belagavi news :
ಬೆಳಗಾವಿ : ನವಜಾತ ಗಂಡು ಶಿಶುವನ್ನು ಕಸದ ತೊಟ್ಟಿಗೆ ಎಸೆದು ಹೋಗಿರುವ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಿತ್ತೂರು ಗ್ರಾಮದ ಸಮೀಪ ನಡೆದಿದೆ.
ಕಿತ್ತೂರಿನಿಂದ ನರಗುಂದಕ್ಕೆ ಸಂಪರ್ಕಿಸುವ ರಸ್ತೆಯ ಬಸವನಕಟ್ಟೆ ಸೇತುವೆ ಕೆಳಬಾಗದಲ್ಲಿರುವ ಕಸದ ತೊಟ್ಟಿಯಲ್ಲಿರುವ ಮಗುವಿನ ಅಳುವ ಶಬ್ದ ಕೇಳಿ ಬಂದಿದೆ. ಇದನ್ನು ಗಮನಿಸಿದ ಕುರಿಗಾಹಿಯೊಬ್ಬರು ಸ್ಥಳಕ್ಕೆ ಧಾವಿಸಿ, ಕಸದ ತಟ್ಟಿಯಲ್ಲಿ ಬಿದ್ದಿದ್ದ ನವಜಾತ ಶಿಶುವನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಘಟನೆಯ ಬಗ್ಗೆ ಸ್ಥಳೀಯರು ತಕ್ಷಣ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಶಿಶುವನ್ನು ಪ್ರಾಥಮಿಕ ಚಿಕಿತ್ಸೆಗೆ ಸವದತ್ತಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿನ ವೈದ್ಯರು ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಆರೈಕೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಸದ್ಯ ನವಜಾತ ಶಿಶು ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅದರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಶಿಶುವನ್ನು ಕಸದ ತೊಟ್ಟಿಗೆ ಬಿಟ್ಟು ಹೋದವರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸುರೇಬಾನ ಪೋಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ನವಜಾತ ಶಿಶುವನ್ನು ಕಸದ ತಟ್ಟಿಯಲ್ಲಿ ಬಿಟ್ಟು ಹೋದವರ ಪತ್ತೆಗೆ ತನಿಖೆ ಆರಂಭಿಸಿರುವ ಪೊಲೀಸರು, ಮಗುವಿನ ತಾಯಿಯನ್ನು ಪತ್ತೆ ಹಚ್ಚುವ ಕಾರ್ಯವನ್ನು ತೀವ್ರಗೊಳಿಸಿದ್ದಾರೆ.
ಹಿನ್ನೆಲೆಯಲ್ಲಿ ಸಮೀಪದ ಕಿತ್ತೂರು ಹಾಗೂ ಕುರಿ ಗೋವಿನ ಕೊಪ್ಪ ಗ್ರಾಮಗಳಲ್ಲಿ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅಲ್ಲದೆ, ಸುರೇಬಾನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ಭೇಟಿ ನೀಡಿ ಇತ್ತೀಚಿಗೆ ಹೆರಿಗೆ ನಡೆದಿರುವ ಪ್ರಕರಣಗಳ ಕುರಿತು ಮಾಹಿತಿ ಕಲೆಹಾಕಿದ್ದಾರೆ.
ಈ ಸಂಬಂಧ ಸುರೇಬಾನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನವಜಾತ ಶಿಶುವನ್ನು ಕಸದ ತೊಟ್ಟಿಗೆ ಎಸೆದಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೈ ಚೀಲದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ : ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗವಟೂರು ಹೊಳೆ ಸಮೀಪದ ಬಸ್ ನಿಲ್ದಾಣದಲ್ಲಿ ನವಜಾತ ಹೆಣ್ಣು ಶಿಶುವನ್ನು ಅನಾಥವಾಗಿ ಬಿಟ್ಟು ಹೋದ ಘಟನೆ ಆತಂಕ ಮೂಡಿಸಿತ್ತು.
