BELAGAVI NEWS:
ಗದಗ: ನಗರಸಭೆ ಮೇಲೆ ಲೋಕಾಯುಕ್ತ ದಾಳಿ : ಲಂಚ ಆರೋಪದ ಹಿನ್ನೆಲೆ ದಾಖಲೆಗಳ ಪರಿಶೀಲನೆ, ಕೋರ್ಟ್ ಆದೇಶದ ಮೇರೆಗೆ ಕಾರ್ಯಚರಣೆ
ಗದಗ : ಲಂಚದ ಬೇಡಿಕೆ ಹಾಗೂ ಸಾರ್ವಜನಿಕರ ಕೆಲಸಗಳಲ್ಲಿ ಅನಗತ್ಯ ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಗದಗ - ಬೆಟಗೇರಿ ನಗರಸಭೆ ಕಚೇರಿ ಮೇಲೆ ಶುಕ್ರವಾರ ಲೋಕಾಯುಕ್ತ ಗದಗ - ಬೆಟಗೇರಿ ನಗರಸಭೆ ಕಚೇರಿ ಮೇಲೆ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳು ಮತ್ತು ಕಡತಗಳನ್ನು ಪರಿಶೀಲಿಸಿದರು.
ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ ನಡೆದ ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಲವು ಗಂಟೆಗಳ ಕಾಲ ನಗರಸಭೆಯ ವಿವಿಧ ವಿಭಾಗಗಳಲ್ಲಿ ಪರಿಶೀಲನೆ ನಡೆಸಿದರು. ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದ ಅರ್ಜಿಗಳು, ಅವುಗಳ ವಿಲೇವಾರಿ ಪ್ರಕ್ರಿಯೆ, ಕಡತಗಳ ನಿರ್ವಹಣೆ ಹಾಗೂ ವಿವಿಧ ಆಡಳಿತಾತ್ಮಕ ದಾಖಲೆಗಳನ್ನು ಅಧಿಕಾರಿಗಳು ಸೂಕ್ಷ್ಮವಾಗಿ ಪರಿಗಣಿಸಿದರು ಎಂದು ತಿಳಿದುಬಂದಿದೆ.
ನಗರ ಸಭೆಯಲ್ಲಿ ಲಂಚದ ಬೇಡಿಕೆ ಹಾಗೂ ಸಾರ್ವಜನಿಕರ ಅರ್ಜಿಗಳ ವಿಲೇವಾರಿ ವಿಳಂಬವಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಪರಿಶೀಲನೆಯ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಲೋಕಾಯುಕ್ತ ದಾಳಿಯಿಂದ ನಗರಸಭೆ ಸಿಬ್ಬಂದಿ ಹಾಗೂ ಅಧಿಕಾರಿಗಳಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಕಾರ್ಯಾಚರಣೆಯಲ್ಲಿ ಒಬ್ಬ ಡಿವೈಎಸ್ಪಿ, ಐವರು ಸಿಪಿಐಗಳು ಸೇರಿದಂತೆ ಗದಗ ಹಾಗೂ ಧಾರವಾಡ ಜಿಲ್ಲೆಯ ಲೋಕಾಯುಕ್ತ ಸಿಬ್ಬಂದಿ ಭಾಗವಹಿಸಿದ್ದರು. ಪರಿಶೀಲನೆಯ ವೇಳೆ ನಗರಸಭೆಯ ಒಟ್ಟು ಎಂಟು ವಿಭಾಗಗಳಿಗೆ ಸಂಬಂಧಿಸಿದ ಕಡತಗಳು, ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದ ಅರ್ಜಿಗಳು ಹಾಗೂ ಅವುಗಳ ವಿಲೇವಾರಿ ಪ್ರಕ್ರಿಯೆಯನ್ನು ಅಧಿಕಾರಿಗಳು ಪರಿಶೀಲಿಸಿದರು. ವಿವಿಧ ಅರ್ಜಿಗಳ ವಿಲೇವಾರಿಯಲ್ಲಿ ಸರ್ಕಾರದ ನಿಯಮಗಳು ಮತ್ತು ಆಡಳಿತಾತ್ಮಕ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಪಾಲಿಸಲಾಗಿದೆ ಎಂಬ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ.
