belagavi news :
ಕೊಪ್ಪಳ: ಕೊಪ್ಪಳದಲ್ಲಿ ಬಲ್ಡೋಟಾ ಸ್ಟೀಲ್ ಕಾರ್ ಕಾರ್ಖಾನೆ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಳೆದ ಹಲವು ದಿನಗಳಿಂದ ಕಾರ್ಖಾನೆ ತೆರವುಗೊಳಿಸುವಂತೆ ಆಗ್ರಹಿಸಿ ಧರಣಿ ನಡೆಸುತ್ತಿದ್ದ ರೈತರು ಇದೀಗ ಉಗ್ರ ಪ್ರತಿಭಟನೆಗೆ ಮುಂದಾಗಿದ್ದಾರೆ.
ಕಾರ್ಖಾನೆ ಆವರಣದಲ್ಲಿರುವ ಕೆರೆಯನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಬೇಕು ಎಂಬ ಬೇಡಿಕೆ ಮುಂದಿಟ್ಟಿರುವ ಪ್ರತಿಭಟನಾಕಾರರು, ಕಬ್ಬಿಣದ ಗೇಟ್ ಮುರಿದು ಕಾರ್ಖಾನೆ ಆವರಣಕ್ಕೆ ನುಗ್ಗಿದ್ದಾರೆ. ಈ ಬೆಳವಣಿಗೆಯಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.
ಪ್ರತಿಭಟನೆ ವೇಳೆ ರೈತ ಯಮನೂರಪ್ಪ ಏಕಾಏಕಿ ಕಾರ್ಖಾನೆಗೆ ಆವರಣದ ಕೆರೆಗೆ ಹಾರಿ ಆತಂಕ ಸೃಷ್ಟಿಸಿದರು. ಬಳಿಕ ಅವರು ಈಜಿ ಸುರಕ್ಷಿತವಾಗಿ ದಡ ಸೇರಿದ್ದು, ಸ್ಥಳದಲ್ಲಿದ್ದ ಪ್ರತಿಭಟನಾಕಾರರು ಮತ್ತು ಅಧಿಕಾರಿಗಳು ನಿಟ್ಟುಸಿರು ಬಿಟ್ಟರು.
ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಬಳ್ಳಾರಿ ವಲಯದ ಐಜಿಪಿ ಹರ್ಷ ಅವರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲಿಸ್ ಬಿಗಿ ಭದ್ರತೆ ನಿಯೋಜಿಸಲಾಗಿದ್ದು, ಪ್ರತಿಭಟನಾಕಾರರನ್ನು ಸಮಾಧಾನಪಡಿಸುವ ಪ್ರಯತ್ನ ಮುಂದುವರಿದಿದೆ.
ಬಲ್ಡೋಟಾ ಕಾರ್ಖಾನೆ ವಿರುದ್ಧ ರೈತರ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