Belagavi news:
ಚಿಕ್ಕಮಗಳೂರು: ಜಮೀನಿನ ಖಾತೆ ಬದಲಾವಣೆ ಮಾಡಿ ಕೊಡುವ ಹೆಸರಿನಲ್ಲಿ ರೈತನೊಬ್ಬನಿಂದ ₹30 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕಂದಾಯ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕು ಕಚೇರಿಯಲ್ಲಿ ನಡೆದಿದೆ.
ತರೀಕೆರೆ ತಾಲೂಕಿನ ರೈತರೊಬ್ಬರು ತಮ್ಮ ಜಮೀನಿನ ಖಾತೆ ಬದಲಾವಣೆಗಾಗಿ ಸಂಬಂಧಿಸಿದ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಕೆಲಸವನ್ನು ಶೀಘ್ರವಾಗಿ ಮುಗಿಸಿ ಕೊಡುವ ಕಂದಾಯ ಇಲಾಖೆಯ ರೆವೆನ್ಯೂ ಇನ್ಸ್ಪೆಕ್ಟರ್ (RI) ರಮೇಶ್ ಹಾಗೂ ಗ್ರಾಮ ಲೆಕ್ಕಾಧಿಕಾರಿ (VA) ಸಂತೋಷ್ ಅವರು ಒಟ್ಟು ₹30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಅಧಿಕಾರಿಗಳು ಲಂಚದ ಬೇಡಿಕೆಯಿಂದ ಬೇಸತ್ತ ರೈತರು ಚಿಕ್ಕಮಗಳೂರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳನ್ನು ರೆಡ್ ಹ್ಯಾಂಡಗೆ ಬಂಧಿಸಿದ್ದಾರೆ.
ಈ ಘಟನೆ ಜಿಲ್ಲೆಯಾದ್ಯಾಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದು , ಕಂದಾಯ ಇಲಾಖೆಯ ಭ್ರಷ್ಟಾಚಾರ ಮತ್ತೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ದೂರಿನ ಆಧಾರದ ಮೇಲೆ ಚಿಕ್ಕಮಗಳೂರು ಲೋಕಾಯುಕ್ತ ಅಧಿಕಾರಿಗಳು ಪೂರ್ವಭಾವಿಯಾಗಿ ಕಾರ್ಯಾಚರಣೆ ರೂಪಿಸಿ ಬುಧವಾರ ತರೀಕೆರೆ ತಾಲೂಕು ಕಚೇರಿಯಲ್ಲಿ ದಾಳಿ ನಡೆಸಿದರು. ರೈತನಿಂದ ₹30 ಸಾವಿರ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಕಂದಾಯ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ರೆಡ್ ಹ್ಯಾಂಡ್ ಗೆ ಬಂದಿಸಿದ್ದಾರೆ.
ಕಾರ್ಯಾಚರಣೆ ವೇಳೆ ಲಂಚದ ಹಣವನ್ನು ಸಹ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಘಟನೆ ತಾಲೂಕು ಕಚೇರಿಯಲ್ಲಿ ಭಾರಿ ಸಂಚಲನ ಮೂಡಿಸಿದೆ. ಜಮೀನಿನ ಖಾತೆ ಬದಲಾವಣೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ರೆವೆನ್ಯೂ ಇನ್ಸ್ಪೆಕ್ಟರ್ (RI) ರಮೇಶ್ ಹಾಗೂ ಗ್ರಾಮ ಲೆಕ್ಕಾಧಿಕಾರಿ (VA) ಸಂತೋಷ್ ಇದೀಗ ಲೋಕಾಯುಕ್ತ ವಶದಲ್ಲಿದ್ದಾರೆ.
ಈ ದಾಳಿಯನ್ನು ಲೋಕಾಯುಕ್ತ ಡಿವೈಎಸ್ ಪಿ ತಿರುಮಲೇಶ್ ನೇತೃತ್ವದಲ್ಲಿ ನಡೆಸಲಾಗಿದ್ದು, ತಂಡದ ಇತರ ಅಧಿಕಾರಿಗಳು ಸಹ ಭಾಗವಹಿಸಿದ್ದರು. ಸದ್ಯ ಇಬ್ಬರು ಆರೋಪಿ ಅಧಿಕಾರಿಗಳನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಲಂಚದ ಬೇಡಿಕೆಯ ಹಿಂದೆ ಇನ್ನು ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ದಿಕ್ಕಿನಲ್ಲಿಯೂ ತನಿಖೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.