ಮೂಲಗಳ ಪ್ರಕಾರ, ಗದಗ-ಬೆಟಗೇರಿ ನಗರಸಭೆಯಲ್ಲಿ ಸಾರ್ವಜನಿಕರಿಂದ ಲಂಚದ ಬೇಡಿಕೆ, ಕಡತಗಳ ವಿಲೇವಾರಿಯಲ್ಲಿ ಅನಗತ್ಯ ವಿಳಂಬ ಹಾಗೂ ಆಡಳಿತಾತ್ಮಕ ನಿರ್ಲಕ್ಷದ ಆರೋಪಗಳು ಕೇಳಿ ಬಂದಿದ್ದವು . ಈ ಸಂಬಂಧ ಕೆಲವರು ಜಿಲ್ಲಾ ನ್ಯಾಯಾಲಯದ ಮೊರೆ ಹೋಗಿದ್ದರು. ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯವು ಲೋಕಾಯುಕ್ತ ಇಲಾಖೆಗೆ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ದಾಖಲೆಗಳನ್ನು ಪರಿಶೀಲಿಸುವಂತೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ಈ ಕಾರ್ಯಚರಣೆ ನಡೆದಿದೆ.
ಪರಿಶೀಲನೆಯ ವೇಳೆ ಸಂಗ್ರಹಿಸಲಾದ ದಾಖಲೆಗಳು ಮತ್ತು ಮಾಹಿತಿಯ ಆಧಾರದ ಮೇಲೆ ಮುಂದಿನ ಕಾನೂನು ಹಾಗೂ ಆಡಳಿತಾತ್ಮಕ ಕ್ರಮಗಳ ಬಗ್ಗೆ ಲೋಕಾಯುಕ್ತ ಇಲಾಖೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ಬೆಳವಣಿಗೆ ಗದಗ ಜಿಲ್ಲೆಯ ಆಡಳಿತ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ : ₹49.83 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ
ಆದಾಯಕ್ಕಿಂತಲೂ ಅಧಿಕ ಆಸ್ತಿಗಳಿಗೆ ಆರೋಪದಡಿ ಇತ್ತೀಚಿಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಭಾಗಗಳಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಕೋಟ್ಯಾಂತರ ರೂಪಾಯಿ ಮೌಲ್ಯದ ಅಸಮತೋಲಿತ ಆಸ್ತಿಯನ್ನು ಪತ್ತೆ ಹಚ್ಚಿದರು.
ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಚಿತ್ರದುರ್ಗ, ಕಲಬುರಗಿ, ಶಿವಮೊಗ್ಗ, ರಾಯಚೂರು ಹಾಗೂ ತುಮಕೂರು ಸೇರಿದಂತೆ ರಾಜ್ಯದ 53 ಸ್ಥಳಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು ₹49.83 ಕೋಟಿ ಮೌಲ್ಯದ ಆಸ್ತಿ ಪಟ್ಟಿಯಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ್ದರು.
ಈ ದಾಳಿಯಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ನರೇಂದ್ರ ಕುಮಾರ್ ಎಂ ಅವರಿಗೆ ಸೇರಿದ ನಾಲ್ಕು ಸ್ಥಳಗಳ ಮೇಲು ಪರಿಶೀಲನೆ ನಡೆಸಲಾಗಿತ್ತು. ತನಿಖೆ ವೇಳೆ 3 ವಾಸದ ಮನೆಗಳು, 4 ಎಕರೆ ಕೃಷಿ ಜಮೀನು ಸೇರಿದಂತೆ ಸುಮಾರು ₹5.95 ಕೋಟಿ ಮೌಲ್ಯದ ಸ್ಥಿರಾಸ್ತಿ ಪತ್ತೆಯಾಗಿತ್ತು.
ಇದರ ಜೊತೆಗೆ ₹3.10 ಲಕ್ಷ ನಗದು, ₹1.20 ಕೋಟಿ ಮೌಲ್ಯದ ಚಿನ್ನಾಭರಣ, ₹16.60 ಲಕ್ಷ ಮೌಲ್ಯದ ವಾಹನಗಳು ಹಾಗೂ ₹89.16 ಲಕ್ಷ ಬ್ಯಾಂಕ್ ಠೇವಣಿಗಳು ಸೇರಿದಂತೆ ಒಟ್ಟು ₹8.51 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದು ಲೋಕಾಯುಕ್ತ ಇಲಾಖೆ ತಿಳಿಸಿತ್ತು.
ಈ ದಾಳಿಗಳು ರಾಜ್ಯದಲ್ಲಿ ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ಕೈಗೊಂಡ ಮಹತ್ವದ ಕಾರ್ಯಾಚರಣೆಗಳಲ್ಲಿ ಒಂದಾಗಿ ಪರಿಗಣಿಸಲ್ಪಟ್ಟಿದ್ದು, ಅಕ್ರಮ ಆಸ್ತಿ ಗಳಿಕೆ ಆರೋಪಗಳ ಕುರಿತು ತನಿಖೆ ಮುಂದುವರೆದಿದೆ.