belagavi news :
ಬೆಂಗಳೂರು: ಪ್ರತಿಷ್ಠಿತ ಸಾಫ್ಟ್ವೇರ್ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ ನಡೆಸುತ್ತಿದ್ದ ಆರೋಪದ ಮೇಲೆ ಎಚ್ಎಎಲ್ ಪೊಲೀಸರು ಜಾಲವೊಂದನ್ನು ಪತ್ತೆ ಹಚ್ಚಿದ್ದಾರೆ. ನಗರದ ಎಚ್ಎಎಲ್ ಔಟರ್ ರಿಂಗ್ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಾಬ್ ಸೆಂಟರ್ ಮೇಲೆ ಮಂಗಳವಾರ ಪೊಲೀಸರು ದಾಳಿ ನಡೆಸಿದ್ದು, ಕಂಪನಿಯ ಕೆಲವು ಪ್ರತಿನಿಧಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿತ ಸಂಸ್ಥೆಯು ಕಳೆದ ಮೂರು ವರ್ಷಗಳಿಂದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು, ಪ್ರತಿಷ್ಠಿತ ಐಟಿ ಕಂಪನಿಗಳಲ್ಲಿ ಸಾಫ್ಟ್ವೇರ್ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ವಂಚಿಸುತ್ತಿತ್ತು ಎನ್ನಲಾಗಿದೆ. ಉದ್ಯೋಗದ ಆಸೆಯಿಂದ ಬಂದ ಅಭ್ಯರ್ಥಿಗಳಿಂದ ಹಣ ಪಡೆದು ವಂಚನೆ ನಡೆಸಲಾಗುತ್ತಿತ್ತು ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಈ ಕಾರ್ಯಾಚರಣೆ ಕೈಗೊಂಡಿದ್ದಾರೆ.
ದಾಳಿ ವೇಳೆ ದಾಖಲೆಗಳು ಹಾಗೂ ಇತರ ಮಾಹಿತಿಗಳನ್ನು ಪೊಲೀಸರು ಪರಿಶೀಲಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ. ಉದ್ಯೋಗದ ಹೆಸರಿನಲ್ಲಿ ನಡೆಯುತ್ತಿರುವ ನಕಲಿ ನೇಮಕಾತಿ ಜಾಲಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಪೊಲೀಸರು ಸಾರ್ವಜನಿಕರಿಗೆ ಸೂಚಿಸಿದ್ದಾರೆ.
ಆಂಧ್ರಪ್ರದೇಶದ ಸುಮಾರು 9 ಪ್ರತಿಷ್ಠಿತ ಸಾಫ್ಟ್ವೇರ್ ಕಂಪನಿಗಳೊಂದಿಗೆ ಸಹಭಾಗಿತ್ವ ಹೊಂದಿರುವುದಾಗಿ ಪ್ರಚಾರ ಮಾಡಿಕೊಂಡು ಉದ್ಯೋಗ ಅಕಾಂಕ್ಷಿಗಳನ್ನು ಸೆಳೆಯುತ್ತಿದ್ದ ಆರೋಪದ ಮೇಲೆ ಎಚ್ ಎಎಲ್ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಆರೋಪಿಗಳು ಸಾಫ್ಟ್ ವೇರ್ ಕಂಪನಿಗಳಲ್ಲಿ ಕೆಲಸ ಹಾಗೂ ಉತ್ತಮ ವೇತನ ಕೊಡಿಸುವುದಾಗಿ ಭರವಸೆ ನೀಡಿ ಅಭ್ಯರ್ಥಿಗಳಿಂದ ಪರೀಕ್ಷೆ ಮತ್ತು ಸಂದರ್ಶನ ಶುಲ್ಕದ ಹೆಸರಿನಲ್ಲಿ ಹಣ ಪಡೆಯುತ್ತಿದ್ದರು ಎನ್ನಲಾಗಿದೆ. ಪ್ರತಿ ಅಭ್ಯರ್ಥಿಯಿಂದ ಸುಮಾರು " 2 ಸಾವಿರದಿಂದ 4 ಸಾವಿರ ರೂಪಾಯಿ" ವರೆಗೆ ಶುಲ್ಕ ಪಡೆದುಕೊಳ್ಳುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.
ವಾರಕ್ಕೆ ಸುಮಾರು 100 ರಿಂದ 200 ಅಭ್ಯರ್ಥಿಗಳಿಗೆ ಪರೀಕ್ಷೆ ಮತ್ತು ಸಂದರ್ಶನ ನಡೆಸಿ, ಬಳಿಕ ಮಾಹಿತಿ ನೀಡುವುದಾಗಿ ಕಳುಹಿಸುತ್ತಿದ್ದರು. ಆದರೆ, ಯಾವುದೇ ಅಭ್ಯರ್ಥಿಗಳಿಗೆ ಉದ್ಯೋಗ ಕೊಡಿಸದೆ, ಕರೆ ಮಾಡಿದಾಗ ಆಯ್ಕೆಯಾಗಿಲ್ಲ ಎಂದು ಹೇಳಿ ತಪ್ಪಿಸಿಕೊಳ್ಳುತ್ತಿದ್ದರು ಎಂದು ದೂರಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಕಳೆದ ಮೂರು ವರ್ಷಗಳಿಂದ ಇದೇ ರೀತಿಯ ವಂಚನೆ ನಡೆಸುತ್ತಿದ್ದರೆಂಬ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಂಚನೆಗೊಳಗಾದ ಅಭ್ಯರ್ಥಿಗಳಿಂದ ದೂರು ಪಡೆದು ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ವೈಟ್ ಫೀಲ್ಡ್ ವಿಭಾಗದ ಡಿಸಿಪಿ " ಸೈದುಲು ಅಡಾವತ್ " , ನಕಲಿ ಸೆಂಟರ್ ನಡೆಸುತ್ತಿದ್ದವರಿಗೆ ನೋಟಿಸ್ ನೀಡಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.