belagavi news :
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ವೇಳೆ ಅವರು ಸಂಚರಿಸುವ ಮಾರ್ಗದ ಪಕ್ಕದಲ್ಲೇ ಜಿಲೇಟಿನ್ ಕಡ್ಡಿಗಳು ಪತ್ತೆಯಾದ ಪ್ರಕರಣ ಭದ್ರತಾ ವಲಯದಲ್ಲಿ ಆತಂಕ ಸೃಷ್ಟಿಸಿದೆ. ಈ ಪ್ರಕರಣದ ತನಿಖೆಗೆ ಆರು ವಿಶೇಷ ಪೊಲೀಸ ತಂಡಗಳನ್ನು ರಚಿಸಲಾಗಿದೆ.
ಘಟನಾ ಸ್ಥಳದ ಸುತ್ತ ಮುತ್ತಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ ಜೊತೆಗೆ ಬೆಂಗಳೂರು ದಕ್ಷಿಣ ಮತ್ತು ರಾಮನಗರ ಭಾಗದಲ್ಲಿರುವ ಕ್ವಾರಿಗಳಲ್ಲಿ ಜಿಲೆಟಿನ್ ಕಡ್ಡಿಗಳ ಬಳಕೆ ಹಾಗೂ ಸರಬರಾಜು ಕುರಿತು ಸಹ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ನಿಗದಿಯಾಗಿದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿದ್ದರು. ಅವರ ಆಗಮನಕ್ಕೂ ಸುಮಾರು 2 ಗಂಟೆಗಳ ಮುನ್ನ, ಬೆಳಿಗ್ಗೆ 9:00 ಸುಮಾರಿಗೆ ಬೆಂಗಳೂರು ದಕ್ಷಿಣ ತಾಲೂಕಿನ ವಡ್ಡೇರಹಳ್ಳಿ ಗೇಟ್ ಸಮೀಪ ಅನುಮಾನಾಸ್ಪದ ಬಾಕ್ಸ್ ಪತ್ತೆಯಾಗಿತ್ತು.
ಭದ್ರತಾ ಕರ್ತವ್ಯದಲ್ಲಿದ್ದ ಕಾನ್ಸ್ಟೇಬಲ್ ಒಬ್ಬರು ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಬಾಕ್ಸ್ ಗಮನಿಸಿದ್ದಾರೆ. ತಕ್ಷಣವೇ ಮಾಹಿತಿ ನೀಡಲಾಗಿದ್ದು, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ. ಪರಿಶೀಲನೆಯ ವೇಳೆ ಆ ಬಾಕ್ಸ್ ನಲ್ಲಿ ಎರಡು ಜಿಲೇಟಿನ್ ಕಡ್ಡಿಗಳು, ನಾಲ್ಕು ಗಂಧದ ಕಡ್ಡಿಗಳು, ಒಂದು ಬೆಂಕಿ ಪೊಟ್ಟಣ ಹಾಗೂ ಎರಡು ಬ್ಯಾಟರಿಗಳು ಪತ್ತೆಯಾಗಿವೆ.
ಸ್ಪೋಟಕಗಳನ್ನು ವಶಕ್ಕೆ ಪಡೆದ ಪೊಲೀಸರು ಬಳಿಕ ಇಡೀ ಮಾರ್ಗವನ್ನು ಮತ್ತೊಮ್ಮೆ ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ ನಂತರವೇ ಪ್ರಧಾನಿಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಪ್ರೋಟೋಕಾಲ್ ಪ್ರಕಾರ ಪ್ರಧಾನಿಗಳ ಆಗಮನಕು ಹಿಂದಿನ ದಿನವೇ ಅವರು ಸಂಚರಿಸುವ ಮಾರ್ಗವನ್ನು ಪರಿಶೀಲಿಸಲಾಗಿದ್ದರು ಬೆಳಗಿನ ಜಾವ ಅನುಮಾನಾಸ್ಪದ ಬಾಕ್ಸ್ ಪತ್ತೆ ಯಾದದು ಭದ್ರತಾ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ.
ಬೆದರಿಕೆ ಕರೆ ಮಾಡಿದ ಆರೋಪಿಗೆ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಭಾನುವಾರ ಬೆಳಿಗ್ಗೆ ಬೆದರಿಕೆ ಕರೆ ಮಾಡಿದ ಆರೋಪಿ ಲೋಹಿತ್ ನನ್ನು ವಶಕ್ಕೆ ಪಡೆದಿರುವ ಕೋರಮಂಗಲ ಠಾಣೆ ಪೊಲೀಸರು ಭಾನುವಾರ ತಡರಾತ್ರಿವರೆಗೆ ತೀವ್ರ ವಿಚಾರಣೆ ನಡೆಸಿದ್ದಾರೆ.
ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಘಟನೆಯ ಕೆಲ ಗಂಟೆಗಳ ಮುನ್ನವೇ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಆರೋಪಿಯ ಹಿನ್ನಲೆ ಹಾಗೂ ಕರೆ ಮಾಡಿದ ಉದ್ದೇಶದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.
ಪ್ರಾಥಮಿಕ ತನಿಖೆಯ ವೇಳೆ ಆರೋಪಿ ಲೋಹಿತ್ ಗೆ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ತಿಳಿದು ಬಂದಿದ್ದು, ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಸ್ಥಳಕ್ಕೆ ತೆರಳಿರುವ ಸಾದ್ಯತೆ ಕಡಿಮೆ ಎಂದು ಪೊಲೀಸರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಸ್ಪೋಟಕಗಳನ್ನು ಅಲ್ಲಿಗೆ ತಂದಿಟ್ಟವರು ಯಾರು ಎಂಬುದರ ಬಗ್ಗೆ ತನಿಖೆ ಮುಂದುವರೆದಿದೆ. ಜೊತೆಗೆ ಲೋಹಿತ್ ಗೆ ಈ ಘಟನೆಯೊಂದಿಗೆ ಯಾವುದೇ ರೀತಿಯ ನಂಟು ಇದೆ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
Also Read:
ಕೊನೆಯ ಎಸೆತದಲ್ಲಿ ಆರ್ ಸಿಬಿಗೆ ಥ್ರಿಲ್ಲಿಂಗ್ ಜಯ! ಮುಂಬೈ ಇಂಡಿಯನ್ಸ್ ಟೂರ್ನಿಗೆ ಗುಡ್ ಬೈ!