Belagavi News:
ಬೆಂಗಳೂರು: ಸಂಪುಟ ಉಪಸಮಿತಿಯಲ್ಲಿ ಚರ್ಚೆ ನಡೆಸಿ ಶಿಫಾರಸು ಮಾಡಲಾದ ಪ್ರಕರಣಗಳನ್ನು ಕೈಬಿಡಲು ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸದಾಶಿವನಗರ್ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 52 ಪ್ರಕರಣಗಳಲು ವಾಪಸ್ ಪಡೆಯುವ ವಿಚಾರವಾಗಿ ಸ್ಪಷ್ಟನೆ ನೀಡಿದರು. ಕನ್ನಡ ಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳ ಕುರಿತು ಸರ್ಕಾರವು ಕ್ಯಾಬಿನೆಟ್ ಸಬ್ ಕಮಿಟಿಗೆ ಶಿಫಾರಸು ಮಾಡಿತ್ತು ಎಂದು ಹೇಳಿದರು.
ಉಪಸಮಿತಿಯು ಪ್ರತಿಯೊಂದು ಪ್ರಕರಣವನ್ನು ಪ್ರತ್ಯೇಕವಾಗಿ ಪರಿಶೀಲಿಸಿ, ಕಾನೂನಾತ್ಮಕವಾಗಿ ವಾಪಸ್ ಪಡೆಯಲು ಅವಕಾಶವಿದೆ ಎಂಬ ನಿರ್ಣಯಕ್ಕೆ ಬಂದಿತ್ತು. ಅದರ ಆಧಾರದ ಮೇಲೆ ರಾಜ್ಯದಲ್ಲಿ ಒಟ್ಟು 52 ಪ್ರಕರಣಗಳನ್ನು ವಾಪಸ್ ಪಡೆಯಲು ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಪರಮೇಶ್ವರ್ ಮಾಹಿತಿ ನೀಡಿದರು.
ಆಳಂದ ದರ್ಗಾ ಪ್ರಕರಣ ವಾಪಸ್ ಪಡೆದ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ. ಪರಮೇಶ್ವರ್ ಈ ಬಗ್ಗೆ ಹೆಚ್ಚಿನ ವಿವರ ನೀಡಲು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಯಾಕೆ ಕ್ಯಾಬಿನೆಟ್ ಈ ನಿರ್ಧಾರ ತೆಗೆದುಕೊಂಡಿದೆ ಎಂಬುದರ ಬಗ್ಗೆ ಎಲ್ಲ ಆಯಾಮಗಳನ್ನು ಪರಿಗಣಿಸಿ, ಸಮಗ್ರ ಚರ್ಚೆಯ ಬಳಿಕವೇ ತೀರ್ಮಾನ ಮಾಡಲಾಗಿದೆ. ಇದು ಏಕಾಏಕಿ ತೆಗೆದುಕೊಂಡ ನಿರ್ಧಾರವಲ್ಲ" ಎಂದು ಹೇಳಿದರು.
ಇದೇ ವೇಳೆ ಕೇಂದ್ರ ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ಮಾತನಾಡಿದ ಅವರು, ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಈ ಪ್ರಕ್ರಿಯೆಯನ್ನು ನಿಕಟವಾಗಿ ಮಾನಿಟರ್ ಮಾಡಬೇಕು ಎಂದು ಸೂಚಿಸಿದರು.
"ಸರಿಯಾದ ರೀತಿಯಲ್ಲಿ SIR ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಈ ಬಗೆ ಗಮನ ಹರಿಸಬೇಕು ಎಂದು ಹೇಳಲಾಗಿದೆ" ಎಂದು ಪರಮೇಶ್ವರ ತಿಳಿಸಿದರು.
ಕೇಂದ್ರ ಸರ್ಕಾರಕ್ಕೆ ಜನಪರ ಚಿಂತನೆ ಇಲ್ಲ: ಪೆಟ್ರೋಲ್- ಡೀಸೆಲ್ ದರ ವಿಚಾರದಲ್ಲಿ ಪರಮೇಶ್ವರ ವಾಗ್ದಾಳಿ
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತದ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಗೃಹ ಸಚಿವ ಜಿ. ಪರಮೇಶ್ವರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದವರು,"ಕೇಂದ್ರ ಸರ್ಕಾರ ದರ ಹೆಚ್ಚಿಸುತ್ತದೆ, ಆದರೆ ನಾವು ಕಡಿಮೆ ಮಾಡಬೇಕು ಎಂದು ಹೇಳಲಾಗುತ್ತಿದೆ. ನಾವು ಸಬ್ಸಿಡಿ ನೀಡಲು ಎಲ್ಲಿಂದ ಸಾಧ್ಯ? ಕೇಂದ್ರ ಸರ್ಕಾರಕ್ಕೆ ಜನಪರ ಚಿಂತನೆ ಇಲ್ಲವೇ?" ಎಂದು ಪ್ರಶ್ನಿಸಿದರು.
"ಅನೇಕ ಯೋಜನೆಗಳಿಗೆ, ವಿಶೇಷವಾಗಿ ಮನರೇಗಾ ಯೋಜನೆ ಸೇರಿದಂತೆ ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣ ಇನ್ನೂ ಬಂದಿಲ್ಲ. ಇದರಿಂದ ರಾಜ್ಯ ಸರ್ಕಾರದ ಮೇಲೆ ಹೆಚ್ಚುವರಿ ಹೊರ ಬಿದ್ದಿದೆ. ಈ ಪರಿಸ್ಥಿತಿಯಲ್ಲಿ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರ ಕಡಿಮೆ ಮಾಡಿ ಎಂದು ಹೇಳುವುದು ಹೇಗೆ ಸಾಧ್ಯ?" ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಆಡಳಿತಾವಧಿಯನ್ನು ಉಲ್ಲೇಖಿಸಿದ ಪರಮೇಶ್ವರ್, "ಆ ಸಮಯದಲ್ಲಿ ಬೆಲೆ ಎಷ್ಟಿತ್ತು? ಈಗ ಎಷ್ಟಿದೆ? ನಮ್ಮ ಹಣಕಾಸಿ ನಿರ್ವಹಣೆ ಹೇಗೆ ಮಾಡಬೇಕು ಎಂಬುದು ನಮಗೆ ಗೊತ್ತು" ಎಂದರು.
"ಮನರೇಗಾ ಯೋಜನೆಯಲ್ಲಿ ಕೇಂದ್ರ ಸರ್ಕಾರ ಹಣ ನೀಡದಿದ್ದಾಗ, ರಾಜ್ಯವೇ ಹೊಣೆ ಹೊತ್ತು ಜಾರಿಗೆ ತರಬೇಕಾಗುತ್ತದೆ. ಅದರ ಹೊರೆ ಕಡಿಮೆ ಮಾಡುವವರು ಯಾರು?" ಎಂದು ಪ್ರಶ್ನಿಸಿದರು.
ಪೆಟ್ರೋಲ್- ಡೀಸೆಲ್ ದರ ಹಾವು ಕೇಂದ್ರ - ರಾಜ್ಯ ಹಣಕಾಸು ಹಂಚಿಕೆ ವಿಚಾರ ಮತ್ತು ರಾಜಕೀಯ ಚರ್ಚೆಗೆ ಕಾರಣವಾಗಿ.
Also Read:
ಕರ್ನಾಟಕ ಬಿಜೆಪಿಯಲ್ಲಿ ಹೊಸ ನಾಯಕತ್ವದ ಸದ್ದು! ಯಾರಿಗೆ ಸಿಗಲಿದೆ ಅಧ್ಯಕ್ಷ ಪಟ್ಟ?