BELAGAVI NEWS :
ಬಂಟ್ವಾಳ: ಬಂಟ್ವಾಳದ ಬಿ.ಸಿ.ರೋಡ್ ನಲ್ಲಿ ಕೆಎಸ್ಆರ್ಟಿಸಿ ಹೊಸ ಬಸ್ ನಿಲ್ದಾಣದ ಆವರಣದಲ್ಲಿ ಶುಕ್ರವಾರ ಸಂಜೆ ನಡೆದ ಭೀಕರ ಹತ್ಯೆ ಪ್ರಕರಣ ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ. ಬಸ್ ಗೆ ಕಾಯುತ್ತಿದ್ದ ಯುವತಿಯ ಮೇಲೆ ಕಿಡಿಗೇಡಿ ಯುವಕನೊಬ್ಬ ತಲವಾರಿನಿಂದ ಮನಬಂದಂತೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಮೃತಳನ್ನು ಬಂಟ್ವಾಳ ತಾಲೂಕಿನ ಕಕ್ಯಪದವು ಗ್ರಾಮದ ಉಳಿ ನಿವಾಸಿ ಲಾವಣ್ಯ (21) ಎಂದು ಗುರುತಿಸಲಾಗಿದೆ. ಪ್ರಕರಣದ ಆರೋಪಿ ಬೆಳ್ತಂಗಡಿ ತಾಲೂಕಿನ ಒಡಿಲ್ನಾಲ್ ನಿವಾಸಿ ಚೇತನ್ (22) ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಇಂದು ಸಂಜೆ ಸುಮಾರು 6:00 ವೇಳೆಗೆ ನಡೆದಿದ್ದು, ಬಸ್ ನಿಲ್ದಾಣದಲ್ಲಿ ಜನಸಂದಣಿಯಲ್ಲಿ ಇರುವ ಸಂದರ್ಭದಲ್ಲಿ ಈ ಕೃತ್ಯ ಎಸಗಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಲಭ್ಯವಾದ ಮಾಹಿತಿಯಂತೆ, ಅವರನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಲಾವಣ್ಯ ಅವರಿಗೆ ಈ ಸಂಬಂಧದಲ್ಲಿ ಆಸಕ್ತಿ ಇರಲಿಲ್ಲ ಎಂದು ಮಾಹಿತಿ ಪೊಲೀಸರಿಗೆ ದೊರೆತಿದೆ. ಇದೇ ವಿಚಾರ ಹತ್ಯೆಗೆ ಕಾರಣವಾಗಿರಬಹುದೆಂಬ ಶಂಕೆಯ ಮೇರೆಗೆ ತನಿಖೆ ಮುಂದುವರೆದಿದೆ. ಆದರೆ ಕೊಲೆಗೆ ನಿಖರ ಕಾರಣವನ್ನು ಪೊಲೀಸರು ಇನ್ನು ಅಧಿಕೃತವಾಗಿ ದೃಢಪಡಿಸಿಲ್ಲ.
ಘಟನೆ ನಡೆದ ತಕ್ಷಣ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭಾವಿಸಿ ಪರಿಶೀಲನೆ ನಡೆಸಿ, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಭೀಕರ ಘಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಆರೋಪಿಯನ್ನು ಶೀಘ್ರ ಸಂಬಂಧಿಸಲು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ವಿವಿಧ ಘಟನೆಗಳಲ್ಲಿ ವ್ಯಾಪಕ ಶೋಧ ಕಾರ್ಯಾ ನಡೆಸಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ಮುಂದುವರಿಸಿದ್ದಾರೆ.
ಏನಾಯ್ತು ?
ಕಕ್ಯಪದವು ಮೈರ ನಿವಾಸಿ ಬಾಳಪ್ಪ ಗೌಡ ಅವರ ಪುತ್ರಿ ಲಾವಣ್ಯ ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್ನಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಅವರು ಬಿ.ಸಿ. ರೋಡ್ ನ ಕೆಎಸ್ಆರ್ಟಿಸಿ ಹೊಸ ಬಸ್ ನಿಲ್ದಾಣಕ್ಕೆ ಬಂದು, ಕಕ್ಯಪದವುಗೆ ತೆರಳುವ ಕೆಎಸ್ಆರ್ಟಿಸಿ ಬಸ್ ನಲ್ಲಿ ಕುಳಿತಿದ್ದರು. ಇದೆ ವೇಳೆ ಆರೋಪಿ ಚೇತನ್ ಅಲ್ಲಿಗೆ ಬಂದಿದ್ದಾನೆ ಎನ್ನಲಾಗಿದೆ.
ಆತನನ್ನು ಕಂಡ ಲಾವಣ್ಯ ಆತಂಕಗೊಂಡು ಬಸ್ ನಿಂದ ಇಳಿದಿದ್ದು, ಈ ವೇಳೆ ಚೇತನ್ ಆಕೆಯನ್ನು ಬೆನ್ನಟ್ಟಿದ್ದಾನೆ. ಬಳಿಕ ತನ್ನ ಬ್ಯಾಗ್ ನಲ್ಲಿದ್ದ ತಲವಾರನ್ನು ಹೊರ ತೆಗೆದು ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಣ ಉಳಿಸಿಕೊಳ್ಳಲು ಲಾವಣ್ಯ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದರು, ಆರೋಪಿ ಹಿಂಬಾಲಿಸಿ ಮನ ಬಂದಂತೆ ತಲವಾರಿನಿಂದ ಹಲ್ಲೆ ನಡೆಸಿದ್ದಾನೆ.
