Belagavi News:
ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ನಡೆದಿರುವ ಆರೋಪದ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಶಾಸಕರ ಅಸಮಾಧಾನ ಮತ್ತು ಅನುದಾನದ ವಿಚಾರವೇ ಅಡ್ಡಮತದಾನಕ್ಕೆ ಕಾರಣವಾಗಿರಬಹುದು ಎಂದು ಅವರು ಆರೋಪಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಹಲವು ಶಾಸಕರು ತಮ್ಮ ಕ್ಷೇತ್ರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ಸಿಗುವುದಿಲ್ಲ ಎಂದು ಅಸಮಾಧಾನ ಹೊಂದಿದ್ದಾರೆ. ಇದೇ ಪರಿಸ್ಥಿತಿಯನ್ನು ಬಳಸಿಕೊಂಡು ಇದೀಗ ಸರ್ಕಾರವು " ನಮ್ಮ ಪಕ್ಷಕ್ಕೆ ಮತ ನೀಡಿದರೆ 50 ಕೋಟಿ 100 ಕೋಟಿ ರೂಪಾಯಿ ಅನುದಾನ ನೀಡುತ್ತೇವೆ" ಎಂಬ ಆಮಿಷ ಒಡ್ಡಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆ ಎದುರಿಸುತ್ತಿರುವ ಕೆಲವು ಶಾಸಕರು ಇಂತಹ ಭರವಸೆಗಳಿಗೆ ಒಳಗಾಗಿ ಚಂಚಲ ಮನಸ್ಸು ಮಾಡಿರಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ವಿಧಾನ ಪರಿಷತ್ ಚುನಾವಣೆಯ ಅಡ್ಡಮತದಾನ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಕುಮಾರಸ್ವಾಮಿ ಅವರ ಆರೋಪಗಳಿಗೆ ಕಾಂಗ್ರೆಸ್ ನಿಂದ ಯಾವ ಪ್ರತಿಕ್ರಿಯೆ ಬರುತ್ತದೆ ಎಂಬುದು ಕುತೂಹಲ ಮೂಡಿಸಿದೆ.
ಅಡ್ಡಮತದಾನದಿಂದ ಮೈತ್ರಿಗೆ ಧಕ್ಕೆ ಇಲ್ಲ: ಬಿಜೆಪಿ-ಜೆಡಿಎಸ್ ಒಗ್ಗಟ್ಟು ಮುಂದುವರಿಯಲಿದೆ ಎಂದ ಕುಮಾರಸ್ವಾಮಿ
ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ವಿಚಾರದಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್ .ಡಿ ಕುಮಾರಸ್ವಾಮಿ, ಇದರಿಂದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ನಡುವೆ ಯಾವುದೇ ವಿಶ್ವಾಸದ ಕೊರತೆ ಉಂಟಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅಡ್ಡಮತದಾನದ ಬೆಳವಣಿಗೆ ಮುಂಬರುವ ಸಾರ್ವತ್ರಿಕ ಚುನಾವಣೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿರುವ ಕುಮಾರಸ್ವಾಮಿ, 2017 ರ ರಾಜ್ಯಸಭಾ ಚುನಾವಣೆಯ ಉದಾಹರಣೆಯನ್ನು ಉಲ್ಲೇಖಿಸಿ, ಇಂತಹ ರಾಜಕೀಯ ಬೆಳವಣಿಗೆಗಳು ಮೈತ್ರಿ ಸಂಬಂಧಗಳ ಮೇಲೆ ದೊಡ್ಡ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದ್ದಾರೆ.
ಇದೇ ವೇಳೆ, ಬಿಜೆಪಿ ಮತ್ತು ಜೆಡಿಎಸ್ ನಡುವೆ ಬಿರುಕು ಮೂಡಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಮೈತ್ರಿಯ ಕುರಿತು ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಅಡ್ಡ ಮತದಾನದ ಸಂಪೂರ್ಣ ಮಾಹಿತಿ ನೀಡಲು ಬಿಜೆಪಿ ಹೈ ಕಮಾಂಡ್ ಭೇಟಿಗಾಗಿ ದೆಹಲಿಗೆ ತೆರಳುವುದಾಗಿ ತಿಳಿಸಿದ್ದಾರೆ.
ಅಡ್ಡಮತದಾನ ವಿವಾದದ ನಡುವೆ ಮೈತ್ರಿ ಪಕ್ಷಗಳ ಮುಂದಿನ ನಡೆ ಹಾಗೂ ಬಿಜೆಪಿ ಹೈಕಮಾಂಡ್ ನ ಪ್ರತಿಕ್ರಿಯೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
Also Read:
ವಿದೇಶದಲ್ಲಿರುವ ಕನ್ನಡಿಗರಿಗೆ ಬಂಪರ್ ಗಿಫ್ಟ್ : ಆರನೇ ಗ್ಯಾರಂಟಿ ಘೋಷಿಸಿದ ಡಿಕೆಶಿ