BELAGAVI NEWS:
ಬೆಳಗಾವಿಯಲ್ಲಿ ಭಾರೀ ಮಳೆಯ ಆರ್ಭಟ: ಖಾನಾಪುರ, ಬೆಳಗಾವಿ ತಾಲೂಕಿನ ಶಾಲೆಗಳಿಗೆ ಇಂದು ರಜೆ; ನದಿಗಳ ನೀರಿನ ಮಟ್ಟ ಏರಿಕೆ
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬೆಳಗಾವಿ ಹಾಗೂ ಖಾನಾಪುರ ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 7) ರಜೆ ಘೋಷಿಸಲಾಗಿದೆ.
ಜಿಲ್ಲಾಡಳಿತ ಹೊರಡಿಸಿರುವ ದೇಶದಂತೆ, ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ನಗರ ಹಾಗೂ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿರುವ " ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯುಸಿ (12ನೇ ತರಗತಿಯವರೆಗಿನ) ಕಾಲೇಜುಗಳಿಗೆ ಮಂಗಳವಾರ (ಜುಲೈ 7) ರಜೆ ನೀಡಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹಲವೆಡೆ ರಸ್ತೆಗಳು, ಜಲಾವೃತಗೊಂಡಿದ್ದು, ಜನರು ಅನಗತ್ಯವಾಗಿ ಹೊರಗೆ ಬಾರದಂತೆ ಆಡಳಿತ ಎಚ್ಚರಿಕೆ ನೀಡಿದೆ.
ಇದೇ ವೇಳೆ, ನೆರೆಯ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಗಡಿ ತಾಲೂಕುಗಳಾದ ಚಿಕ್ಕೋಡಿ ಹಾಗೂ ನಿಪ್ಪಾಣಿಯಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿಗಳ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಹಲವು ಪ್ರಮುಖ ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ. ಪರಿಣಾಮ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ.
ಚಿಕ್ಕೋಡಿ ತಾಲೂಕಿನ ಕಲ್ಲೋಳ ಸಮೀಪ ಕೃಷ್ಣಾ ನದಿಗೆ ಸುಮಾರು "60 ಸಾವಿರ ಕ್ಯೂಸೆಕ್ " ನೀರು ಹರಿದು ಬರುತ್ತಿದೆ. ಜೊತೆಗೆ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ ನಿಂದ ಸುಮಾರು " 40 ಸಾವಿರ ಕ್ಯೂಸೆಕ್" ನೀರನ್ನು ಕೃಷ್ಣ ನದಿಗೆ ಹರಿಸಲಾಗುತ್ತಿದ್ದು ನದಿ ತೀರದ ಗ್ರಾಮಗಳ ನಿವಾಸಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಪಶ್ಚಿಮ ಘಟ್ಟ ಮತ್ತು ಖಾನಾಪುರ ತಾಲೂಕಿನ ಕಣಕುಂಬಿ ಅರಣ್ಯ ಪ್ರದೇಶದಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಲಪ್ರಭಾ ನದಿ ತುಂಬಿ ಹರಿಯುತ್ತಿದೆ. ನದಿಯ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಬೆಳಗಾವಿ ಜಿಲ್ಲೆಯ ಹಬ್ಬಾನಟ್ಟಿ ಗ್ರಾಮದ ಹೊರವಲಯದಲ್ಲಿರುವ ಪುರಾತನ ಮಾರುತಿ ದೇವಾಲಯ ಭಾಗಶಃ ಜಲಾವೃತವಾಗಿದೆ.
ಮಾರುತಿ ದೇವಾಲಯದ ಗರ್ಭಗುಡಿ ಸೇರಿದಂತೆ ರಾಮ, ಲಕ್ಷ್ಮಣ ಹಾಗೂ ಸೀತಾ ದೇವರ ಮೂರ್ತಿಗಳ ಕತ್ತಿನವರೆಗೆ ನೀರು ತಲುಪಿದೆ. ಇದೇ ಪ್ರದೇಶದಲ್ಲಿರುವ ಶಿವನ ದೇವಾಲಯವು ಈಗಾಗಲೇ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ. ಮಳೆ ಮುಂದುವರಿದರೆ ಮಾರುತಿ ದೇವಾಲಯವು ಸಂಪೂರ್ಣ ಜಲಾವೃತವಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಪ್ರತಿ ವರ್ಷ ಮಳೆಗಾಲದಲ್ಲಿ ಮಲಪ್ರಭಾ ನದಿಯ ಪ್ರವಾಹದಿಂದ ಈ ದೇವಾಲಯಗಳು ಜಲಾವೃತವಾಗುವುದು ಸಾಮಾನ್ಯ. ಕೆಲವೊಮ್ಮೆ ನಾಲ್ಕು ತಿಂಗಳವರೆಗೆ ನೀರು ಇಳಿಯದೆ ದೇವಾಲಯಗಳು ಮುಳುಗಿದ ಸ್ಥಿತಿಯಲ್ಲೇ ಇರುತ್ತವೆ. ಈ ವರ್ಷವೂ ನಿರಂತರ ಮಳೆಯಿಂದ ನದಿಯ ಹರಿವು ಹೆಚ್ಚಾಗಿದ್ದು, ಪ್ರವಾಹದ ಆತಂಕ ಮತ್ತಷ್ಟು ಹೆಚ್ಚಿದೆ.
ದಕ್ಷಿಣ ಭಾರತದಲ್ಲಿ ಮಳೆ ಮುಂದುವರಿಕೆ:
ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ದಕ್ಷಿಣ ಪರ್ಯಾಯ ದ್ವೀಪದ ಹಲವು ಭಾಗಗಳಲ್ಲಿ ಮುಂದಿನ ದಿನಗಳಲ್ಲಿಯೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕೇರಳ, ಕರಾವಳಿ ಕರ್ನಾಟಕ, ಆಂಧ್ರಪ್ರದೇಶದ ಕರಾವಳಿ, ತೆಲಂಗಾಣ, ತಮಿಳುನಾಡು ಹಾಗೂ ಕರ್ನಾಟಕದ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ನಿರೀಕ್ಷೆಯಿದೆ.