Belagavi News:
ನವದೆಹಲಿ: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಮತ್ತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಯುದ್ಧ ಪೀಡಿತ ಇರಾನ್ ಗೆ ಪ್ರಯಾಣಿಸದಂತೆ ಕೇಂದ್ರ ಸರ್ಕಾರ ಭಾರತೀಯರಿಗೆ ಸಲಹೆ ನೀಡಿದೆ.
ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇರಾನ್ ನ ಭದ್ರತಾ ಪರಿಸ್ಥಿತಿ ಸುಧಾರಿಸುವವರೆಗೆ ಭಾರತೀಯರು ಅಲ್ಲಿಗೆ ಪ್ರಯಾಣ ಮಾಡುವುದನ್ನು ಮುಂದೂಡುವಂತೆ ಸೂಚಿಸಲಾಗಿದೆ. ಈಗಾಗಲೇ ಇರಾನ್ ನಲ್ಲಿರುವ ಭಾರತೀಯ ನಾಗರಿಕರು ಲಭ್ಯವಿರುವ ವಾಣಿಜ್ಯ ವಿಮಾನಗಳ ಮೂಲಕ ಸುರಕ್ಷಿತವಾಗಿ ಭಾರತಕ್ಕೆ ಮರಳುವಂತೆ ಸರ್ಕಾರ ಮನವಿ ಮಾಡಿದೆ.
ಟೆಹ್ರಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಬಿಡುಗಡೆ ಮಾಡಿರುವ ಪರಿಷ್ಕೃತ ಪ್ರಯಾಣ ಸಲಹೆಯಲ್ಲಿ, ಇತ್ತೀಚಿನ ದಿನಗಳಲ್ಲಿ ಇರಾನ್ ನಲ್ಲಿ ಯುದ್ಧ ಸಂಘರ್ಷ ಮತ್ತು ಅಸ್ಥಿರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಭಾರತೀಯರ ಸುರಕ್ಷತೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.
ಇರಾನ್ ನ ಭದ್ರತಾ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುವವರೆಗೆ ಯಾವುದೇ ಉದ್ದೇಶಕ್ಕಾಗಿ ಅಲ್ಲಿಗೆ ಪ್ರಯಾಣಿಸದಂತೆ ಭಾರತೀಯರಿಗೆ ಸೂಚನೆ ನೀಡಲಾಗಿದೆ.
ಇರಾನ್ ನಲ್ಲಿರುವ ಭಾರತೀಯ ನಾಗರಿಕರು ಪ್ರಸ್ತುತ ಪರಿಸ್ಥಿತಿಯ ಬಗ್ಗೆ ನಿರಂತರ ಮಾಹಿತಿ ಪಡೆದುಕೊಳ್ಳಬೇಕು ಹಾಗೂ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಪಾಲಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಹೆಚ್ಚಿನ ಮಿಲಿಟರಿ ಚಟುವಟಿಕೆ ನಡೆಯುವ ಪ್ರದೇಶಗಳು, ವಿಶೇಷವಾಗಿ ದೇಶದ ದಕ್ಷಿಣ ಕರಾವಳಿ ಭಾಗಗಳಿಗೆ ತೆರಳುವುದನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ.
ಸ್ಥಳೀಯ ಅಧಿಕಾರಿಗಳು ನೀಡುವ ಸೂಚನೆಗಳನ್ನು ಪಾಲಿಸುವಂತೆ ಟೆಹ್ರಾನ್ ನಲ್ಲಿರುವ ಭಾರತೀಯರ ರಾಯಭಾರಿ ಕಚೇರಿ ಭಾರತೀಯರಿಗೆ ಮನವಿ ಮಾಡಿದೆ. ರಾಯಭಾರ ಕಚೇರಿಯಲ್ಲಿ ಇನ್ನೂ ನೋಂದಾಯಿಸದಿರುವ ಇರಾನ್ ನಲ್ಲಿರುವ ಎಲ್ಲಾ ಭಾರತೀಯರು ತಕ್ಷಣ ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಲಾಗಿದ್ದು, ಮುಂದಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಮತ್ತು ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿಯಮಿತವಾಗಿ ಗಮನಿಸುವಂತೆ ತಿಳಿಸಲಾಗಿದೆ.
ತುರ್ತು ಸಹಾಯ ಅಗತ್ಯವಿರುವ ಭಾರತೀಯ ನಾಗರಿಕರಿಗಾಗಿ ರಾಯಭಾರ ಕಚೇರಿ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷ ಮತ್ತು ಭದ್ರತಾ ಆತಂಕಗಳ ನಡುವೆಯೇ ಈ ಪ್ರಯಾಣ ಸಲಹೆ ಹೊರಬಿದ್ದಿದೆ.
ಇತ್ತೀಚಿನ ದಿನಗಳಲ್ಲಿ ಇರಾನ್ ನ ಹಲವು ಪ್ರಮುಖ ಮೂಲ ಸೌಕರ್ಯಗಳ ಮೇಲೆ ದಾಳಿಗಳು ನಡೆದಿದ್ದು, ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ಅಮೆರಿಕದ ಮಿತ್ರ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ಪ್ರತಿ ದಾಳಿ ಮುಂದುವರಿಸಿದೆ. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾದ ಸಂದರ್ಭಗಳಲ್ಲಿ ಭಾರತ ಈ ಹಿಂದೆ ಕೂಡ ಇದೇ ರೀತಿಯ ಸಲಹೆಗಳನ್ನು ನೀಡಿದ್ದು, ಭಾರತೀಯರು ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರುವಂತೆ ಸೂಚಿಸಿತ್ತು.