Belagavi News:
ಬೆಳಗಾವಿ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಕುಂದಾನಗರ ಬೆಳಗಾವಿಯ ಜೀವನಾಡಿಯಾಗಿರುವ ರಾಕಸಕೊಪ್ಪ ಜಲಾಶಯದಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿದು ಡೆಡ್ ಸ್ಟೋರೇಜ್ ಹಂತ ತಲುಪಿದೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗದಿದ್ದರೆ ಬೆಳಗಾವಿ ಮಹಾನಗರಕ್ಕೆ ಗಂಭೀರ ಜಲಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಬೆಳಗಾವಿ ತಾಲೂಕಿನ ರಾಕಸಕೊಪ್ಪ ಗ್ರಾಮದ ಬಳಿ ಮಾರ್ಕಂಡೇಯ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಈ ಜಲಾಶಯದಿಂದ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತದೆ. 0.5 ಟಿಎಂಸಿ ಸಾಮರ್ಥ್ಯದ ಈ ಜಲಾಶಯದಲ್ಲಿ ಸದ್ಯ ನೀರಿನ ಪ್ರಮಾಣ ಬಹುತೇಕ ಖಾಲಿಯಾಗಿದ್ದು, ಡೆಡ್ ಸ್ಟೋರೇಜ್ ನೀರನ್ನೆ ಬಳಕೆ ಮಾಡುವ ಅನಿವಾರ್ಯತೆ ನಿರ್ಮಾಣವಾಗಿದೆ.
ಪ್ರಸ್ತುತ ಜಲಾಶಯದಲ್ಲಿ ಕೇವಲ ಎರಡು ವಾರಗಳ ಅಗತ್ಯಕ್ಕೆ ಮಾತ್ರ ನೀರು ಉಳಿದಿರುವುದಾಗಿ ತಿಳಿದು ಬಂದಿದೆ. ಈಗಾಗಲೇ ಮೋಟರ್ ಗಳ ಮೂಲಕ ನೀರನ್ನು ಹೊರತೆಗೆದು ಪೂರೈಕೆ ಮಾಡಲಾಗುತ್ತಿದ್ದು, ಲಭ್ಯವಿರುವ ಕಡಿಮೆ ಪ್ರಮಾಣದ ನೀರನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಲಾಗುತ್ತಿದೆ.
ನಗರದ 58 ವಾರ್ಡ್ ಗಳಲ್ಲಿ ಬಹುತೇಕ ಕಡೆ 10 ರಿಂದ 15 ದಿನಗಳಗೊಮ್ಮೆ ಮಾತ್ರ ನೀರು ಪೂರೈಕೆ ಆಗುತ್ತಿದ್ದು, ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯ ಬೆಳಗಾವಿ ನಗರ ಹಾಗೂ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಜಿಟಿಜಿಟಿ ಮಳೆ ಆರಂಭವಾಗಿದ್ದರು, ಈ ಮಳೆ ನದಿ- ಹಳ್ಳ- ಕೊಳ್ಳಗಳನ್ನು ತುಂಬಿಸುವ ಮಟ್ಟದಲ್ಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ ಈ ಮಳೆಯ ಈಗಾಗಲೇ ಬಿತ್ತನೆ ಮಾಡಿರುವ ಹಾಗೂ ಒಣಗುವ ಸ್ಥಿತಿಯಲ್ಲಿದ್ದ ಬೆಳೆಗಳಿಗೆ ಸ್ವಲ್ಪ ಮಟ್ಟಿನ ಜೀವದಾನ ನೀಡುವುದು ರೈತರಿಗೆ ತಾತ್ಕಾಲಿಕವಾಗಿ ಆಶಾದಾಯಕವಾಗಿದೆ.
ಹಿಡಕಲ್, ನವಿಲುತೀರ್ಥ ಜಲಾಶಯಗಳ ಇಂದಿನ ನೀರಿನ ಮಟ್ಟ: ಬೆಳಗಾವಿ ನಗರಕ್ಕೆ ಕುಡಿಯುವ ನೀರಿನ ಪ್ರಮುಖ ಮೂಲಗಳಾಗಿರುವ ಹಿಡಕಲ್ ಹಾಗೂ ನವಿಲುತೀರ್ಥ ಜಲಾಶಯಗಳಲ್ಲಿ ನೀರಿನ ಮಟ್ಟ ಗಮನಾರ್ಹವಾಗಿ ಕುಸಿತವಾಗಿದೆ.
ಹುಕ್ಕೇರಿ ತಾಲೂಕಿನ ಹಿಡಕಲ್ ಬಳಿ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ರಾಜಾ ಲಖನಗೌಡ ಜಲಾಶಯವು 51 ಟಿಎಂಸಿ ಸಾಮರ್ಥ್ಯ ಹೊಂದಿದ್ದು, ಇವತ್ತಿಗೆ ಕೇವಲ 5.24 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ. ಇದೇ ವೇಳೆ ಸೌದತ್ತಿ ತಾಲೂಕಿನ ಮುನವಳ್ಳಿ ಬಳಿಯ ಮಲ್ಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ನವಿಲುತೀರ್ಥ ಜಲಾಶಯದಲ್ಲಿ 37.73 ಟಿಎಂಸಿ ಸಾಮರ್ಥ್ಯಕ್ಕೆ ಹೋಲಿಸಿದರೆ ಕೇವಲ 5.40 ಟಿಎಂಸಿ ನೀರು ಮಾತ್ರ ಲಭ್ಯವಿದೆ.