ಸುಮಾರು 10 ರಿಂದ 15 ದಿನಗಳ ಪ್ರಾಯದ ಹೆಣ್ಣು ಮಗುವನ್ನು ಬಿಳಿ ಬಟ್ಟೆಯಲ್ಲಿ ಸುತ್ತಿ ಕೈ ಚೀಲದೊಳಗೆ ಇಟ್ಟು, ಗವಟೂರು ಗ್ರಾಮದ ರಸ್ತೆ ಬದಿಯ ಸಣ್ಣ ಬಸ್ ನಿಲ್ದಾಣದಲ್ಲಿ ನೇತು ಹಾಕಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ಬಸ್ ನಿಲ್ದಾಣದಲ್ಲಿ ಯಾರು ಇಲ್ಲದ ಸಮಯವನ್ನು ದುರುಪಯೋಗ ಪಡಿಸಿಕೊಂಡು ಮಗುವನ್ನು ಅಲ್ಲೇ ಬಿಟ್ಟು ಹೋಗಿರುವುದು ತನಿಕೆಯಲ್ಲಿ ಬೆಳಕಿಗೆ ಬಂದಿದೆ.
ರಾತ್ರಿ ಸುಮಾರು 9:00 ವೇಳೆಗೆ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ನಿವಾಸಿಯೊಬ್ಬರಿಗೆ ಮಗುವಿನ ಅಳುವ ಶಬ್ದ ಕೇಳಿ ಬಂದಿದೆ. ಅನುಮಾನಗೊಂಡ ಅವರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಕೈ ಚೀಲದೊಳಗೆ ನವಜಾತ ಶಿಶು ಇರುವುದನ್ನು ಕಂಡು ರಿಪ್ಪನ್ ಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶಿಶುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮತ್ತು ಆರೈಕೆಗೆ ಕ್ರಮ ಕೈಗೊಂಡಿದ್ದರು.
ಮಾಹಿತಿ ದೊರೆಯುತ್ತಿದ್ದಂತೆಯೇ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ರಾಜುರೆಡ್ಡಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಕೈ ಚೀಲದಲ್ಲಿ ಪತ್ತೆಯಾದ ನವಜಾತ ಹೆಣ್ಣು ಶಿಶುವನ್ನು ತಕ್ಷಣ ರಿಪ್ಪನ್ ಪೇಟೆ ಪ್ರಾರ್ಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಲಾಯಿತು.
ವೈದ್ಯರ ಪರಿಶೀಲನೆಯಲ್ಲಿ ಮಗುವಿನ ತೂಕ 1.6 ಕೆಜಿ ಇದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಆರೈಕೆಗಾಗಿ ಬಳಿಕ ಮಗುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸದ್ಯ ಶಿಶು ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ಮತ್ತು ಆರೈಕೆ ಪಡೆಯುತ್ತಿದೆ.
ಈ ಕುರಿತು ಪ್ರತಿಕ್ರಿಸಿದ್ದ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ರಾಜುರೆಡ್ಡಿ, "ಮಾಹಿತಿ ದೊರೆಯುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಕೈ ಚೀಲದಲ್ಲಿ ನಮ್ಮ ಜಾತ ಶಿಶು ಇರುವುದನ್ನು ಕಂಡೆವು. ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಮಗು ಆರೋಗ್ಯವಾಗಿದ್ದು, ಅದರ ಪೋಷಕರನ್ನು ಪತ್ತೆಹಚ್ಚಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ" ಎಂದು ಖಾಸಗಿ ಮಾಧ್ಯಮ ಒಂದಕ್ಕೆ ತಿಳಿಸಿದ್ದಾರೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ನವಜಾತ ಶಿಶುವನ್ನು ಬಸ್ ನಿಲ್ದಾಣದಲ್ಲಿ ಬಿಟ್ಟುಹೋದವರ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.