belaagvi news :
ಬೆಂಗಳೂರು: ಕರ್ನಾಟಕದಲ್ಲಿ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ರದ್ದುಪಡಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿರುವ ಅಶೋಕ್, ಅಕ್ರಮ ಬಾಂಗ್ಲಾದೇಶಿಯರಿಗೆ ರಾಜ್ಯದಲಿ ಶಾಶ್ವತ ನೆಲೆ ಕಲ್ಪಿಸುವ ಉದ್ದೇಶ ಇದರ ಹಿಂದೆ ಇದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಿರುವ ಬಗ್ಗೆ ಮಾಹಿತಿ ಇದೆ ಎಂದು ಹೇಳಿದ ಅವರು, ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವುದರಿಂದ ಅವರಿಗೆ ವಿವಿಧ ಸರ್ಕಾರಿ ಸೌಲಭ್ಯಗಳು ದೊರೆಯುವ ಸಾಧ್ಯತೆ ಇದೆ ಎಂದು ದೂರಿದ್ದಾರೆ.
ಶಾಶ್ವತ ನಿವಾಸ ಪ್ರಮಾಣ ಪತ್ರದ ಆಧಾರದ ಮೇಲೆ ರೇಷನ್ ಕಾರ್ಡ್, ಆರೋಗ್ಯ ಸೌಲಭ್ಯಗಳು ಹಾಗೂ ವಸತಿ ಯೋಜನೆಗಳಂತಹ ಸೌಲಭ್ಯಗಳನ್ನು ಪಡೆಯಲು ಅವಕಾಶ ಸಿಗಬಹುದು ಎಂದು ಅಶೋಕ್ ಹೇಳಿದ್ದಾರೆ. ಈ ಮೂಲಕ ರಾಜ್ಯದ ಜನಸಂಖ್ಯಾ ಸಮತೋಲನ ಮತ್ತು ಮತದಾರರ ಪಟ್ಟಿಯ ಮೇಲೆ ಪರಿಣಾಮ ಬೀರಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸಿ, ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಕ್ರಮವನ್ನು ತಕ್ಷಣ ರದ್ದುಪಡಿಸಬೇಕು ಎಂದು ರಾಜ್ಯಪಾಲರಿಗೆ ಸಲ್ಲಿಸಿರುವ ಮನವಿಯನ್ನು ಒತ್ತಾಯಿಸಲಾಗಿದೆ.
ಈ ನಿರ್ಧಾರವು ದೇಶದ ಭದ್ರತೆಗೆ ಅಪಾರ ಉಂಟುಮಾಡಬಹುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ. ಕೆಲವು ಸಂಘಟನೆಗಳ ಉದಾಹರಣೆ ನೀಡಿದ ಅವರು, ಅಕ್ರಮ ವಲಸಿಗರ ವಿಚಾರದಲ್ಲಿ ಸರ್ಕಾರ ಹೆಚ್ಚು ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.
ವಿದೇಶಿಯರ ಸಂಬಂಧಿತ ವಿಚಾರಗಳಲ್ಲಿ ಕೇಂದ್ರ ಸರ್ಕಾರದ ಅಧಿಕಾರ ವ್ಯಾಪ್ತಿಯಿದ್ದು, ರಾಜ್ಯ ಸರ್ಕಾರ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಮೂಲಕ ಕಾನೂನು ವ್ಯಾಪ್ತಿಯನ್ನು ಮೀರುತ್ತಿದೆ ಎಂದು ಅಶೋಕ್ ಆರೋಪಿಸಿದ್ದಾರೆ. ಈ ಕ್ರಮವು ದೇಶದ ಕಾನೂನು ವ್ಯವಸ್ಥೆಗೆ ಸಮಸ್ಯೆ ಉಂಟುಮಾಡಬಹುದು ಎಂದು ಅವರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ನಿರ್ಧಾರವನ್ನು ತಕ್ಷಣ ರದ್ದುಪಡಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದಾಗಿ ಅಶೋಕ್ ತಿಳಿಸಿದ್ದಾರೆ. ತಮ್ಮ ಮನವಿಯನ್ನು ರಾಜ್ಯಪಾಲರು ಆಲಿಸಿದ್ದು, ಸರ್ಕಾರದೊಂದಿಗೆ ಈ ಕುರಿತು ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಶಾಶ್ವತ ನಿವಾಸ ಪ್ರಮಾಣಪತ್ರದ ವಿಚಾರ ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.
11 ಜನರ ಸಾವಿಗೆ ಯಾರು ಹೊಣೆ? ಚಿನ್ನಸ್ವಾಮಿ ಸ್ಟೇಡಿಯಂ ದುರಂತದ ಬಗ್ಗೆ ಅಶೋಕ್ ಕಿರಿ
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಕ್ಲೀನ್ ಚಿಟ್ ನೀಡಿರುವ ವಿಚಾರಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳು ನಿರಪರಾಧಿಗಳಾದರೆ, ಈ ದುರಂತಕ್ಕೆ ಹೊಣೆಗಾರರು ಯಾರು? 11 ಜನರ ಸಾವಿಗೆ ನ್ಯಾಯ ಎಲ್ಲಿದೆ? ಎಂದು ಅಶೋಕ್ ಪ್ರಶ್ನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿತ್ತು ಎಂದು ಅವರು ಆಗ್ರಹಿಸಿದ್ದಾರೆ.
ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದ ವೇಳೆ ಪತ್ನಿ ಮತ್ತು ಮಕ್ಕಳೊಂದಿಗೆ ವೇದಿಕೆಯಲ್ಲಿದ್ದವರ ಜವಾಬ್ದಾರಿಯ ಬಗ್ಗೆಯೂ ತನಿಖೆ ನಡೆಯಬೇಕಿತ್ತು ಎಂದು ಅಶೋಕ್ ಹೇಳಿದ್ದಾರೆ. ಆದರೆ, 11 ಸಾವಿಗೆ ಯಾರೂ ಕಾರಣರಲ್ಲ ಎಂಬ ರೀತಿಯಲ್ಲಿ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಮುಂದಿನ ದಿನಗಳಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದ ತನಿಖೆಯನ್ನೂ " ಸಿಬಿಐಗೆ ವಹಿಸಲಾಗುವುದು" ಎಂದು ಅಶೋಕ್ ತಿಳಿಸಿದ್ದಾರೆ. ಪ್ರಕರಣದಲ್ಲಿ ಸಂಪೂರ್ಣ ಸತ್ಯ ಹೊರಬರಲು ಸ್ವತಂತ್ರ ತನಿಖೆ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.