belagavi news :
ನೋಯ್ಡಾ (ಉತ್ತರ ಪ್ರದೇಶ): ನವದೆಹಲಿಯ ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇರೆಗೆ ನೋಯ್ಡಾದ ಯುವತಿಯೊಬ್ಬರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ನೋಯ್ಡಾದ ಸೆಕ್ಟರ್ 168ರ ನಿವಾಸಿಯಾಗಿರುವ ರುಚಿಕಾ ಸಿಂಗ್ ವಿರುದ್ಧ ಗಾಜಿಯಾಬಾದ್ ನ ಸ್ಮೃತಿ ಸಿಂಗ್ ನೀಡಿದ ದೂರಿನ ಆಧಾರದ ಮೇಲೆ ಎಕ್ಸ್ ಪ್ರೆಸ್ ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಎಫ್ಐಆರ್ ಪ್ರಕಾರ, ಜುಲೈ 23ರಂದು ಸಲ್ಲಿಸಲಾದ ದೂರಿನಲ್ಲಿ, ಜಂತರ್ ಮಂತರ್ ಪ್ರತಿಭಟನೆಯ ಸಂದರ್ಭದಲ್ಲಿ ಆರೋಪಿ ಯುವತಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹಾಗೂ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹೇಳಿಕೆಗಳು ಸಂವಿಧಾನಿಕ ಹುದ್ದೆಯ ಘಟನೆಗೆ ಧಕ್ಕೆ ತರುವುದರ ಜೊತೆಗೆ ದ್ವೇಷ ಹರಡುವ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುವ ಉದ್ದೇಶ ಹೊಂದಿದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 352, 353(1) ಮತ್ತು 356(1) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸೆಕ್ಷನ್ ಗಳು ಉದ್ದೇಶಪೂರ್ವಕ ಅವಮಾನ, ಸಾರ್ವಜನಿಕ ಗೊಂದಲಕ್ಕೆ ಕಾರಣವಾಗುವ ಹೇಳಿಕೆಗಳು ಹಾಗೂ ಮಾನನಷ್ಟಕ್ಕೆ ಸಂಬಂಧಿಸಿದ ಆರೋಪಗಳಿಗೆ ಅನ್ವಯಿಸುತ್ತದೆ.
ನೋಯ್ಡಾದ ಹೆಚ್ಚುವರಿ ಪೊಲೀಸ್ ಉಪ ಆಯುಕ್ತೆ ಮನೀಷಾ ಸಿಂಗ್ ಅವರು ಪ್ರಕರಣ ದಾಖಲಾಗಿರುವುದನ್ನು ಖಚಿತಪಡಿಸಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.