belagavi news :
ಬೆಂಗಳೂರು: ಕಾವೇರಿ ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ಸ್ ಕಾವೇರಿ ನೀರನ್ನು 15 ದಿನಗಳ ಕಾಲ ಬಿಡುಗಡೆ ಮಾಡುವಂತೆ ನೀಡಿರುವ ಆದೇಶ ಕರ್ನಾಟಕದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಮಳೆ ಕೊರತೆ ಮತ್ತು ಬರಗಾಲದಿಂದ ಸಂಕಷ್ಟದಲ್ಲಿರುವ ರೈತರು, ಈ ನಿರ್ಧಾರವನ್ನು ರಾಜ್ಯದ ಹಿತಾಸಕ್ತಿಗೆ ವಿರೋಧವಾಗಿದೆ ಎಂದು ಖಂಡಿಸಿದ್ದಾರೆ.
ಮಂಡ್ಯ, ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ರಕ್ತ ಕೊಟ್ಟೇವು, ನೀರು ಕೊಡೇವು! ಎಂಬ ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ಪಂಜಿನ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಟೈರ್ ಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರಹಾಕಿದರು.
ರೈತರ ಪ್ರಕಾರ, ರಾಜ್ಯದಲ್ಲೇ ಕೃಷಿ ಚಟುವಟಿಕೆಗಳಿಗೆ ನೀರಿನ ಕೊರತೆ ಎದುರಾಗಿದ್ದು, ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದು ನ್ಯಾಯಸಮ್ಮತವಲ್ಲ. ಮೊದಲು ಕರ್ನಾಟಕದ ರೈತರು ಅಗತ್ಯಗಳನ್ನು ಪೂರೈಸಿ ಬಳಿಕವೇ ನೀರು ಹಂಚಿಕೆ ಕುರಿತು ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇದೇ ವೇಳೆ, ಕೆಆರ್ ಎಸ್ ಜಲಾಶಯದ ನೀರಿನ ಮಟ್ಟವು ಆತಂಕಕಾರಿ ಸ್ಥಿತಿಯಲ್ಲಿದೆ. ಪ್ರಸ್ತುತ ಜಲಾಶಯದಲ್ಲಿ ಸುಮಾರು 17 tmc ನೀರು ಮಾತ್ರ ಲಭ್ಯವಿದ್ದು ಅದರಲ್ಲಿ 5 ಟಿಎಂಸಿ ಡೆಡ್ ಸ್ಟೋರೇಜ್ ಆಗಿದೆ. ಉಳಿದ ನೀರು ರಾಜ್ಯದ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ಸಾಕಾಗುವುದೇ ಎಂಬ ಪ್ರಶ್ನೆ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ನಿರ್ಧಾರವು ರಾಜ್ಯದ ರೈತರಿಗೆ ದೊಡ್ಡ ಹೊಡೆತವಾಗಲಿದೆ ಎಂದು ರೈತ ಸಂಘಟನೆಗಳು ಎಚ್ಚರಿಸಿವೆ. ಸರ್ಕಾರವು ತಕ್ಷಣ ಮಧ್ಯಪ್ರವೇಶಿಸಿ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಒತ್ತಾಯಿಸಿರುವ ಕನ್ನಡಪರ ಸಂಘಟನೆಗಳು, ಬೇಡಿಕೆ ಈಡೇರದಿದ್ದರೆ "ಕರ್ನಾಟಕ ಬಂದ್" ಸೇರಿದಂತೆ ರಾಜ್ಯವ್ಯಾಪ್ತಿ ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿವೆ.