Belagavi News:
ನವದೆಹಲಿ: ಲೋಕಸಭೆಯಲ್ಲಿ ಬುಧವಾರ ಅಂಗೀಕಾರಗೊಂಡಿರುವ ಸಾರ್ವಜನಿಕ ಪರೀಕ್ಷೆ ( ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026ಯನ್ನು ಕೇಂದ್ರ ಸರ್ಕಾರ ಇಂದು ರಾಜ್ಯಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ. ಮಧ್ಯಾಹ್ನ 2 ಗಂಟೆಗೆ ಮಸೂದೆ ಕುರಿತು ಚರ್ಚೆ ಆರಂಭವಾಗಲಿದ್ದು, ಸುಮಾರು ಏಳು ಗಂಟೆಗಳ ಕಾಲ ಸದನದಲ್ಲಿ ವಿಸ್ತೃತ ಚರ್ಚೆ ನಡೆಯುವ ನಿರೀಕ್ಷೆಯಿದೆ.
ಮಸೂದೆಯ ಮೇಲಿನ ಚರ್ಚೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕ ಮುಕುಲ್ ವಾಸ್ನಿಕ್ ಸೇರಿದಂತೆ ಹಲವು ವಿಪಕ್ಷದ ಸದಸ್ಯರು ಪಾಲ್ಗೊಂಡು ಸರ್ಕಾರವನ್ನು ಪ್ರಶ್ನಿಸುವ ಸಾಧಿಸಿ ಇದೆ ಎಂದು ಸಂಸತ್ ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ ಬುಧವಾರ ರಾಜ್ಯಸಭೆಯಲ್ಲಿ ಮಾತನಾಡಿದ್ದ ಖರ್ಗೆ, ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಲಾಠಿಚಾರ್ಜ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಜುಲೈ 20ರಂದು ನಡೆದ ಪ್ರತಿಭಟನೆಯಲ್ಲಿ ಪೊಲೀಸರ ಕ್ರಮದ ಹೊಣೆಗಾರಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ವಹಿಸಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿರುವ ಬೆನ್ನಲ್ಲೇ ಖರ್ಗೆ ಕೂಡ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.
ಇಂದಿನ ರಾಜ್ಯಸಭೆ ಕಾರ್ಯಸೂಚಿಯಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ (ತಿದ್ದುಪಡಿ) ಮಸೂದೆ-2026 ಕೂಡ ಪರಿಗಣನೆಗೆ ಬರಲಿದೆ. ಆದರೆ ಸದನ ಆರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ಕ್ರಮ ಹಾಗೂ ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗವಾಗಿದೆ ಎಂಬ ಆರೋಪಗಳ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷಗಳು ಒತ್ತಾಯಿಸುವ ಸಾಧ್ಯತೆಯಿದೆ.
ಲೋಕಸಭೆಯಲ್ಲಿ ಈಗಾಗಲೇ ಅಂಗೀಕಾರಗೊಂಡಿರುವ ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಮತ್ತು ಸಂಘಟಿತ ವಂಚನೆಗಳ ವಿರುದ್ಧ ಕಾನೂನು ಚೌಕಟ್ಟನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಿದೆ. ಅಕ್ರಮದಲ್ಲಿ ಭಾಗಿಯಾಗುವವರಿಗೆ ಕಠಿಣ ಶಿಕ್ಷೆ ಹಾಗೂ ಹೆಚ್ಚಿನ ದಂಡ ವಿಧಿಸುವ ಪ್ರಸ್ತಾವವೂ ಮಸೂದೆಯಲ್ಲಿದೆ.
ಮಸೂದೆಯ ಪ್ರಮುಖ ಅಂಶಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತನಿಖೆಗೆ ವಿಶೇಷ ಕಾರ್ಯಪಡೆ ರಚನೆ, ಎರಡು ತಿಂಗಳೊಳಗೆ ತನಿಖೆ ಪೂರ್ಣಗೊಳಿಸುವ ಗಡುವು, ಆರೋಪಪಟ್ಟಿ ಸಲ್ಲಿಸಿದ ಮೂರು ತಿಂಗಳೊಳಗೆ ವಿಚಾರಣೆ ಮುಗಿಸಲು ವಿಶೇಷ ತ್ವರಿತ ನ್ಯಾಯಾಲಯಗಳ ಸ್ಥಾಪನೆ ಸೇರಿವೆ. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಲೋಕಸಭೆಯಲ್ಲಿ ಸಮರ್ಥಿಸಿದ್ದರು.
ಆದರೆ ವಿಪಕ್ಷಗಳು ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದು, ಪರೀಕ್ಷಾ ವ್ಯವಸ್ಥೆಯ ಮೂಲಭೂತ ದೌರ್ಬಲ್ಯಗಳನ್ನು ಸರಿಪಡಿಸುವ ಬದಲು ಕೇವಲ ಕಠಿಣ ಶಿಕ್ಷೆಗಳ ಮೇಲೆಯೇ ಸರ್ಕಾರ ಹೆಚ್ಚು ಒತ್ತು ನೀಡಿದೆ ಎಂದು ಟೀಕಿಸಿವೆ. ಇಂದು ರಾಜ್ಯಸಭೆಯಲ್ಲಿ ನಡೆಯಲಿರುವ ಚರ್ಚೆಯಲ್ಲಿ ಈ ವಿಷಯಗಳ ಕುರಿತು ಸರಕಾರ ಮತ್ತು ವಿಪಕ್ಷಗಳ ನಡುವೆ ತೀವ್ರ ವಾಕ್ಸಮರ ನಡೆಯುವ ಸಾಧ್ಯತೆ ಇದೆ.