Belagavi News:
ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ನೀಡಿರುವ ಆದೇಶ ಸಮಂಜಸವಲ್ಲ ಎಂದು ಉಪಮುಖ್ಯಮಂತ್ರಿಗಳಾದ ಜಿ. ಪರಮೇಶ್ವರ್ ತಿಳಿಸಿದ್ದಾರೆ. ನೀರಿನ ಲಭ್ಯತೆ ಹೆಚ್ಚಿದ್ದರೆ ಕರ್ನಾಟಕವೇ ಸ್ವಯಂ ಪ್ರೇರಿತವಾಗಿ ನೀರು ನೀಡುತ್ತದೆ. ಆದರೆ ಪ್ರಸ್ತುತ ಕುಡಿಯುವ ನೀರಿಗೂ ಸಂಕಷ್ಟವಿರುವ ಸಂದರ್ಭದಲ್ಲಿ ಇಂತಹ ಆದೇಶ ಸೂಕ್ತವಲ್ಲ ಎಂದು ಅವರು ಹೇಳಿದ್ದಾರೆ.
ಸದಾಶಿವ ನಗರದ ನಿವಾಸದ ಬಳಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಮುಖ್ಯಮಂತ್ರಿ ಸರ್ವ ಪಕ್ಷ ಸಭೆ ಕರೆಯುವ ಕುರಿತು ಚಿಂತನೆ ನಡೆಸಿದ್ದಾರೆ ಎಂದು ತಿಳಿಸಿದರು. ಕರ್ನಾಟಕ ಈಗಾಗಲೇ ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದೆ. ಈ ಬಾರಿ ರಾಜ್ಯದಲ್ಲೇ ಕುಡಿಯುವ ನೀರಿನ ಕೊರತೆ ಇರುವುದರಿಂದ, 3,500 ಕ್ಯೂಸೆಕ್ ನೀರು ಬಿಡುವಂತೆ ಹೇಳುವುದು ನ್ಯಾಯ ಸಮ್ಮತವಲ್ಲ ಎಂದು ಪ್ರಶ್ನಿಸಿದರು.
ಅಗಸ್ಟ್ 3 ರಂದು ತಮಿಳುನಾಡು ಮುಖ್ಯಮಂತ್ರಿ ಬೆಂಗಳೂರಿಗೆ ಬರುವ ಸಾಧ್ಯತೆ ಇದೆ. ಭೇಟಿ ಖಚಿತವಾದರೆ ಕಾವೇರಿ ನೀರಿನ ವಿಚಾರವನ್ನು ಅವರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು. ಇದೇ ವೇಳೆ ಮುಖ್ಯಮಂತ್ರಿ ದೆಹಲಿಯಲ್ಲಿ ಕಾನೂನು ತಜ್ಞರೊಂದಿಗೆ ಸಭೆ ನಡೆಸಿ ಮುಂದಿನ ಕಾನೂನು ಕ್ರಮಗಳ ಕುರಿತು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.
ಕಾವೇರಿ ಹೋರಾಟಕ್ಕೆ ಕನ್ನಡಪರ ಸಂಘಟನೆಗಳು ಮತ್ತು ರೈತ ಸಂಘಟನೆಗಳು ಕರೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದವರು, ರಾಜ್ಯದಲ್ಲಿ ನೀರಿನ ಕೊರತೆ ಇರುವುದರಿಂದ ಸರ್ಕಾರ ನೀರು ಬಿಡುಗಡೆ ಮಾಡಬಹುದು ಎಂಬ ಆತಂಕದಿಂದ ಪ್ರತಿಭಟನೆಗಳು ನಡೆಯುತ್ತಿವೆ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸಿರುವ ಕುರಿತು ಮಾತನಾಡಿದ ಪರಮೇಶ್ವರ್, ಯೋಜನೆ ಜಾರಿಗೆ ಕರ್ನಾಟಕಕ್ಕೆ ಕಾನೂನು ಬದ್ಧ ಹಕ್ಕು ಇದೆ. ತಮಿಳುನಾಡಿನ ಅನುಮತಿ ಅಗತ್ಯವಿಲ್ಲ ಎಂದು ನ್ಯಾಯಾಲಯವೇ ಸ್ಪಷ್ಟಪಡಿಸಿದೆ. ಅಂತಿಮ ತೀರ್ಮಾನ ನ್ಯಾಯಾಲಯದ್ದೇ ಆಗಿರುತ್ತದೆ ಎಂದು ಹೇಳಿದರು.
