Belagavi News :
ನವದೆಹಲಿ: ಕೇಂದ್ರ ಶಿಕ್ಷಣ ಸಚಿವರಾದ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿರುವ ಪ್ರಲ್ಹಾದ್ ಜೋಶಿ, ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಹೊಸ ಜವಾಬ್ದಾರಿಯನ್ನು ಕರ್ತವ್ಯ ಪ್ರಜ್ಞೆ ಮತ್ತು ವಿನಮ್ರತೆಯಿಂದ ಸ್ವೀಕರಿಸುವುದಾಗಿ ತಿಳಿಸಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬಳಿಕ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕರಿಸಿದ ಬಳಿಕ, ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವರಾಗಿರುವ ಪ್ರಲ್ಹಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನು ನೀಡಲಾಗಿದೆ.
ಶನಿವಾರ ರಾತ್ರಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಲ್ಹಾದ್ ಜೋಶಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 12 ವರ್ಷಗಳ ಅವಧಿಯಲ್ಲಿ ಹಲವು ಐತಿಹಾಸಿಕ ಸಾಧನೆಗಳನ್ನು ಮಾಡಲಾಗಿದೆ ಎಂದು ಹೇಳಿದರು. ಕಳೆದ
ನಾಲ್ಕೈದು ವರ್ಷಗಳಲ್ಲಿ ಧರ್ಮೇಂದ್ರ ಪ್ರಧಾನ್ ಅವರು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುವುದರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಅವರು ಶ್ಲಾಘಿಸಿದರು.
" ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ನನ್ನ ಸಾಮರ್ಥ್ಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಿ, ನೀಡಿರುವ ಜವಾಬ್ದಾರಿಗಳನ್ನು ಸಮರ್ಪಣಾಭಾವದಿಂದ ನಿಭಾಯಿಸಲು ಪ್ರಯತ್ನಿಸುತ್ತೇನೆ" ಎಂದು ಜೋಶಿ ತಿಳಿಸಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿದ್ಯಾರ್ಥಿಗಳಿಂದ ಪ್ರತಿಭಟನೆಗಳು ನಡೆದಿದ್ದವು, ಈ ಬೆಳವಣಿಗೆಗಳ ಬಳಿಕ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು ಕಳೆದ ಕೆಲವು ದಿನಗಳ ಘಟನೆಗಳ ಸರಣಿಯಿಂದ ಬೇಸರಗೊಂಡಿದ್ದೇನೆ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದರು.
ಇದೇ ವೇಳೆ, ಪ್ರಲ್ಹಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೊಣೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕಾಕ್ರೋಚ್ ಜನತಾ ಪಕ್ಷದ ಮುಖ್ಯ ವಕ್ತಾರ ಸೌರವ್ ದಾಸ್, "ಯಾರೇ ಶಿಕ್ಷಣ ಸಚಿವರಾದರು ಯುವಕರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು" ಎಂದು ಹೇಳಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯುವುದು ಸೇರಿದಂತೆ ವಿದ್ಯಾರ್ಥಿಗಳ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿರುವ ಅವರು, ಹೊಸ ಶಿಕ್ಷಣ ಸಚಿವರನ್ನು ಶೀಘ್ರದಲ್ಲೇ ಭೇಟಿ ಮಾಡಲಾಗುವುದು. ಒಂದು ತಿಂಗಳೊಳಗೆ ಸಭೆ ನಡೆಸುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದು ತಿಳಿಸಿದ್ದಾರೆ. ಮುಂದಿನ ಬೆಳವಣಿಗೆಗಳ ಮೇಲೆ ಗಮನ ಹರಿಸಲಾಗುವುದು ಎಂದು ಹೇಳಿದ್ದಾರೆ.