ಮುಖ್ಯಾಂಶಗಳು:
ಶಿಕ್ಷಕರ ನೇಮಕಾತಿ ವಿಳಂಬ
ಬೆಂಗಳೂರಿನಲ್ಲಿ ಆಕಾಂಕ್ಷಿಗಳಿಂದ ಪ್ರತಿಭಟನೆ
ಹುದ್ದೆಗಳ ಭರ್ತಿ ಮಾಡುವವರೆಗೂ ಹೋರಾಟದ ಎಚ್ಚರಿಕೆ
11 ವರ್ಷಗಳಿಂದ ಶಿಕ್ಷಕರ ನೇಮಕಾತಿ ಇಲ್ಲ: ಬೆಂಗಳೂರಿನಲ್ಲಿ ಆಕ್ರೋಶದ ಪ್ರತಿಭಟನೆ
ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರು ನೇಮಕಾತಿ ಪ್ರಕ್ರಿಯೆಯಲ್ಲಿನ ವಿಳಂಬ ಹಾಗೂ ಹುದ್ದೆಗಳ ಕಡಿತವನ್ನು ಖಂಡಿಸಿ ನೂರಾರು ಶಿಕ್ಷಕ ಆಕಾಂಕ್ಷಿಗಳ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಯ ರಾಜ್ಯ ರಾಜ್ಯಾಧ್ಯಕ್ಷ ಕಾಂತ್ ಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಯುವಕರು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರ ಪ್ರಕಾರ, ಕಲ್ಯಾಣ ಕರ್ನಾಟಕ ಸೇರಿದಂತೆ ಹಲವು ಪ್ರದೇಶಗಳಲ್ಲಿ ಕಳೆದ 11 ವರ್ಷಗಳಿಂದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ನಡೆದಿಲ್ಲ. ಇದರಿಂದ ಸಾವಿರಾರು ಅಭ್ಯರ್ಥಿಗಳು ಉದ್ಯೋಗಕ್ಕಾಗಿ ವರ್ಷಗಳ ಕಾಲ ಕಾಯುವಂತಾಗಿದ್ದು ಅವರ ಭವಿಷ್ಯ ಅನಿಶ್ಚಿತತೆಯಲ್ಲಿದೆ ಎಂದು ಆರೋಪಿಸಿದರು.
ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು, ನೇಮಕಾತಿ ಪ್ರಕ್ರಿಯೆಯನ್ನು ವಿಳಂಬ ಮಾಡಿದೆ ಆರಂಭಿಸಬೇಕು ಹಾಗೂ ಹುದ್ದೆಗಳ ಕಡಿತ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.
"ವರ್ಷಗಳ ಕಾಲ ಪರೀಕ್ಷೆಗಳಿಗೆ ತಯಾರಿ ನಡೆಸಿ ಅರ್ಹತೆ ಪಡೆದಿದ್ದರೂ ನೇಮಕಾತಿ ಪ್ರಕ್ರಿಯೆ ಆರಂಭವಾಗದಿರುವುದು ಯುವಕರಿಗೆ ದೊಡ್ಡ ಅನ್ಯಾಯವಾಗಿದೆ. ಸರ್ಕಾರ ಕೊಡಲೆ ಕ್ರಮ ಕೈಗೊಂಡು ಶಿಕ್ಷಕರ ಹುದ್ದೆಗಳ ಭರ್ತಿಗೆ ಸ್ಪಷ್ಟ ವೇಳಾಪಟ್ಟಿ ಪ್ರಕಟಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸರ್ಕಾರ ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ 4,424 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಮೊದಲಿಗೆ ಅನುಮೋದನೆ ನೀಡಲಾಗಿದ್ದರೂ, ನಂತರ ಆ ನಿರ್ಧಾರವನ್ನು ಹಿಂಪಡೆದು ಕೇವಲ 800 ಹುದ್ದೆಗಳಿಗೆ ಇಳಿಸಿರುವುದಕ್ಕೆ ಆಕಾಂಕ್ಷಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಿರ್ಧಾರದಿಂದ ಸಾವಿರಾರು ಅರ್ಹ ಅಭ್ಯರ್ಥಿಗಳ ಭವಿಷ್ಯ ಅತಂತ್ರವಾಗಿದ್ದು, ಸರ್ಕಾರದ ಕಡೆ ಅನ್ಯಾಯಕರವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಪ್ರತಿಭಟನಾಕಾರರ ಪ್ರಕಾರ, ಕಲ್ಯಾಣ ಕರ್ನಾಟಕ ಭಾಗದಲ್ಲೇ ಸುಮಾರು 30,000ಕ್ಕೂ ಹೆಚ್ಚು ಟಿಇಟಿ ಅರ್ಹ ಅಭ್ಯರ್ಥಿಗಳು ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ. ಇನ್ನು ರಾಜ್ಯದಾದ್ಯಂತ ಒಟ್ಟಾರೆ 80,000ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ಶಿಕ್ಷಣ ವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಖಾಲಿ ಹುದ್ದೆಗಳಿದ್ದರೂ ನೇಮಕಾತಿ ಪ್ರಕ್ರಿಯೆಯನ್ನು ಮುಂದೂಡುತ್ತಿರುವ ಸರ್ಕಾರದ ನಿರ್ಧಾರವನ್ನು ಹಿಂತೆಗೆದು, ಮೊದಲಿನಂತೆ ಹೆಚ್ಚಿನ ಸಂಖ್ಯೆಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ನೇಮಕಾತಿ ವಿಳಂಬ ಮುಂದುವರಿದರೆ ಹೋರಾಟವನ್ನು ರಾಜ್ಯಾದ್ಯಂತ ವಿಸ್ತರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಸಂವಿಧಾನದ 371 ಜೆ ಕಲಂ ಅನ್ವಯ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೇಕಡಾ 80ರಷ್ಟು ಹುದ್ದೆಗಳಿಗೆ ಆರ್ಥಿಕ ಇಲಾಖೆಯ ಅನುಮೋದನೆ ಅಗತ್ಯವಿಲ್ಲ ಎಂದು ನಿಯಮವಿದ್ದರೂ, ಸರ್ಕಾರ ನೇಮಕಾತಿ ಪ್ರಕ್ರಿಯೆಯನ್ನು ವಿಳಂಬ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರಂಭಿಸಿದ್ದಾರೆ. ಈ ನಿರ್ಲಕ್ಷ್ಯದಿಂದ ಶಾಲೆಗಳಲ್ಲಿ ಶಿಕ್ಷಕರ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟದ ಮೇಲೆ ನೇರ ಪರಿಣಾಮ ಬೀರುತ್ತಿದೆ ಎಂದು ಅವರು ತಿಳಿಸಿದ್ದಾರೆ.
4,424 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವವರೆಗೂ ತಮ್ಮ ಹೋರಾಟ ಮುಂದುವರಿಸುವುದಾಗಿ ಆಕಾಂಕ್ಷಿಗಳು ಎಚ್ಚರಿಕೆ ನೀಡಿದ್ದಾರೆ. ಸರ್ಕಾರ ಕೂಡಲೇ ಕ್ರಮ ಕೈಗೊಂಡು ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸಬೇಕು, ಇಲ್ಲದಿದ್ದರೆ ಹೋರಾಟವನ್ನು ರಾಜ್ಯಾದ್ಯಂತ ಮತ್ತಷ್ಟು ತೀವ್ರಗೊಳಿಸುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ.
Also Read:
"ಪೆರಿಯಾರ್ ನಾಸ್ತಿಕತೆಯನ್ನು ಒಪ್ಪಲ್ಲ' -ದೇವರ ನಂಬಿಕೆ ಬಗ್ಗೆ ಸಿಎಂ ವಿಜಯ್ ಮಹತ್ವದ ಹೇಳಿಕೆ"