belagavi news :
ಚಿಕ್ಕಮಗಳೂರು, ಜುಲೈ 8 : ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ದಲ್ಲಿ ಭೂಕಂಪದ ಆತಂಕ ಎದುರಾಗಿದೆ.
ನಿರಂತರ ಮಳೆಯ ಪರಿಣಾಮ ಚಾರ್ಮಾಡಿ ಘಾಟ್ ನ ಅಲೆಖಾನ್ ಸಮೀಪದ ಗುಡ್ಡ ಕುಸಿತ ಉಂಟಾಗಿ, ಬೃಹತ್ ಬಂಡೆಗಲ್ಲುಗಳು, ಮಣ್ಣು ಮತ್ತು ಮರಗಳು ರಸ್ತೆಗೆ ಉರುಳಿ ಬಿದ್ದಿವೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆ ಹೆಚ್ಚಿದ್ದು, ಘಾಟ್ ಮಾರ್ಗದಲ್ಲಿ ಸಂಚರಿಸುವ ನಾವು ವಾಹನ ಸವಾರರು ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಪಶ್ಚಿಮ ಘಟ್ಟದ ಅತಿ ಸೂಕ್ಷ್ಮ ಪ್ರದೇಶದಲ್ಲಿ ಒಂದಾಗಿರುವ ಚಾರ್ಮಾಡಿ ಘಾಟ್ ನಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ನಿರಂತರ ಮಳೆಯಿಂದ ಭೂಕುಸಿತದ ಅಪಾಯ ಹೆಚ್ಚಾಗಿದೆ. ಹೀಗಾಗಿ ಪರಿಸ್ಥಿತಿಯ ಮೇಲೆ ಸಂಬಂಧಿತ ಇಲಾಖೆ ನಿರಂತರ ನಿಗಾ ವಹಿಸಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ.
ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯ ಹಲವು ಭಾಗಗಳಲ್ಲಿ ಗುಡ್ಡ ಕುಸಿತದ ಪರಿಣಾಮ ಮಣ್ಣು, ಬಂಡೆಗಲ್ಲುಗಳು ಹಾಗೂ ಮರಗಳು ರಸ್ತೆ ಮುರಳಿ ಬಿದ್ದಿದೆ. ಇದರಿಂದ ರಸ್ತೆಯ ಅರ್ಧದಷ್ಟು ಭಾಗ ಆವೃತವಾಗಿದ್ದು, ವಾಹನ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ.
ಹವಾಮಾನ ವೈಪರಿತ್ಯ ಮತ್ತು ನಿರಂತರ ಮಳೆ ಮುಂದುವರಿದರೆ ಚಾರ್ಮಾಡಿ ಘಾಟ್ ನಲ್ಲಿ ಮತ್ತಷ್ಟು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಪರಿಸ್ಥಿತಿ ಗಂಭೀರಗೊಂಡರೆ ರಸ್ತೆ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಪರಿಸ್ಥಿತಿ ಎದುರಾಗುವ ಆತಂಕವು ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಘಾಟ್ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸಿ, ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.
ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ ಸಂಭವಿಸಿ ರಸ್ತೆ ಮೇಲೆ ಮರಗಳು, ಮಣ್ಣು ಹಾಗೂ ಬಂಡೆಗಲ್ಲುಗಳು ಬಿದ್ದಿದ್ದರೂ ಇದುವರೆಗೆ ಜಿಲ್ಲಾಡಳಿತ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ತೆರವು ಕಾರ್ಯಾಚರಣೆ ಆರಂಭವಾಗಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುಡಿಗೆರೆ ತಾಲೂಕಿನ ಕೊಟ್ಟಿಗೆ ಹಾರ ಸಮೀಪದ ಚಾರ್ಮಾಡಿ ಘಾಟ್ ನಲ್ಲಿ ಒಟ್ಟಾಗಿರುವ ಈ ಪರಿಸ್ಥಿತಿಯಿಂದ ವಾಹನ ಸವಾರರು ಆತಂಕಗೊಂಡಿದ್ದಾರೆ. ಸದ್ಯ ಸ್ಥಳೀಯರೇ ಸ್ವಯಂ ಪ್ರೇರಿತರಾಗಿ ರಸ್ತೆ ಮೇಲೆ ಬಿದ್ದಿರುವ ಮರಗಳನ್ನು ತೆರವುಗೊಳಿಸುವ ಕಾರ್ಯದಲಿ ತೊಡಗಿದ್ದು, ಶೀಘ್ರದಲ್ಲೇ ಅಧಿಕೃತವಾಗಿ ತೆರವು ಕಾರ್ಯಾಚರಣೆ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ನಿರಂತರ ಮಳೆಯಿಂದ ಚಾರ್ಮಾಡಿ ಘಾಟ್ ನಲ್ಲಿ ಮತ್ತಷ್ಟು ಗುಡ್ಡ ಕುಸಿತದ ಅಪಾಯ ಎದುರಾಗಿದ್ದು, ವಾಹನ ಸಂಚಾರದ ಸುರಕ್ಷತೆಗಾಗಿ ತಕ್ಷಣ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹ ಕೇಳಿ ಬಂದಿದೆ.