belagavi news :
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ವಿಧಾನಸೌಧದಲ್ಲಿ ಚುನಾವಣಾ ಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಈ ವೇಳೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲ್ , ಹಿರಿಯ ನಾಯಕ ಜಯರಾಂ ರಮೇಶ್ ಸೇರಿದಂತೆ ಹಲವು ಸಚಿವರು ಮತ್ತು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು. ಈ ಕಾರ್ಯಕ್ರಮ ಕಾಂಗ್ರೆಸ್ ನ ಶಕ್ತಿ ಪ್ರದೇಶದ ವೇದಿಕೆಯಾಗಿಯೂ ಗಮನ ಸೆಳೆಯಿತು.
ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, " ನಾನು ಇಂದು ನಾಮಪತ್ರ ಸಲ್ಲಿಸಿದ್ದೇನೆ. ಎಲ್ಲ ಶಾಸಕರು ನನಗೆ ಮತ ನೀಡುತ್ತಾರೆ ಎಂಬ ವಿಶ್ವಾಸವಿದೆ. ಜೂನ್ 18 ರಂದು ಚುನಾವಣೆ ನಡೆಯಲಿದೆ" ಎಂದು ಹೇಳಿದರು.
ರಾಜ್ಯದಿಂದ ಒಟ್ಟು ನಾಲ್ಕು ರಾಜ್ಯಸಭಾ ಸ್ಥಾನಗಳು ತೆರವಾಗಲಿದ್ದು, ಪ್ರಸ್ತುತ ವಿಧಾನ ಸಭೆಯ ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸಗೆ ಮೂರು ಸ್ಥಾನಗಳು ಮತ್ತು ಬಿಜೆಪಿಗೆ ಒಂದು ಸ್ಥಾನ ದೊರೆಯುವ ಸಾಧ್ಯತೆ ಇದೆ.
ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನ ಪ್ರಮುಖ ನಾಯಕರು ಖರ್ಗೆ ಜೊತೆ ಕಾಣಿಸಿಕೊಂಡಿರುವುದು ರಾಜ್ಯಸಭೆ ಚುನಾವಣೆಯ ರಾಜಕೀಯ ಕಾವು ಮತ್ತಷ್ಟು ಹೆಚ್ಚಿಸಿದೆ.
ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಐಸಿಸಿ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಉಸ್ತುವಾರಿ ಪವನ್ ಖೇರಾ ಹಾಗೂ ಮನ್ಸೂರ್ ಅಲಿ ಖಾನ್ ಅವರಿಗೆ ಟಿಕೆಟ್ ನೀಡಿದೆ. ಮಲ್ಲಿಕಾರ್ಜುನ್ ಖರ್ಗೆ ಅವರೊಂದಿಗೆ ಈ ಅಭ್ಯರ್ಥಿಗಳ ಹೆಸರುಗಳು ರಾಜಕೀಯ ವಲಯದಲ್ಲಿ ಸಾಕಷ್ಟು ಗಮನ ಸೆಳೆದಿವೆ.
ಜೂನ್ 18ರಂದು ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಜೂನ್ 8 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಚುನಾವಣೆಯ ದಿನ ಸಮೀಪಿಸುತ್ತಿದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ವಿಧಾನಸಭೆ ಸಭಾಂಗಣ ವೀಕ್ಷಿಸಿದ ರಾಹುಲ್ ಗಾಂಧಿ;
ಇದರ ನಡುವೆ, ಕರ್ನಾಟಕ ವಿಧಾನಸೌಧಕ್ಕೆ ಭೇಟಿ ನೀಡಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿಧಾನಸಭೆ ಸಭಾಂಗಣವನ್ನು ವೀಕ್ಷಿಸಿದರು. ಈ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭಾಧ್ಯಕ್ಷ ಯು. ಟಿ. ಖಾದರ್ ಅವರು ಸಭಾಂಗಣದ ವಿಶೇಷತೆಗಳನ್ನು ವಿವರಿಸಿ ತೋರಿಸಿದರು.
ರಾಜ್ಯಸಭೆ ಚುನಾವಣೆ ಸಿದ್ಧತೆಗಳ ಜೊತೆಗೆ ರಾಹುಲ್ ಗಾಂಧಿಯವರ ವಿಧಾನಸೌಧ ಭೇಟಿ ಕೂಡ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
Also Read: