುದಲ್ಲ.ಜಗತ್ತಿನ ಬಹುತೇಕ ದೇಶಗಳು ಇದೇ ಪರಿಸ್ಥಿತಿಯನ್ನು ಎದುರಿಸುತ್ತಿವೆ. ಆದರೆ ಕಾಂಗ್ರೆಸ್ ಎಲ್ಲ ವಿಷಯಗಳಲ್ಲೂ ರಾಜಕೀಯ ಮಾಡುತ್ತಿದೆ " ಎಂದು ಅವರು ಆರೋಪಿಸಿದರು.
ರಾಜ್ಯ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, "ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಕಳೆದ ಮೂರೂವರೆ ವರ್ಷಗಳಿಂದ ನಿರಂತರವಾಗಿ ವಿವಿಧ ಕ್ಷೇತ್ರಗಳಲ್ಲಿ ಬೆಲೆ ಏರಿಕೆ ಮಾಡುತ್ತಲೇ ಬಂದಿದೆ.ಅವರ ಬಗ್ಗೆ ಕಾಂಗ್ರೆಸ್ ಏನು ಹೇಳುತ್ತದೆ?" ಎಂದು ಪ್ರಶ್ನಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ ಎಸ್ ರವೀಂದ್ರ ಶ್ರೀಕಂಠಯ್ಯಾ, ಎಚ್ ಟಿ ಮಂಜುನಾಥ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತ ರಿದ್ದರು.
Also Read:
ಉತ್ತರ ಕನ್ನಡದಲ್ಲಿ ಗುಡ್ಡ ಕುಸಿತ ಭೀತಿ ಹೆಚ್ಚಳ - 439 ಪ್ರದೇಶಗಳಿಗೆ ಪರಿಹಾರ ಕಾಮಗಾರಿ ಇನ್ನು ಬಾಕಿ