belagavi news :
ಹಾವೇರಿ ಜಿಲ್ಲೆಯಲ್ಲಿ ಗೋ ರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ತಡೆಗಟ್ಟಲು ಹಾಗೂ ಗೋ ರಕ್ಷಣೆಗೆ ಕಾನೂನಾತ್ಮಕ ಬಲ ನೀಡುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದವರು ವಿಶಿಷ್ಟ ಪ್ರತಿಭಟನೆ ನಡೆಸಿದ್ದಾರೆ.ಹಾನಗಲ್ ನಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ಜನರು ಭಾಗವಹಿಸಿದ್ದು,'ಹಸುವನ್ನು ರಾಷ್ಟ್ರೀಯ ಪ್ರಾಣಿ'ಎಂದು ಘೋಷಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಮನವಿ ಸಲ್ಲಿಸಿದರು.
ಗೋ ರಕ್ಷಣೆ ಹೆಸರಿನಲ್ಲಿ ಕೆಲವು ಕಡೆಗಳಲ್ಲಿ ನೈತಿಕ ಪೊಲೀಸ್ ಗಿರಿ ಹೆಚ್ಚಾಗುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು,ಇದಕ್ಕೆ ಕಡಿವಾಣ ಹಾಕಲು ಸ್ಪಷ್ಟ ಕಾನೂನು ರೂಪಿಸುವ ಅಗತ್ಯವಿದೆ ಎಂದು ಒತ್ತಾಯಿಸಿದರು.ಗೋ ರಕ್ಷಣೆಗೆ ಕಾನೂನಾತ್ಮಕ ಬಲ ದೊರೆತರೆ ಸಮಾಜದಲ್ಲಿ ಶಾಂತಿ ಮತ್ತು ಸಮನ್ವಯತೆ ಕಾಪಾಡಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.ಹಠಾತ್ ನಡೆದ ಈ ಪ್ರತಿಭಟನೆ ಸ್ಥಳೀಯವಾಗಿ ಗಮನ ಸೆಳೆದಿದ್ದು,ಈ ವಿಚಾರ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.ಸರ್ಕಾರ ಈ ಮನವಿಗೆ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದರ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಜಿಲ್ಲೆಯ ಹಾನಗಲ್ ಪಟ್ಟಣದ ಪ್ರಮುಖ ಕೇಂದ್ರವಾದ ಎಂ.ಜೆ.ಸರ್ಕಲ್ ನಲ್ಲಿ ಅಜುಮನ್-ಎ-ಇಸ್ಲಾಂ ಕಮಿಟಿಯ ಪದಾಧಿಕಾರಿಗಳು, ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ನೂರಾರು ಸಾರ್ವಜನಿಕರು ಸೇರಿ ವಿಶೇಷ ರೀತಿಯ ಪ್ರತಿಭಟನೆ ನಡೆಸಿದರು. ಘೋಷಣೆಗಳನ್ನು ಕೂಗದೆ, ಶಾಂತಿಯುತವಾಗಿ ತಮ್ಮ ಬೇಡಿಕೆಗಳನ್ನು ಮಂಡಿಸಿದ ಪ್ರತಿಭಟನಾಕಾರರು ಬಳಿಕ ತಹಸಿಲ್ದಾರ್ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಜಂಟಿ ಮನವಿ ಪತ್ರವನ್ನು ಸಲ್ಲಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಮುದಾಯದ ಮುಖಂಡರು, ದೇಶದ ಕೆಲ ಭಾಗಗಳಲ್ಲಿ ಗೋ ರಕ್ಷಣೆಯ ಹೆಸರಿನಲ್ಲಿನೈತಿಕ ಪೊಲೀಸ್ ಗಿರಿ ನಡೆಯುತ್ತಿದೆ ಎಂದು ಆರೋಪಿಸಿದರು.ಇಂತಹ ಘಟನೆಗಳು ಸಮಾಜದ ಶಾಂತಿಗೆ ಧಕ್ಕೆ ಆಗುತ್ತಿವೆ ಎಂದು ಹೇಳಿದ ಅವರು, ಕಾನೂನು ಕೈಗೆತ್ತಿಕೊಳ್ಳುವ ಪ್ರವೃತ್ತಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದರು.
"ಕೇಂದ್ರ ಸರ್ಕಾರವೇ ಹಸುವನ್ನು ಅಧಿಕೃತವಾಗಿ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿದರೆ, ಗೋ ರಕ್ಷಣೆಗೆ ಇನ್ನಷ್ಟು ಬಲ ಸಿಗುತ್ತದೆ.ಜೊತೆಗೆ ಗೋವಿನ ಹೆಸರಿನಲ್ಲಿ ನಡೆಯುವ ಗಲಾಟೆಗಳು ಹಾಗೂ ರಾಜಕೀಯ ವಿವಾದಗಳಿಗೆ ಅಂತ್ಯ ಸಿಗಬಹುದು"ಎಂದು ಅವರು ಅಭಿಪ್ರಾಯ ಪಟ್ಟರು.
ಈ ವಿಶಿಷ್ಟ ಪ್ರತಿಭಟನೆ ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದ್ದು,ಮುಸ್ಲಿಂ ಸಮುದಾಯವೇ ಮುಂಚೂಣಿಗೆ ನಿಂತು ಗೋ ರಕ್ಷಣೆ ಕುರಿತು ಧ್ವನಿ ಎತ್ತಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
Also Read:
"ಟೇಸ್ಟಿ ಪಾನಿಪುರಿ ಖಾರದ ನೀರು ಹೇಗೆ ಮಾಡುವುದು? ರುಚಿ ಹೆಚ್ಚಿಸುವ ಮಸಾಲೆಗಳ ಟಿಪ್ಸ್"