ಈ ಘಟನೆ ರಾಜ್ಯದಲಿ ಮತ್ತೆ ಕಂದಾಯ ಇಲಾಖೆಯ ಭ್ರಷ್ಟಾಚಾರ ಕುರಿತು ಚರ್ಚೆಗೆ ಕಾರಣವಾಗಿದ್ದು, ಲೋಕಾಯುಕ್ತ ದಾಳಿಯ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ತರೀಕೆರೆ ತಾಲೂಕು ಕಚೇರಿಯ ಆವರಣದಲ್ಲಿ ನಡೆದ ಈ ಲೋಕಾಯುಕ್ತ ದಾಳಿ ಸಾರ್ವಜನಿಕರ ಗಮನ ಸೆಳೆದಿದೆ. ಸರ್ಕಾರಿ ಕಚೇರಿಗಳಲ್ಲಿ ನಡೆಯುವ ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಜೊತೆಗೆ ರೈತರು ತಮ್ಮ ಕೆಲಸಗಳಲ್ಲಿ ಲಂಚ ಕೊಡ ಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿರುವುದು ದುರಾದೃಷ್ಟಕರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ತಿಂಗಳು ಬೆಳಗಾವಿಯಲ್ಲಿ ಲೋಕಾ ದಾಳಿ:
ಕಳೆದ ತಿಂಗಳು ಬೆಳಗಾವಿಯ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಜಯ್ ಸಿಂಗ್ ರಜಪೂತ್ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಆಸ್ತಿ ಪತ್ತೆ ಹೆಚ್ಚಿಸಿದ್ದರು.
ಭ್ರಷ್ಟಾಚಾರ ತಡೆ ಕಾಯ್ದೆ ಅಡಿಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ ಬೆಳಗಾವಿಯಲ್ಲಿ ದಾಖಲಾಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 9 ರಂದು ಲೋಕಾಯುಕ್ತ ಅಧಿಕಾರಿಗಳು ಭಾರಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಬೆಳಗಾವಿಯ ಆಂಜನೇಯ ನಗರದಲ್ಲಿರುವ ಮನೆ, ಕಚೇರಿ, ಬ್ಯಾಂಕ್ ಲಾಕರ್ ಸೇರಿದಂತೆ ಒಟ್ಟು ಏಳು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಮಹತ್ವದ ದಾಖಲೆಗಳು ಹಾಗೂ ಆಸ್ತಿಪಾಸ್ತಿಗಳನ್ನು ಪರಿಶೀಲಿಸಿದ್ದರು.
ಲೋಕಾಯುಕ್ತ ಅಧಿಕಾರಿಗಳ ಈ ದಾಳಿ ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಭ್ರಷ್ಟಾಚಾರ ವಿರುದ್ಧದ ಕಾರ್ಯಾಚರಣೆಗೆ ಮತ್ತಷ್ಟು ವೇಗ ಸಿಕ್ಕಿತ್ತು. ದಾಳಿ ವೇಳೆ ಪತ್ತೆಯಾದ ಆಸ್ತಿ, ಬ್ಯಾಂಕ್ ದಾಖಲೆಗಳು ಮತ್ತು ಇತರೆ ಮಾಹಿತಿಗಳ ಬಗ್ಗೆ ಬಳಿಕ ಲೋಕಾಯುಕ್ತ ಪೊಲೀಸರು ಅಧಿಕೃತ ಪ್ರಕಟಣೆ ಹೊರಡಿಸಿದ್ದರು.
ಪ್ರಕರಣ ಸಂಬಂಧ ಅಧಿಕಾರಿಗಳು ಆದಾಯ ಮೀರಿ ಆಸ್ತಿ ಗಳಿಕೆ, ಹಣಕಾಸು ವ್ಯವಹಾರಗಳು ಹಾಗೂ ಬೇನಾಮಿ ಆಸ್ತಿಗಳ ಕುರಿತು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ. ಲೋಕಾಯುಕ್ತ ದಾಳಿಯ ನಂತರ ಹಲವು ಮಹತ್ವದ ಮಾಹಿತಿಗಳು ಹೊರ ಬಿದ್ದಿದ್ದು, ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ಸಂಚಲನ ಮೂಡಿಸಿತ್ತು.
Also Read:
ಇಂದಿನ ದರ ಹೆಚ್ಚಳದಿಂದ ಏರ್ ಇಂಡಿಯಾಗೆ ಹೊಡೆತ: ಅಂತರಾಷ್ಟ್ರೀಯ ವಿಮಾನ ಹಾರಟ ಸ್ಥಗಿತ