Belagavi News :
ಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ಶೇ. 100 ರಷ್ಟು ಹೆಸರು ಬೇಳೆ ಖರೀದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಧ್ಯಪ್ರದೇಶದಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆ ಉದ್ವಿಗ್ನಕ್ಕೆ ತಿರುಗಿದೆ. ನರ್ಮದಾಪುರಂ ನಲ್ಲಿ ಪ್ರತಿಭಟನಾನಿರತ ರೈತರು ಮತ್ತು ಪೊಲೀಸರ ನಡುವೆ ಭಾರಿ ಘರ್ಷಣೆ ಸಂಭವಿಸಿದೆ.
ಪ್ರತಿಭಟನೆಯ ವೇಳೆ ಕೆಲವು ರೈತರು ಬಸ್ ಗಳ ಮೇಲೆ ಏರಿದ್ದು, ಪೊಲೀಸರು ಅಳವಡಿಸಿದ್ದ ಬ್ಯಾರಿಕೆ ಡ್ ಗಳನ್ನು ಮುರಿದು ಹಾಕಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕ್ರಮ ಕೈಗೊಂಡಿದ್ದು, ತಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ರೈತರ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಲು ಸಚಿವರನ್ನೊಳಗೊಂಡ ಸಮಿತಿ ರಚಿಸಲಾಗಿದೆ. ಶೀಘ್ರದಲ್ಲೇ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳುವ ವಿಶ್ವಾಸವಿದೆಯೆಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿಕೆ ನೀಡಿದ ಬೆನ್ನಲ್ಲೇ ಈ ಘಟನೆ ನಡೆದಿದೆ.
ರೈತರು MSP ಖಾತರಿ, ಹೆಸರುಬೇಳೆ ಖರೀದಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿದ್ದಾರೆ. ಸರ್ಕಾರ ಮತ್ತು ರೈತರ ನಡುವಿನ ಮುಂದಿನ ಮಾತುಕತೆಗಳ ಮೇಲೆ ಎಲ್ಲರ ಗಮನ ನೆಟ್ಟಿದೆ.
ಭೋಪಾಲ್ ನಲ್ಲಿ ರೈತರ ಬೃಹತ್ ಪ್ರತಿಭಟನೆ ಮುಂದುವರಿಕೆ - ನರ್ಮದಾಪುರಂ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ :
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ತೀವ್ರಗೊಂಡಿದೆ. ಸಾವಿರಾರು ಸಂಖ್ಯೆಯಲ್ಲಿ ನೆರೆದ ರೈತರು ಮಂಗಳವಾರ ಭೋಪಾಲ್ ನಲ್ಲಿ ಧರಣಿ ಆರಂಭಿಸಿದ್ದು, ರಾತ್ರಿ ಇಡಿ ಪ್ರತಿಭಟನೆ ಮುಂದುವರಿಸಿದ್ದಾರೆ.
ರೈತರ ಭಾರಿ ಸಮಾವೇಶದಿಂದಾಗಿ ಜನನಿಬಿಡ ನರ್ಮದಾಪುರಂ ಹೆದ್ದಾರಿಯಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ರೈತರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಪ್ರತಿಭಟನಾ ಕಾರರು ಸೋಮವಾರ ತಡ ಸಂಜೆ ಸೆಹೋರ್ ಜಿಲ್ಲೆಯ ಬುಧ್ನಿಗೆ ತಲುಪಿ, ಬಳಿಕ ಮಂಗಳವಾರ ಭೋಪಾಲ್ ಗೆ ಆಗಮಿಸಿದ್ದರು. ರೈತರ ಬೃಹತ್ ಜಾಥಾದಿಂದಾಗಿ ನಗರದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ರೈತರ ಬೇಡಿಕೆಗಳ ಕುರಿತು ರಾಜ್ಯ ಸರ್ಕಾರ ಈಗಾಗಲೇ ಮೊದಲ ಹಂತದ ಮಾತುಕತೆ ನಡೆಸಿದೆ. ಆದರೆ ಈವರೆಗೆ ಯಾವುದೇ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಸರ್ಕಾರ ಮತ್ತು ರೈತರ ನಡುವಿನ ಮುಂದಿನ ಚರ್ಚೆಯತ್ತ ಇದೀಗ ಗಮನ ಹರಿಸಲಾಗಿದೆ.