ರಾಜ್ಯದ ಬರ ಪರಿಸ್ಥಿತಿಯ ಕುರಿತು ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಲಾಗಿದೆ. ಬರಪೀಡಿತ ಪ್ರದೇಶಗಳನ್ನು ಪ್ರಕೃತಿ ವಿಕೋಪ ದಡಿ ಘೋಷಿಸುವಂತೆ ಮನವಿ ಮಾಡಲಾಗಿದ್ದು, ಬರ ಘೋಷಣೆಗೆ ಇರುವ ಮಾನದಂಡಗಳನ್ನು ಸಡಿಲಗೊಳಿಸುವಂತೆ ಕೇಂದ್ರವನ್ನು ಕೋರಲಾಗಿದೆ. ಆಗಸ್ಟ್ ಅಂತ್ಯದವರೆಗೆ ಮಳೆ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತೊಂದು ವರದಿ ಸಲ್ಲಿಸಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.
ತಮಿಳುನಾಡಿಗೆ ಬಿಡಲು ಕಾವೇರಿ ನೀರಿಲ್ಲ ; ನೀರು ಹರಿಸುವ ಆದೇಶ ಸರಿಯಲ್ಲ - ಸಚಿವ ಎಂ ಬಿ ಪಾಟೀಲ್ :
ರಾಜ್ಯದ ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ವರ್ಷ ಸಮರ್ಪಕ ಮಳೆಯಾಗದ ಕಾರಣ ಜಲಾಶಯಗಳಲ್ಲಿ ನಿರೀಕ್ಷಿತ ಪ್ರಮಾಣದ ನೀರು ಸಂಗ್ರಹವಾಗಿಲ್ಲ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ 4.5 0 ಟಿಎಂಸಿ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ನೀಡಿರುವ ಆದೇಶ ಸಮಂಜಸವಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದವರು, ಉತ್ತಮ ಮಳೆ ಯಾಗುವ ವರ್ಷಗಳಲ್ಲಿ ಕರ್ನಾಟಕ ನಿಗದಿತ 177 ಟಿ ಎಂ ಸಿ ಗಿಂತಲೂ ಹೆಚ್ಚಿನ ಪ್ರಮಾಣದ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಿದೆ. ಆದರೆ, ಬರಗಾಲ ಹಾಗೂ ಮಳೆ ಕೊರತೆಯ ಸಂದರ್ಭಗಳಲ್ಲಿ ನೀರು ಹಂಚಿಕೆಗೆ ಸ್ಪಷ್ಟ ಸಂಕಷ್ಟ ಸೂತ್ರವಿಲ್ಲ ಎಂಬುದೇ ಸಮಸ್ಯೆಯಾಗಿದೆ ಎಂದು ಹೇಳಿದರು.
ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ ಮೇಕೆದಾಟು ಜಲಾಶಯ ನಿರ್ಮಾಣವೇ ಆಗಿದೆ ಎಂದು ಪ್ರತಿಪಾದಿಸಿದ ಎಂ ಬಿ ಪಾಟೀಲ್, ಅಂತಿಮ ತೀರ್ಪಿನ ಬಳಿಕ ಕರ್ನಾಟಕಕ್ಕೆ ಹೆಚ್ಚುರಿಯಾಗಿ ದೊರೆತ 14 ಟಿಎಂಸಿ ಸೇರಿದಂತೆ ಒಟ್ಟು 65 ಟಿಎಂಸಿ ನೀರನ್ನು ಸಂಗ್ರಹಿಸಿ ಇಡಲು ವ್ಯವಸ್ಥೆ ಅಗತ್ಯವಾಗಿದೆ ಎಂದು ತಿಳಿಸಿದರು. ಇದೇ ಉದ್ದೇಶದಿಂದ ತಾವು ಜಲ ಸಂಪನ್ಮೂಲ ಸಚಿವರಾಗಿದ್ದ ವೇಳೆ ಮೇಕೆದಾಟು ಯೋಜನೆಯ ಪರಿಕಲ್ಪನೆ ರೂಪಿಸಲಾಯಿತು ಎಂದು ಹೇಳಿದರು.
ಮೇಕೆದಾಟು ಯೋಜನೆಯಿಂದ ಕರ್ನಾಟಕದ ಜೊತೆಗೆ ತಮಿಳುನಾಡಿಗೂ ಪ್ರಯೋಜನವಿದೆ. ಆದರೆ ಅಲ್ಲಿನ ಆಂತರಿಕ ರಾಜಕೀಯ ಕಾರಣಗಳಿಂದ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿದೆ. ವಾಸ್ತವವನ್ನು ಒಪ್ಪಿಕೊಂಡು ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ಬೆಂಬಲ ನೀಡಬೇಕು ಎಂದು ಅವರು ಆಗ್ರಹಿಸಿದರು.
ಪ್ರಸ್ತುತ ನೀರಿನ ಬಿಕ್ಕಟಿನ ಕುರಿತು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳಲಿದ್ದಾರೆ ಎಂದು ತಿಳಿಸಿದವರು, ಕೇಂದ್ರ ಸರ್ಕಾರದ ಸಮಿತಿಯು ರಾಜ್ಯದ ಜಲಾಶಯಗಳಲ್ಲಿರುವ ನೀರಿನ ಸಂಗ್ರಹ, ಅಂಕಿ - ಅಂಶಗಳು ಹಾಗೂ ವಾಸ್ತವ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.