belagavi news :
ಚಿಕ್ಕೋಡಿ: 10ನೇ ತರಗತಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಕನ್ನಡ ಶಿಕ್ಷಕನ ಮೇಲೆ ಪೋಷಕರು ಆಕ್ರೋಶ ವ್ಯಕ್ತಪಡಿಸಿ ಶಾಲೆಯ ನುಗ್ಗಿ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅವರನ್ನು ತಕ್ಷಣ ಅಮಾನತುಗೊಳಿಸುವಂತೆ ಡಿಡಿಪಿಐ ಆದೇಶಿಸಿದ್ದಾರೆ.
ಚಿಕ್ಕೋಡಿಯ ಪ್ರೌಢಶಾಲೆಯೊಂದರಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಕನ್ನಡ ಶಿಕ್ಷಕನ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. 10ನೇ ತರಗತಿಯ ಕನ್ನಡ ವಿಷಯದಲ್ಲಿ ಪಾಸ್ ಮಾಡಿಸುವುದಾಗಿ ಆಮಿಷವೊಡ್ಡಿ, ಶಾಲೆಯ ಕೊಠಡಿ ಹಾಗೂ ಶೌಚಾಲಯಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ದು ಕಿರುಕುಳ ನೀಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಐದಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಕನ ವರ್ತನೆ ಬಗ್ಗೆ ಮಾಹಿತಿ ನೀಡಿದ ಬಳಿಕ ಪೋಷಕರು ಶಾಲೆಯ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತು ಮಾಹಿತಿ ಪೊಲೀಸರು ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಶಿಕ್ಷಣ ಇಲಾಖೆ, ಶಿಕ್ಷಕನನ್ನು ತಕ್ಷಣದಿಂದಲೇ ಅಮಾನತುಗೊಳಿಸಲು ಕ್ರಮ ಕೈಗೊಂಡಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಶಿಕ್ಷಕನ ಕೃತ್ಯದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ವಿದ್ಯಾರ್ಥಿಗಳ ಪೋಷಕರು ಶಾಲೆಗೆ ನುಗ್ಗಿ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಶಾಲಾ ಆವರಣದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಗಲಾಟೆ ಹೆಚ್ಚಾಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಚಿಕ್ಕೋಡಿ ಠಾಣೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣದ ಗಂಭೀರತೆಯನ್ನು ಅರಿತ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಸೀತಾರಾಮು ಅವರು ತಕ್ಷಣ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂತ್ರಸ್ತ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಾಲೆಯ ಮುಖ್ಯ ಶಿಕ್ಷಕರಿಂದ ಘಟನೆಯ ಕುರಿತು ಸಂಪೂರ್ಣ ಮಾಹಿತಿ ಕಲೆಹಾಕಿದರು.
ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಡಿಪಿಐ ಸೀತಾರಾಮು , "ಪೋಷಕರೊಂದಿಗೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದೇವೆ. ಇಂತಹ ಘಟನೆಗಳು ನಡೆಯಬಾರದು ಮತ್ತು ಮುಂದೆಯೂ ಮರುಕಳಿಸಬಾರದು. ಆರೋಪ ಎದುರಿಸುತ್ತಿರುವ ಶಿಕ್ಷಕನನ್ನು ಕೂಡಲೇ ಅಮಾನತುಗೊಳಿಸಲಾಗುವುದು. ಅಲ್ಲದೇ, ಪ್ರಕರಣದ ಕುರಿತು ಚಿಕ್ಕೋಡಿ ಬಿಇಒ ನೇತೃತ್ವದಲ್ಲಿ ಸಮಗ್ರ ತನಿಖೆ ನಡೆಸಿ ಶೀಘ್ರವೇ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ" ಎಂದು ತಿಳಿಸಿದ್ದಾರೆ.
ಈ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ, ಶಿಕ್ಷಣ ಇಲಾಖೆ ಮತ್ತು ಪೊಲೀಸ್ ಇಲಾಖೆ ಎರಡು ಘಟನೆಯ ಕುರಿತು ಪ್ರತ್ಯೇಕವಾಗಿ ಪರಿಶೀಲನೆ ನಡೆಸುತ್ತಿವೆ.
ಸೂಚನೆ: ಈ ಪ್ರಕರಣದಲ್ಲಿ ಶಿಕ್ಷಕರ ವಿರುದ್ಧ ಆರೋಪಗಳು ಕೇಳಿಬಂದಿದ್ದು, ತನಿಖೆ ಪ್ರಗತಿಯಲ್ಲಿದೆ. ಅಧಿಕೃತ ತನಿಖೆ ಮತ್ತು ಕಾನೂನು ಪ್ರಕ್ರಿಯೆಯ ಬಳಿಕವೇ ಆರೋಪಗಳ ಸತ್ಯಾಸತ್ಯತೆ ನಿರ್ಧಾರವಾಗಲಿದೆ.
Also Read:
ಭಾರತೀಯ ನಾವಿಕರ ಸಾವಿಗೆ ನ್ಯಾಯ ಬೇಕು : ಟ್ರಂಪ್ ಜೊತೆ ಮೋದಿ ಚರ್ಚಿಸಲಿ ಎಂದ ಪ್ರಿಯಾಂಕಾ ಗಾಂಧಿ ವಾದ್ರಾ