Belagavi News :
ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ವಿದ್ಯಾರ್ಥಿಗಳ ದೈನಂದಿನ ಬಸ್ ಪ್ರಯಾಣ ಅಪಾಯಕಾರಿಯಾಗಿ ಮಾರ್ಪಟ್ಟಿದೆ. ಸಮರ್ಪಕ ಕೆಎಸ್ ಆರ್ ಟಿಸಿ (KSRTC) ಬಸ್ ಸೌಕರ್ಯದ ಕೊರತೆಯಿಂದ ನೂರಾರು ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರತಿದಿನ ಜೀವದ ಹಂಗು ತೊರೆದು ಫುಟ್ ಬೋರ್ಡ್ ನಲ್ಲಿ ನೇತಾಡಿಕೊಂಡೇ ಪ್ರಯಾಣಿಸುವ ಪರಿಸ್ಥಿತಿ ಎದುರಿಸುತ್ತಿದ್ದಾರೆ.
ನಗರದ ವಿವಿಧ ಮಾರ್ಗಗಳಲ್ಲಿ ಬಸ್ ಗಳ ಕೊರತೆ ಮತ್ತು ಅತಿಯಾದ ಪ್ರಯಾಣಿಕರ ದಟ್ಟಣೆಯಿಂದ ವಿದ್ಯಾರ್ಥಿಗಳು ಅಪಾಯಕಾರಿಯಾದ ರೀತಿಯಲ್ಲಿ ಸಂಚರಿಸಬೇಕಾದ ಅನಿವಾರ್ಯತೆ ಉಂಟಾಗಿದೆ. ವಿಶೇಷವಾಗಿ ಬೆಳಗಾವಿ ಕೇಂದ್ರ ಬಾಸ್ ನಿಲ್ದಾಣದಲ್ಲಿ ಪ್ರತಿದಿನ ಇದೇ ದೃಶ್ಯ ಮರುಕಳಿಸುತ್ತಿದ್ದು, ಬಸ್ ಗಳ ಬಾಗಿಲು ಮತ್ತು ಫುಟ್ ಬೋರ್ಡ್ ಗಳಲ್ಲಿ ನೇತಾಡಿಕೊಂಡು ಪ್ರಯಾಣಿಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದೆ.
ಈ ಪರಿಸ್ಥಿತಿ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಗಂಭೀರ ಆತಂಕ ಮೂಡಿಸಿದ್ದು, ಯಾವುದೇ ಕ್ಷಣಗಳ ದುರ್ಘಟನೆ ಸಂಭವಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಸ್ಥಳೀಯರು, ಪೋಷಕರು ಮತ್ತು ವಿದ್ಯಾರ್ಥಿಗಳು ಹೆಚ್ಚುವರಿ ಬಸ್ ಗಳನ್ನು ಓಡಿಸಿ ಸುರಕ್ಷಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವಂತೆ ಸಾರಿಗೆ ಇಲಾಖೆಗೆ ಆಗ್ರಹಿಸಿದ್ದಾರೆ.
ಶಾಲಾ ಮತ್ತೆ ಕಾಲೇಜುಗಳು ಬಿಡುವ ವೇಳೆಯಲ್ಲಿ ಬೆಳಗಾವಿಯ ಪ್ರಮುಖ ಮಾರ್ಗಗಳಿಗೆ ಸಂಚರಿಸುವ ಕೆಎಸ್ ಆರ್ ಟಿಸಿ ಬಸ್ ಗಳ ಸಂಖ್ಯೆ ಸಾಕಾಗದ ಕಾರಣ ವಿದ್ಯಾರ್ಥಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬಸ್ ನಿಲ್ದಾಣಕ್ಕೆ ಬಸ್ ಆಗಮಿಸುತ್ತಿದ್ದಂತೆಯೇ ಆಸನಕ್ಕಾಗಿ ವಿದ್ಯಾರ್ಥಿಗಳು ಮುಗಿಬೀಳುವ ದೃಶ್ಯಗಳು ಸಾಮಾನ್ಯವಾಗಿವೆ.
ಬಸ್ ಗಳು ಸಂಪೂರ್ಣ ಭರ್ತಿಯಾದ ಬಳಿಕವೂ ಅನೇಕ ವಿದ್ಯಾರ್ಥಿಗಳಿಗೆ ಒಳಗೆ ನಿಲ್ಲಲು ಸಹ ಜಾಗ ಸಿಗದೆ, ಬಾಗಿಲಿನ ಮೆಟ್ಟಿಲು ಹಾಗೂ ಫುಟ್ ಬೋರ್ಡ್ ಮೇಲೆ ನಿಂತೇ ಪ್ರಯಾಣಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವೇಳೆ ಸಣ್ಣದೊಂದು ಆಯತಪ್ಪಿದರೂ ಗಂಭೀರ ಅಪಘಾತ ಸಂಭವಿಸುವ ಸಾಧ್ಯತೆ ಇರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಆತಂಕ ಹೆಚ್ಚಾಗಿದೆ.
ಇಂತಹ ಅಪಾಯಕಾರಿ ದೃಶ್ಯಗಳು ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರತಿದಿನ ಕಂಡು ಬರುತ್ತಿದ್ದರೂ, ಪರಿಸ್ಥಿತಿ ನಿಯಂತ್ರಿಸಲು ಅಥವಾ ವಿದ್ಯಾರ್ಥಿಗಳನ್ನು ತಡೆಯಲು ಸಂಬಂಧಪಟ್ಟ ಅಧಿಕಾರಿಗಳಿಂದ ಪರಿಣಾಮಕಾರಿ ಕ್ರಮಗಳು ಕಾಣುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಬಸ್ಗಳ ಸಂಖ್ಯೆಯನ್ನು ಹೆಚ್ಚಿಸದಿರುವುದು ಮತ್ತು ವಿದ್ಯಾರ್ಥಿಗಳ ದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸೇವೆ ಕಲ್ಪಿಸದಿರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲಾ ಕಾಲೇಜು ವೇಳೆಗೆ ಹೆಚ್ಚುವರಿ ಬಸ್ ಗಳನ್ನು ನಿಯೋಜಿಸಿ ವಿದ್ಯಾರ್ಥಿಗಳ ಸುರಕ್ಷಿತ ಪ್ರಯಾಣಕ್ಕೆ ಆದ್ಯತೆ ನೀಡಬೇಕು ಎಂದು ಸಾರ್ವಜನಿಕರು ಹಾಗೂ ಪೋಷಕರು ಸಾರಿಗೆ ಇಲಾಖೆಯನ್ನು ಒತ್ತಾಯಿಸಿದ್ದಾರೆ.