Belagavi News :
ಚಿಕ್ಕೋಡಿ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಬೆಳಗಾವಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಡಳಿತ ಸಂಸ್ಥೆಗೆ ಚುರುಕು ತುಂಬುವ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ಅಥಣಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಡಿ.ಕೆ. ಶಿವಕುಮಾರ್ ಅವರ ಕಾರ್ಯವೈಖರಿಯನ್ನು ಮೆಚ್ಚಿ ಮಾತನಾಡಿದರು. ಜನಪರ ಚಿಂತನೆಗಳೊಂದಿಗೆ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಅವರು ಹಲವು ಹೊಸ ಯೋಜನೆಗಳನ್ನು ರೂಪಿಸುತ್ತಿದ್ದಾರೆ ಎಂದು ಹೇಳಿದ್ದರು.
ಜನರಿಗೆ ಸರ್ಕಾರದ ಸೇವೆಗಳು ಸುಲಭವಾಗಿ ತಲುಪುವ ಉದ್ದೇಶದಿಂದ " ಪ್ರಜಾಸೇವೆ " ಹೆಸರಿನ ಹೊಸ ಇಲಾಖೆಯನ್ನು ಸ್ಥಾಪಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸವದಿ ತಿಳಿಸಿದರು. ಈ ಇಲಾಖೆಗೆ ಪ್ರತ್ಯೇಕ ಸಚಿವರನ್ನು ನೇಮಿಸುವ ಸಾಧ್ಯತೆಯೂ ಇದೆ ಎಂದು ಹೇಳಿದರು.
ಅಧಿಕಾರಿಗಳು ಪ್ರತಿನಿತ್ಯ ಸಾರ್ವಜನಿಕರಿಗೆ ಲಭ್ಯವಾಗಬೇಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿಯೇ ವಾಸ್ತವ್ಯ ಹೂಡಬೇಕು ಎಂಬ ಕಟ್ಟುನಿಟ್ಟಿನ ಸೂಚನೆಯನ್ನು ಸಿಎಂ ನೀಡಿದ್ದಾರೆ ಎಂದು ಅವರು ತಿಳಿಸಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಹೊಸ ಯೋಜನೆಯೊಂದನ್ನು ರೂಪಿಸಲಾಗುತ್ತಿದೆ. ಸಿ ಎಸ್ ಆರ್ (CSR) ನಿಧಿಯನ್ನು ಸಂಗ್ರಹಿಸಿ, ಪ್ರತಿ ಶಾಲೆಯ ಅಭಿವೃದ್ಧಿಗೆ ₹ 6 ರಿಂದ ₹ 8 ಕೋಟಿ ವರೆಗೆ ಅನುದಾನ ಒದಗಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಅಥಣಿ ಕ್ಷೇತ್ರಕ್ಕೆ ಈಗಾಗಲೇ 10 ಕೆಪಿಎಸ್ ಶಾಲೆಗಳು ಮಂಜೂರಾಗಿರುವುದಾಗಿ ಸವದಿ ಹೇಳಿದರು.
ಇದೇ ವೇಳೆ, ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸ್ಥಳದ ವಾಸ್ತವ ಪರಿಸ್ಥಿತಿಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದು ಲಕ್ಷ್ಮಣ್ ಸವದಿ ತಿಳಿಸಿದರು.
ಗೃಹಲಕ್ಷ್ಮಿ ಯೋಜನೆ ದುರುಪಯೋಗ ತಡೆಗೆ ಕ್ರಮ :
ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಯಲು ಸರ್ಕಾರ ಕ್ರಮ ಕೈಗೊಂಡಿದ್ದು, ಅರ್ಹ ಫಲಾನುಭವಿಗಳ ಪರಿಶೀಲನಾ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಬಾಕಿ ಇರುವ ಎಲ್ಲಾ ಕಂತುಗಳ ಹಣವನ್ನು ಒಟ್ಟಿಗೆ ಬಿಡುಗಡೆ ಮಾಡಲಾಗುವುದು ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಕುರಿತು ಪ್ರತಿಪಕ್ಷಗಳು ಮಾಡುತ್ತಿರುವ ಟೀಕೆಗಳಿಗೆ ಪ್ರತಿಕ್ರಿಯಿಸಿದ ಅವರು, ಕೆಲವು ಕಡೆ ಮೃತಪಟ್ಟವರ ಹೆಸರಿನಲ್ಲಿ ಹಣ ಪಡೆಯುತ್ತಿರುವುದು ಹಾಗೂ ಕೆಲವರು ಎರಡು ಬಾರಿ ಹಣ ಪಡೆಯುತ್ತಿರುವ ಪ್ರಕರಣಗಳು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಹೇಳಿದರು.
ಯೋಜನೆಯ ಹಣ ದುರುಪಯೋಗವಾಗುತ್ತಿರುವುದನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದ್ದು, ಫಲಾನುಭವಿಗಳ ಸಮಗ್ರ ಪರಿಶೀಲನೆ ಪೂರ್ಣಗೊಂಡ ಬಳಿಕ ಅರ್ಹರೆಲ್ಲರಿಗೂ ಬಾಕಿ ಉಳಿದಿರುವ ಕಂತಿನ ಹಣವನ್ನು ಒಂದೇ ಬಾರಿ ಜಮೆ ಮಾಡಲಾಗುವುದು. ಈ ಬಗ್ಗೆ ಫಲಾನುಭವಿಗಳು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ ನೀಡಿದರು.
ಸಂಪುಟ ವಿಸ್ತರಣೆ ಕುರಿತು ಸುಳಿವು:
ಬೆಳಗಾವಿಯಲ್ಲಿ ನಡೆದ ಡಿನ್ನರ್ ಸಭೆ ಕುರಿತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿರುವ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದ ಲಕ್ಷ್ಮಣ್ ಸವದಿ, ಆ ಸಭೆಯಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದರು.
ಇದೆ ವೇಳೆ, ಮುಂದಿನ ಒಂದು ವಾರದೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆಯಿದೆ ಎಂಬ ಸುಳಿವನ್ನು ಅವರು ನೀಡಿದರು. ಆದರೆ, ಸಂಪುಟ ವಿಸ್ತರಣೆ ಕುರಿತು ಅಂತಿಮ ನಿರ್ಧಾರವನ್ನು ಪಕ್ಷದ ನಾಯಕತ್ವವೇ ಕೈಗೊಳ್ಳಲಿದೆ ಎಂದು ಹೇಳಿದರು.