Belagavi News :
ಚೆನ್ನೈ (ತಮಿಳುನಾಡು): ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ವಿದ್ಯಾರ್ಥಿ ನಿಲಯಕ್ಕೆ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದ ಬೆನ್ನಲ್ಲೇ, ಅವರ ದೂರುಗಳಿಗೆ ಪರಿಹಾರ ಕಲ್ಪಿಸಲು ಸಮಾಜ ಕಲ್ಯಾಣ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗಿದೆ.
ಶುಕ್ರವಾರ (ಜು.17) ಚೆನ್ನೈನ ಎಂ.ಸಿ. ರಾಜಾ ಹಾಸ್ಟೆಲ್ ಗೆ ಭೇಟಿ ನೀಡಿದ ಮುಖ್ಯಮಂತ್ರಿ, ಅಲ್ಲಿನ ವಿದ್ಯಾರ್ಥಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ ಮೂಲಸೌಕರ್ಯ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. ಈ ವೇಳೆ ಸಮಾಜ ಕಲ್ಯಾಣ ಸಚಿವ ವನ್ನಿ ಅರುಸಾ ಕೂಡ ಉಪಸ್ಥಿತರಿದ್ದರು.
ಎಂ.ಸಿ. ರಾಜಾ ಹಾಸ್ಟೆಲ್ ನ ಹಳೆಯ ಕಟ್ಟಡವನ್ನು ತೆರವುಗೊಳಿಸಿ ಬಹುಮಹಡಿ ಹೊಸ ಕಟ್ಟಡ ನಿರ್ಮಿಸಲಾಗಿದ್ದರೂ, ಅಲ್ಲಿ ಇನ್ನು ಕೆಲವು ಮೂಲಭೂತ ಸಮಸ್ಯೆಗಳು ಮುಂದುವರಿದಿದ್ದವು, ಕುಡಿಯುವ ನೀರಿನ ಕೊರತೆ, ಆಹಾರದ ಗುಣಮಟ್ಟದ ಸಮಸ್ಯೆ, ಸಿಬ್ಬಂದಿ ಕೊರತೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ವಿದ್ಯಾರ್ಥಿಗಳು ಮುಖ್ಯಮಂತ್ರಿ ಕಚೇರಿ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ದೂರುಗಳನ್ನು ಸಲ್ಲಿಸಿದ್ದರು.
ಮುಖ್ಯಮಂತ್ರಿಯವರ ಎದುರು ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಕಳಪೆಯಾಗಿದೆ. ಅಗತ್ಯ ಪ್ರಮಾಣದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಹೆಚ್ಚಿನ ಸಂಖ್ಯೆಯಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಅಗತ್ಯವಿದೆ ಹಾಗೂ ಕೆಲವು ಸಿಬ್ಬಂದಿ ವಿದ್ಯಾರ್ಥಿಗಳೊಂದಿಗೆ ಸರಿಯಾಗಿ ವರ್ತಿಸುತ್ತಿಲ್ಲ ಎಂದು ಅಹವಾಲುಗಳನ್ನು ಸಲ್ಲಿಸಿದರು.
ಇದರ ಜೊತೆಗೆ, ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ, ಆಧುನಿಕ ಜಿಮ್ ವ್ಯವಸ್ಥೆ, ಆಹಾರದ ಗುಣಮಟ್ಟ ಸುಧಾರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಒಳಗೊಂಡ ಮನವಿಪತ್ರವನ್ನು ವಿದ್ಯಾರ್ಥಿಗಳು ಮುಖ್ಯಮಂತ್ರಿಗೆ ನೀಡಿದ್ದಾರೆ. ಈ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದೆ.
ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಹಾಸ್ಟೆಲ್ ಭೇಟಿಯ ಬಳಿಕ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಕಾರ್ಯಕ್ಕೆ ಸಮಾಜ ಕಲ್ಯಾಣ ಇಲಾಖೆ ವೇಗ ನೀಡಿದೆ. ಭೇಟಿ ವೇಳೆ ಮುಖ್ಯಮಂತ್ರಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅಡುಗೆಮನೆ, ಕ್ಯಾಂಟೀನ್, ಕುಡಿಯುವ ನೀರಿನ ವ್ಯವಸ್ಥೆ ಶೌಚಾಲಯ ಸೇರಿದಂತೆ ಹಾಸ್ಟೆಲ್ ನ ವಿವಿಧ ಪ್ರದೇಶಗಳನ್ನು ಪರಿಶೀಲಿಸಿದ್ದರು.
ವಿದ್ಯಾರ್ಥಿಗಳ ಬೇಡಿಕೆಗಳನ್ನು ಆಧರಿಸಿ ಇಲಾಖೆ ತಕ್ಷಣ ಕ್ರಮ ಕೈಗೊಳ್ಳುತ್ತಿದೆ ಎಂದು ವರದಿಯಾಗಿದೆ. ಹಾಸ್ಟೆಲ್ ನಲ್ಲಿ ನೀಡಲಾಗುವ ಆಹಾರದ ಗುಣಮಟ್ಟ ಸುಧಾರಿಸಲು ಮೆನುವನ್ನು ಪರಿಷ್ಕರಿಸಲಾಗಿದ್ದು, ಎಲ್ಪಿಜಿ ಸಿಲಿಂಡರ್ ಗಳ ಕೊರತೆಯಿಂದ ಸ್ಥಗಿತಗೊಂಡಿದ್ದ ಇಡ್ಲಿ ಮತ್ತು ಚಪಾತಿ ಪೂರೈಕೆಯನ್ನು ಮತ್ತೆ ಆರಂಭಿಸಲು ಆದೇಶಿಸಲಾಗಿದೆ.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ದೊರೆಯುತ್ತಿದ್ದೆಯೇ ಎಂಬುದನ್ನು ಪರಿಶೀಲಿಸಲು ಮೇಲ್ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ. ಇದರ ಜೊತೆಗೆ, ಇದುವರೆಗೆ ಮುಚ್ಚಲಾಗಿದ್ದ ವಾಲಿಬಾಲ್ ಕೋರ್ಟ್ ಅನ್ನು ವಿದ್ಯಾರ್ಥಿಗಳ ಬಳಕೆಗೆ ಮತ್ತೆ ತೆರೆಯಲಾಗಿದೆ.
ಹಾಸ್ಟೆಲ್ ಪ್ರವೇಶ ಸಮಯದಲ್ಲೂ ಬದಲಾವಣೆ ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ರಾತ್ರಿ 12 ಗಂಟೆಯವರೆಗೆ ಹಾಸ್ಟೆಲ್ ಗೆ ಪ್ರವೇಶಿಸಲು ಅವಕಾಶ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಖ್ಯಮಂತ್ರಿ ವಿಜಯ್ ಅವರು ಅನಿರೀಕ್ಷಿತವಾಗಿ ಭೇಟಿ ನೀಡಿದ ಮರುದಿನವೇ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತಿರುವುದಕ್ಕೆ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕ್ರಮವು ವಿದ್ಯಾರ್ಥಿಗಳಲ್ಲಿ ವಿಶ್ವಾಸ ಮೂಡಿಸಿದೆ.