Belagavi News:
ಬೆಳಗಾವಿ: ಸದ್ಯಕ್ಕೆ ಮಳೆ ಇಲ್ಲ ಎನ್ನುವ ಆತಂಕ ದೂರವಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಮಳೆ ಮುಂದುವರಿದರೆ ಜಲಾಶಯಗಳಲ್ಲಿ ನಾಲ್ಕೈದು ತಿಂಗಳ ಅಗತ್ಯಕ್ಕೆ ಸಾಕಷ್ಟು ನೀರು ಸಂಗ್ರಹವಾಗಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರಕೃತಿ ನಿರ್ವಹಣಾ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು , ಜಿಲ್ಲೆಯಲ್ಲಿ ಈಗಾಗಲೇ ಯಾವುದೇ ಗಂಭೀರ ನೀರಿನ ಸಮಸ್ಯೆ ಉದ್ಭವಿಸಿಲ್ಲ ಎಂದು ಹೇಳಿದರು. ಮೊದಲೇ ಕುಡಿಯುವ ನೀರಿನ ಅಗತ್ಯಕ್ಕಾಗಿ ಜಲಾಶಯಗಳಲ್ಲಿ ನೀರನ್ನು ಸಂಗ್ರಹಿಸಿಟ್ಟಿದ್ದೇವೆ. ಇಂದಿನಿಂದ ಜಲಾಶಯಗಳಿಗೆ ನೀರು ಹರಿದು ಬರುತ್ತಿದ್ದು, ಮುಂದಿನ ಎರಡು- ಮೂರು ದಿನಗಳಲ್ಲಿ ಒಳಹರಿವು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಅವರು ಮಾಹಿತಿ ನೀಡಿದರು.
ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಉತ್ತಮ ಮಳೆ ಯಾಗುವ ಸಾಧ್ಯತೆ ಇರುವುದರಿಂದ ಪರಿಸ್ಥಿತಿ ಇನ್ನಷ್ಟು ಸುಧಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಚಿವರು, ಜಿಲ್ಲೆಯಲ್ಲಿ 29ರಷ್ಟು ಮಳೆ ಕೊರತೆ ಇದ್ದರು ಈಗಿನ ಮಳೆಯಂತೆ ಮುಂದುವರಿದರೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದು ಹೇಳಿದರು.
ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಕೆಲವೇ ಕಡೆಗಳಲ್ಲಿ ಮಾತ್ರ ನೀರಿನ ಸಮಸ್ಯೆ ಕಾಣಿಸಿಕೊಂಡಿದ್ದು, ರಾಕಸಕೊಪ್ಪ ಜಲಾಶಯಕ್ಕೂ ನೀರು ಹರಿದು ಬರಲು ಆರಂಭವಾಗಿದೆ. ಒಂದು ವಾರದಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು. ಇಂದಿನಿಂದ ಬೆಳಗಾವಿ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ ಎಂದು ಅವರು ತಿಳಿಸಿದರು.
ಕೃಷಿ ಚಟುವಟಿಕೆಗಳ ಕುರಿತು ಮಾತನಾಡಿದ ಅವರು, ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ಕಾರ್ಯ ನಡೆದಿದ್ದು, ಈಗಿನ ಮಳೆ ಬೆಳೆಗಳಿಗೆ ಅತ್ಯಂತ ಉಪಯುಕ್ತವಾಗಲಿದೆ ಎಂದು ಹೇಳಿದರು.
ರಾಮನಗರ, ಸವದತ್ತಿ ಸೇರಿದಂತೆ ಕೆಲವೆಡೆ ಮಳೆ ಕಡಿಮೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಮುಂದಿನ ಎಂಟು ದಿನಗಳಲ್ಲಿ ಅಲ್ಲಿಯೂ ಉತ್ತಮ ಮಳೆ ಯಾಗುವ ನಿರೀಕ್ಷೆ ಇದೆ. ಅಗತ್ಯವಿದ್ದರೆ ಸರ್ಕಾರ ಮಟ್ಟದಲ್ಲಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬೆಳಗಾವಿ ನಗರದಲ್ಲಿ ಪೈಪ್ ಲೈನ್ ಕಾಮಗಾರಿಗಾಗಿ ರಸ್ತೆಗಳು ಅಗೆಯಲಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದು ಎಲ್ & ಟಿ ಕಂಪನಿಯ ನಿರ್ವಹಣಾ ಸಮಸ್ಯೆಯಾಗಿದ್ದು, ಈ ಕುರಿತು ಡಿಸಿ ಹಾಗೂ ಪಾಲಿಕೆ ಆಯುಕ್ತರೊಂದಿಗೆ ಸಭೆ ನಡೆಸಲಾಗಿದೆ. ಮಳೆಗಾಲದಲ್ಲಿ ಕಾಮಗಾರಿ ಸ್ಥಗಿತಗೊಳಿಸಲು ಮತ್ತು ರಸ್ತೆ ದುರಸ್ತಿಗೆ ಸೂಚನೆ ನೀಡಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಜಿಲ್ಲೆಯಾದ್ಯಂತ ಹದಗೆಟ್ಟಿರುವ ರಸ್ತೆಗಳು ಸದ್ಯಕ್ಕೆ ತಾತ್ಕಾಲಿಕವಾಗಿ ದುರಸ್ತಿ ಮಾಡಲಾಗುವುದು, ಮಳೆ ನಿಂತ ಬಳಿಕ ಹಂತ ಹಂತವಾಗಿ ಹೊಸ ರಸ್ತೆ ನಿರ್ಮಾಣ ಕಾರ್ಯ ಆರಂಭಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಿನ್ನೆ ಹಾವೇರಿಯಲ್ಲಿ ನಡೆದ ಮೋಡ ಬಿತ್ತನೆ (ಕ್ಲೌಡ್ ಸೀಡಿಂಗ್) ಪ್ರಯೋಗದ ಬಗ್ಗೆ ಉಲ್ಲೇಖಿಸಿ, ರಾಜ್ಯದಲ್ಲಿ ಅಗತ್ಯವಿದ್ದರೆ ಅಂತಹ ಪ್ರಯತ್ನಗಳನ್ನು ಪರಿಗಣಿಸಲಾಗುವುದು ಎಂದಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರ ಅಂತಿಮವಾಗಿದ್ದು, 20 ಸ್ಥಾನಗಳು ಖಾಲಿ ಇರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಸಂಪುಟ ವಿಸ್ತರಣೆ ಆಗುವ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ.
ಅದೇ ವೇಳೆ, ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಫುಟ್ಪಾತ್ ಅತಿಕ್ರಮಣ ತೆರವು ಕಾರ್ಯ ನಡೆಯುತ್ತಿದ್ದು, ಮುಂದಿನ ಕ್ರಮವಾಗಿ ಸಂಬಂಧಿತರಿಗೆ ನೋಟಿಸ್ ನೀಡಿ ನಂತರ ಮಾತ್ರ ತೆರವು ಕಾರ್ಯಾಚರಣೆ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.