Belagavi News:
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯ ಆರ್ಭಟ ಮುಂದುವರೆದಿದ್ದು, ಇದರ ಪರಿಣಾಮವಾಗಿ ಕೃಷ್ಣ ಮತ್ತು ಘಟಪ್ರಭಾ ನದಿಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ನಿರಂತರ ಮಳೆಯಿಂದ ಜಲಾಶಯಗಳ ಒಳ ಹರಿವು ಹೆಚ್ಚಳವಾಗಿದ್ದು, ನದಿ ಪಾತ್ರದ ಜನರು ಹಾಗೂ ತಗ್ಗು ಪ್ರದೇಶಗಳ ನಿವಾಸಿಗಳು ಎಚ್ಚರಿಕೆವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಮುಂದಿನ ದಿನಗಳಲ್ಲೂ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ನದಿಗಳ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆ ಇದೆ.
ಕೃಷ್ಣಾ ನದಿಗೆ 10,000 ಕ್ಯೂಸೆಕ್ ಒಳಹರಿವು ಹೆಚ್ಚಳ - ನಿಪ್ಪಾಣಿ, ಚಿಕ್ಕೋಡಿಯಲ್ಲಿ ಸೇತುವೆಗಳು ಜಲಾವೃತ, ನದಿ ತೀರದ ಜನರಿಗೆ ಜಿಲ್ಲಾಡಳಿತದ ಎಚ್ಚರಿಕೆ :
ಉತ್ತರ ಕರ್ನಾಟಕದಲ್ಲಿ ನಿರಂತರ ಮಳೆಯ ಪರಿಣಾಮವಾಗಿ ಕೃಷ್ಣಾ ನದಿಗೆ ಒಂದೇ ದಿನದಲ್ಲಿ 10,000 ಕ್ಯೂಸೆಕ್ ನೀರಿನ ಒಳಹರಿವು ಹೆಚ್ಚಳವಾಗಿದೆ. ಇದರೊಂದಿಗೆ ವೇದಗಂಗಾ ಹಾಗೂ ದೂಧಗಂಗಾ ನದಿಗಳಲ್ಲೂ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದ್ದು, ಪ್ರವಾಹದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮತ್ತು ಚಿಕ್ಕೋಡಿ ತಾಲೂಕುಗಳಲ್ಲಿ ಹಲೋ ಸೇತುವೆಗಳು ಜಲಾವೃತಗೊಂಡಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಕೆಲವು ಗ್ರಾಮಗಳ ಸಂಪರ್ಕವು ಕಡಿತಗೊಂಡಿರುವ ಮಾಹಿತಿ ಲಭ್ಯವಾಗಿದೆ. ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನಲೆಯಲ್ಲಿ, ನದಿ ತೀರದ ಗ್ರಾಮಗಳ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ. ತಗು ಪ್ರದೇಶಗಳ ಜನರು ಸುರಕ್ಷಿತ ತಳಗಳಿಗೆ ತೆರಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಇದೇ ವೇಳೆ, ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಸಮೀಪದ ಘಟಪ್ರಭಾ ನದಿಯ ಸಿದ್ದೇಶ್ವರ ಬ್ಯಾರೇಜ್ ಸಂಪೂರ್ಣ ಜಲಾವೃತಗೊಂಡಿದೆ. ಬ್ಯಾರೇಜ್ ಮೇಲೆ ಸುಮಾರು ಎರಡು ಅಡಿ ಎತ್ತರದಲ್ಲಿ ನೀರು ಹರಿಯುತ್ತಿರುವುದರಿಂದ ಸಾರ್ವಜನಿಕರು ಬ್ಯಾರೇಜ್ ಹಾಗೂ ನದಿ ತೀರದ ಪ್ರದೇಶಗಳಿಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿಯೂ ಮಳೆಯ ಸಾಧ್ಯತೆಯನ್ನು ಸೂಚಿಸಿರುವ ಹಿನ್ನೆಲೆಯಲ್ಲಿ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಆಡಳಿತ ನಿರಂತರ ನಿಗ ವಹಿಸಿದ್ದು, ಜನರು ಅಧಿಕೃತ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.
ಘಟಪ್ರಭಾ ನದಿಯಲ್ಲಿ ಮತ್ತೆ ನೀರಿನ ಹರಿವು ಹೆಚ್ಚಳ - ರೈತರಲ್ಲಿ ಸಂತಸ, ಮುಧೋಳ ದಲ್ಲಿ ಚರಂಡಿ ನೀರು ಸೇರುತ್ತಿದೆ ಎಂಬ ಆರೋಪ :
ಕೆಲ ದಿನಗಳ ಹಿಂದೆ ಕೇವಲ 250 ಕ್ಯೂಸೆಕ್ ಗೆ ಇಳಿದಿದ್ದ ಘಟಪ್ರಭಾ ನದಿಯ ಹರಿವು ಇದೀಗ ಮತ್ತೆ ಹೆಚ್ಚಳವಾಗಿದ್ದು, ನದಿ ಜೀವ ಕಳೆ ಪಡೆದಿದೆ. ನೀರಿನ ಪ್ರಮಾಣ ಏರಿಕೆಯಿಂದ ನೀರಾವರಿ ಹಾಗೂ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂಬ ನಿರೀಕ್ಷೆಯಲ್ಲಿ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.
ಆದರೆ, ನದಿಯಲ್ಲಿ ನೀರಿನ ಹರಿವು ಹೆಚ್ಚಳವಾದ ಬೆನ್ನಲ್ಲೇ ಮತ್ತೊಂದು ಗಂಭೀರ ಸಮಸ್ಯೆ ಬೆಳಕಿಗೆ ಬಂದಿದೆ. ಮುಧೋಳ ನಗರದ ಚರಂಡಿ ನೀರು ನೇರವಾಗಿ ಘಟಪ್ರಭಾ ನದಿಗೆ ಸೇರುತ್ತಿದ್ದು, ನದೀ ನೀರು ಕಲುಷಿತಗೊಳ್ಳುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಚರಂಡಿ ನೀರಿನಿಂದ ನದಿಯ ನೀರಿನ ಗುಣಮಟ್ಟ ಕುಸಿಯುತ್ತಿದ್ದು, ಜಲಚರ ಜೀವಿಗಳು ಹಾಗೂ ಕೃಷಿ ಬಳಕೆಯ ಮೇಲು ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಪರಿಸರ ಕಾಳಜಿ ಹೊಂದಿರುವ ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರು ಚರಂಡಿ ನೀರು, ನದಿಗೆ ಸೇರುವುದನ್ನು ತಡೆಗಟ್ಟಲು ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ನದಿ ಸಂರಕ್ಷಣೆಗೆ ಶಾಶ್ವತ ಯೋಜನೆ ರೂಪಿಸಬೇಕು ಎಂದು ಸಂಬಂಧ ಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.