ಭೀಕರ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಲಾವಣ್ಯ ಬಸ್ ನಿಲ್ದಾಣದ ಆವರಣದಲ್ಲೇ ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದು, ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಈ ದೃಶ್ಯವನ್ನು ಕಂಡ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದು, ಕೆಲ ಕಾಲ ಬಸ್ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಕೃತ್ಯ ಎಸಗಿದ ಬಳಿಕ ಆರೋಪಿ ಬಸ್ ನಿಲ್ದಾಣದ ಮತ್ತೊಂದು ಭಾಗದಿಂದ ರಾಷ್ಟ್ರೀಯ ಹೆದ್ದಾರಿ ಕಡೆಗೆ ಓಡಿ, ಅಲ್ಲಿಂದ ವಾಹನ ಒಂದರಲ್ಲಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಆರೋಪಿಯ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ವ್ಯಾಪಕ ಶೋಧಕಾರ್ಯ ಆರಂಭಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದು, ಪ್ರಕರಣದ ತನಿಕೆಯನ್ನು ತೀವ್ರಗೊಳಿಸಲಾಗಿದೆ. ಆರೋಪಿ ಪರಾರಿಯಾಗಿರುವ ಹಿನ್ನೆಲೆಯಲ್ಲಿ ಆತನ ಬಂಧನಕ್ಕಾಗಿ ವಿವಿಧ ಆಯಾಮಗಳಲ್ಲಿ ಶೋಧ ಕಾರ್ಯ ಮುಂದುವರೆದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಡಾ. ಅರುಣ್ ಕುಮಾರ್, "ಬಂಟ್ವಾಳ ಟೌನ್ ಪೋಲಿಸ್ ಠಾಣಾ ವ್ಯಾಪ್ತಿಯ ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಒಬ್ಬರು ಬಸ್ ಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಯುವಕನೊಬ್ಬ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಹಲ್ಲೆಗೊಳಗಾದ ಯುವತಿಯ ಗುರುತು ಹಾಗೂ ಈ ಕೃತ್ಯ ಎಸಗಿದ ಆರೋಪಿಯ ಬಗ್ಗೆ ಅತ್ಯಂತ ವೇಗವಾಗಿ ಮಾಹಿತಿ ಕಲೆಹಾಕಿ, ಬಂಧಿಸಲು ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಿಯೋಜಿಸಲಾಗಿದೆ. ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ" ಎಂದು ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ಇಲಾಖೆ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಯನ್ನು ಶೀಘ್ರ ಬಂಧಿಸಲು ವಿಶೇಷ ತಂಡಗಳನ್ನು ವಿವಿಧ ಪ್ರದೇಶಗಳಲ್ಲಿ ತೀವ್ರ ಶೋಧ ಕಾರ್ಯ ನಡೆಸುತ್ತಿವೆ. ಘಟನೆ ಹಿಂದಿನ ನಿಖರ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಸಾಕ್ಷ್ಯಾಧಾರಗಳನ್ನು ಮುಂದುವರಿಸಿದ್ದಾರೆ.
10 ದಿನಗಳ ಅಂತರದಲ್ಲಿ ಎರಡನೇ ದುಷ್ಕೃತ್ಯ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 10 ದಿನಗಳ ಅಂತರದಲ್ಲಿ ಮಹಿಳೆಯರ ಮೇಲೆ ಸಾರ್ವಜನಿಕ ಸ್ಥಳದಲ್ಲೇ ನಡೆದ ಎರಡನೇ ಗಂಭೀರ ದಾಳಿ ಇದಾಗಿದೆ. ಜುಲೈ 6 ರಂದು ಬಂಟ್ವಾಳ ತಾಲೂಕಿನ ಮೊಂತಿಮಾರು ಪಡ್ಪು ಬಸ್ ನಿಲ್ದಾಣದಲ್ಲಿ ಕಾಲೇಜಿಗೆ ತೆರಳಲು ಬಸ್ ಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಮಂಚಿ ನಿವಾಸಿ ಮೊಹಮ್ಮದ್ ಜಾವ್ವರ್ (28) ಚೂರಿಯಿಂದ ಹಲ್ಲೆ ನಡೆಸಿದ್ದ.
ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಆರೋಪಿ ಸ್ವತಃ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದ.
ಇದೀಗ ಆ ಘಟನೆ ನಡೆದ 10 ದಿನಗಳಲ್ಲಿ ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಹೊಸ ಬಸ್ ನಿಲ್ದಾಣದಲ್ಲಿ 21 ವರ್ಷದ ಲಾವಣ್ಯ ಅವರನ್ನು ತಲವಾರಿನಿಂದ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಸತತವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಇಂತಹ ಘಟನೆಗಳು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದ್ದು, ಮಹಿಳೆಯರ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಎಬ್ಬಿಸಿವೆ.