Belagavi News:
ಚಿಕ್ಕೋಡಿ: ಕಳೆದ ಎರಡು ತಿಂಗಳಿನಿಂದ ಸಂಪೂರ್ಣವಾಗಿ ಬತ್ತಿಹೋಗಿದ್ದ ಕೃಷ್ಣಾ ನದಿಗೆ ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಮತ್ತೆ ಜೀವಕಳೆ ಬಂದಿದೆ. ಸಾಧ್ಯ ನದಿಗೆ ಸುಮಾರು 15 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ರೈತರು ಹಾಗೂ ಸಾರ್ವಜನಿಕರಲ್ಲಿ ಸಂತಸ ಮನೆಮಾಡಿದೆ.
ದಕ್ಷಿಣ ಕರ್ನಾಟಕದ ಜೀವನಾಡಿಗಳಲಿ ಒಂದಾಗಿರುವ ಕೃಷ್ಣಾ ನದಿಯಲ್ಲಿ ನೀರಿನ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿತ್ತು. ಆದರೆ ಈಗ ಒಳಹರಿವು ಗಣನೀಯವಾಗಿ ಹೆಚ್ಚಾಗಿದ್ದು, ನೀರಿನ ಮಟ್ಟದಲ್ಲಿ ಸ್ಪಷ್ಟ ಏರಿಕೆ ಕಂಡುಬರುತ್ತಿದೆ.
ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿ ನದಿಯಲ್ಲಿ ನೀರಿನ ಹರಿವು ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಒಳಹರಿವು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಳೆದ ವಾರದಿಂದ ಮಹಾರಾಷ್ಟ್ರದಲ್ಲಿ ಮುಂಗಾರು ಮಳೆಯ ಅಬ್ಬರ ಹೆಚ್ಚಾಗಿದ್ದು, ಆ ಭಾಗದಲ್ಲಿರುವ ನದಿಗಳು ಹಾಗೂ ಜಲಾಶಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರ ಪರಿಣಾಮವಾಗಿ ಕರ್ನಾಟಕ ಗಡಿಯೊಳಗೆ ಹರಿಯುವ ಕೃಷ್ಣಾ ನದಿಗೂ ಒಳಹರಿವು ಹೆಚ್ಚಾಗಿದೆ.
ಈ ನೀರಿನ ಹರಿವಿನಿಂದ ಬೆಳಗಾವಿ ಜಿಲ್ಲೆ ಸೇರಿದಂತೆ ನದಿಯ ತೀರದ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆ ವ್ಯಕ್ತವಾಗಿದ್ದು, ಕೃಷಿ ಚಟುವಟಿಕೆಗಳಿಗೂ ಭರವಸೆ ಮೂಡಿದೆ. ನದಿಯ ನೀರಿನ ಮಟ್ಟದಲ್ಲಿ ಕ್ರಮೇಣ ಏರಿಕೆ ಕಂಡುಬರುತ್ತಿದ್ದು, ಮುಂದಿನ ದಿನಗಳಲ್ಲಿ ಒಳಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.