ಈ ಎರಡು ಜಲಾಶಯಗಳಲ್ಲಿ ನೀರಿನ ಸಂಗ್ರಹ ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ. 50 ರಷ್ಟು ಕಡಿಮೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ಈ ವೇಳೆಗೆ ಮುಂಗಾರು ಮಳೆ ಚುರುಕಾಗಿ ಆರಂಭವಾಗಿ ಜಲಾಶಯಗಳಿಗೆ ಉತ್ತಮ ಒಳಹರಿವು ಬರುತ್ತಿತ್ತು. ಆದರೆ ಈ ವರ್ಷ ಮುಂಗಾರು ವಿಳಂಬವಾಗಿರುವುದರಿಂದ ನೀರಿನ ಮಟ್ಟ ಹೆಚ್ಚಳವಾಗದೆ ಚಿಂತೆ ಹೆಚ್ಚಾಗಿದೆ.
ಮುಂದಿನ ದಿನಗಳಲ್ಲಿ ಉತ್ತಮ ಮಳೆ ಯಾಗದಿದ್ದರೆ ಬೆಳಗಾವಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಮೇಯರ್, ಉಪಮೇಯರ್ ರಾಕಸಕೊಪ್ಪ ಜಲಾಶಯ ಭೇಟಿ; ನೀರಿನ ಸ್ಥಿತಿ ಪರಿಶೀಲನೆ
ಬೆಳಗಾವಿ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಪ್ರಮುಖ ಮೂಲವಾದ ರಾಕಸಕೊಪ್ಪ ಜಲಾಶಯಕ್ಕೆ ನಿನ್ನೆ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪ್ರೀತಿ ಕಾಮಕರ ಹಾಗೂ ಉಪಮೇಯರ್ ಹನುಮಂತ್ ಕೊಂಗಾಲಿ ಅವರು ಭೇಟಿ ನೀಡಿ ಜಲಾಶಯ ನೀರಿನ ಲಭ್ಯತೆ ಹಾಗೂ ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸಿದರು.
ಪ್ರಸ್ತುತ ರಾಕಸಕೊಪ್ಪ ಜಲಾಶಯದಿಂದ ಪ್ರತಿದಿನ 20 ಎಂಎಲ್ ಡಿ, ಹಿಡಕಲ್ ಜಲಾಶಯದಿಂದ 60ಎಂಎಲ್ಡಿ, ಜೊತೆಗೆ ಟ್ಯಾಂಕರ್ ಗಳು, ಕೊಳವೆಬಾವಿಗಳು ಹಾಗೂ 24/7 ಯೋಜನೆಯಡಿ ಎರಡು ಗಂಟೆಗಳ ನೀರು ಸರಬರಾಜು ಸೇರಿ ಒಟ್ಟು ಸುಮಾರು 100 ಎಂಎಲ್ ಡಿ ನೀರನ್ನು ನಗರಕ್ಕೆ ಪೂರೈಸಲಾಗುತ್ತಿದೆ. ಆದರೆ ಮಳೆ ಕೊರತೆಯಿಂದ ಜಲಾಶಯಗಳಲ್ಲಿನ ನೀರಿನ ಪ್ರಮಾಣ ದಿನೇದಿನೇ ಕುಸಿಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀರನ್ನು ಮಿತವಾಗಿ ಹಾಗೂ ಜವಾಬ್ದಾರಿಯಿಂದ ಬಳಸುವಂತೆ ಮೇಯರ್ ಹಾಗೂ ಉಪಮೇಯರ್ ಮನವಿ ಮಾಡಿದ್ದಾರೆ.
ಇದೇ ವೇಳೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ," ಬೆಳಗಾವಿ ನಗರಕ್ಕೆ ಮುಂದಿನ ಎರಡು ತಿಂಗಳಿಗೆ ಸಾಕಾಗುವಷ್ಟು ಕುಡಿಯುವ ನೀರಿನ ಸಂಗ್ರಹ ಲಭ್ಯವಿದೆ. ಸಾರ್ವಜನಿಕರು ಆತಂಕಪಡಬೇಕಾಗಿಲ್ಲ. ನೀರಿನ ಕೊರತೆ ಎದುರಾಗುವ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ಪೂರೈಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದ್ದಾರೆ.
ಅಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜು ವ್ಯತ್ಯಯವಾಗದಂತೆ ಸಂಬಂಧಿತ ಗ್ರಾಮ ಪಂಚಾಯಿತಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
Also Read:
ಬೀಟ್ರೂಟ್ ಜ್ಯೂಸ್ ಯಾಕೆ ಆರೋಗ್ಯಕ್ಕೆ ಉತ್ತಮ? ಇಲ್ಲಿದೆ ಸಂಪೂರ್ಣ ಮಾಹಿತಿ