BELAGAVI NEWS :
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ ಬೆಳೆಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗಬೇಕೆಂದು ಆದೇಶ ಹೊರಡಿಸಲಾಗಿದೆ. ಸರ್ಕಾರಿ ಆಡಳಿತದಲ್ಲಿ ಶಿಸ್ತು ಮತ್ತು ಪಾರದರ್ಶಕತೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತವನ್ನು ಬಲಪಡಿಸಲು ಈಗಿರುವ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಬದಲಿಗೆ ಕೃತಕ ಬುದ್ಧಿಮತ್ತೆ (AI) ಮತ್ತು ಜಿಪಿಎಸ್ ಆಧರಿತ ಹಾಜರಾತಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದೆ. ಈ ಹೊಸ ತಂತ್ರಜ್ಞಾನ ಆಧಾರಿತ ವ್ಯವಸ್ಥೆಯಿಂದ ನಿಖರ ಹಾಜರಾತಿ ದಾಖಲಾತಿ ಸಾಧ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕ್ರಮದ ಮೂಲಕ ಸರ್ಕಾರಿ ಸೇವೆಗಳ ಕಾರ್ಯಕ್ಷಮತೆ ಹೆಚ್ಚಿಸುವುದು, ಗೈರು ಹಾಜರಿ ಸಮಸ್ಯೆಗಳನ್ನು ಕಡಿಮೆ ಮಾಡುವುದು ಹಾಗೂ ಸಾರ್ವಜನಿಕರಿಗೆ ವೇಗವಾಗಿ ಸೇವೆ ಒದಗಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಹೊರಡಿಸಿದ ಅಧಿಕೃತ ಆದೇಶದ ಪ್ರಕಾರ, ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗಬೇಕು ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸರ್ಕಾರಿ ಕಚೇರಿಗಳಲ್ಲಿ ಈ ಆದೇಶದ ಅನುಷ್ಠಾನ ಸರಿಯಾಗಿ ಆಗಿಲ್ಲ ಎಂಬುದು ಕಂಡುಬಂದಿದೆ.
ಸ್ಥಳೀಯ ವರದಿಗಳ ಪ್ರಕಾರ, ಬೆಳಿಗ್ಗೆ 11 ಗಂಟೆಯಾದರೂ ಅನೇಕ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗದಿರುವುದು ಗಮನಕ್ಕೆ ಬಂದಿದೆ. ಸರ್ಕಾರದ ಕಟ್ಟುನಿಟ್ಟಿನ ಸೂಚನೆಗಳ ನಡುವೆಯೂ ಜಿಲ್ಲೆಯಲ್ಲಿ ಶಿಸ್ತು ಪಾಲನೆ ಬಗ್ಗೆ ಪ್ರಶ್ನೆಗಳು ಎದ್ದಿವೆ.
ಈ ಹಿನ್ನೆಲೆಯಲ್ಲಿ ನಮ್ಮ ಪ್ರತಿನಿಧಿ ಪೃಥ್ವಿರಾಜ್ ನಡೆಸಿದ ರಿಯಾಲಿಟಿ ಚೆಕ್ ನಲ್ಲಿ ಜಿಲ್ಲೆಯ ಸರ್ಕಾರಿ ಕಚೇರಿಗಳ ನೈಜ ಸ್ಥಿತಿ ಬಹಿರಂಗವಾಗಿದೆ. ಆಡಳಿತಾತ್ಮಕ ಶಿಸ್ತು ಹಾಗೂ ಸಮಯಪಾಲನೆ ಕುರಿತು ಮತ್ತೆ ಚರ್ಚೆಗೆ ಗ್ರಾಸವಾಗಿರುವ ಈ ವಿಷಯ, ಸಾರ್ವಜನಿಕ ಸೇವೆಗಳ ಕಾರ್ಯಕ್ಷಮತೆಯ ಮೇಲು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
Also Read:
ಸಿಎಂ ವಿಜಯ್ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಪ್ರಮುಖ ನಾಯಕರಿಂದ ಶುಭಾಶಯ