Belagavi News:
ನವದೆಹಲಿ: ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ, ಪ್ರಶ್ನೆ ಪತ್ರಿಕೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಳೆದ 26 ದಿನಗಳಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಹಾಗೂ ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ತಮ್ಮ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ. ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ ಮತ್ತು ಡಾ. ಜಿತೇಂದ್ರ ಸಿಂಗ್, ಲೇಹ್-ಲಡಾಖ್ ಅಪೆಕ್ಸ್ ಬಾಡಿಯ ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಉಪವಾಸವನ್ನು ಮುಕ್ತಾಯಗೊಳಿಸಿದರು.
ವ್ಯಾಪಕ ಚರ್ಚೆಗಳು ಹಾಗೂ ಹಲವು ಶರತ್ತುಗಳ ಕುರಿತು ಒಪ್ಪಂದದ ಬಳಿಕ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸೋನಮ್ ವಾಂಗ್ಚುಕ್ ತಿಳಿಸಿದ್ದಾರೆ. ಉಪವಾಸ ಅಂತ್ಯಗೊಳಿಸುವ ನಿರ್ಧಾರಕ್ಕೆ ವಿವಿಧ ರಾಜಕೀಯ ಪಕ್ಷಗಳ 65 ಸಂಸದರು ಬರೆದ ಮನವಿ ಪತ್ರಗಳು ಮತ್ತು ಸರ್ಕಾರದೊಂದಿಗೆ ನಡೆದ ನಿರಂತರ ಸಂವಾದವು ಪ್ರಮುಖ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.
65ಸಂಸದರ ಮನವಿ ನಿರ್ಣಾಯಕ
ವಿವಿಧ ಪಕ್ಷಗಳಿಗೆ ಸೇರಿದ 65 ಸಂಸದರು ಉಪವಾಸವನ್ನು ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು. ಈ ಮನವಿಗಳು ಮತ್ತು ನಡೆಯುತ್ತಿರುವ ಸಂವಾದವು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಕಾರಾತ್ಮಕ ವಾತಾವರಣ ನಿರ್ಮಾಣ ಮಾಡಿದೆ ಎಂದು ವಾಂಗ್ಚುಕ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಒಪ್ಪಂದದ ಸಂಪೂರ್ಣ ವಿವರ ಶೀಘ್ರದಲ್ಲೇ
ಉಪವಾಸ ಸತ್ಯಾಗ್ರಹವನ್ನು ಯಾವ ಷರತ್ತುಗಳ ಆಧಾರದಲ್ಲಿ ಅಂತ್ಯಗೊಳಿಸಲಾಗಿದೆ ಎಂಬುದರ ಕುರಿತು ಶೀಘ್ರದಲ್ಲೇ ಪ್ರತ್ಯೇಕ ವಿಡಿಯೋ ಸಂದೇಶದ ಮೂಲಕ ಸಂಪೂರ್ಣ ಮಾಹಿತಿ ನೀಡುವುದಾಗಿ ಸೋನಮ್ ವಾಂಗ್ಚುಕ್ ತಿಳಿಸಿದ್ದಾರೆ. ಸಾರ್ವಜನಿಕರಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಎಲ್ಲ ಅಂಶಗಳನ್ನು ಪಾರದರ್ಶಕವಾಗಿ ಹಂಚಿಕೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ.
ಹಿಂಸಾಚಾರದಿಂದ ದೂರವಿರಲು ಕರೆ
ಉಪವಾಸ ಮುಕ್ತಾಯದ ಬಳಿತ ದೇಶದಾದ್ಯಂತ ತಮ್ಮ ಬೆಂಬಲಿಗರಿಗೆ ಶಾಂತಿ ಕಾಪಾಡಿಕೊಳ್ಳುವಂತೆ ವಾಂಗ್ಚುಕ್ ಮನವಿ ಮಾಡಿದ್ದಾರೆ. ಯಾವುದೇ ಸಂದರ್ಭದಲ್ಲೂ ಹಿಂಸಾಚಾರದ ಮಾರ್ಗ ಅನುಸರಿಸಬಾರದು ಹಾಗೂ ಪ್ರತಿಭಟನೆಗಳು ಸಂಪೂರ್ಣ ಶಾಂತಿಯುತವಾಗಿರಬೇಕು ಎಂದು ಅವರು ಹೇಳಿದ್ದಾರೆ.
ಪ್ರತಿಭಟನೆ ಮುಂದುವರಿಕೆ
ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯಗೊಳಿಸಿದ್ದರೂ, ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ, ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಶಾಂತಿಯುತ ಪ್ರತಿಭಟನೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಮಧ್ಯಪ್ರದೇಶದ ಭೂಪಾಲ್ ನಲ್ಲೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಶಿಕ್ಷಣ ಇಲಾಖೆಯಲ್ಲಿ ಆಡಳಿತಾತ್ಮಕ ಬದಲಾವಣೆ
ನಡುವೆ ಕೇಂದ್ರ ಸರ್ಕಾರವು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ವಿನೀತ್ ಜೋಶಿ ಅವರನ್ನು ಪಂಚಾಯತ್ ರಾಜ್ ಇಲಾಖೆ ವರ್ಗಾಯಿಸಿದೆ. ಅವರ ಸ್ಥಾನಕ್ಕೆ ನರೇಶ್ ಗಂಗ್ವಾರ್ ಅವರನ್ನು ನೇಮಿಸಲಾಗಿದ್ದು. ಟಿ. ಕೆ.ಅನಿಲ್ ಕುಮಾರ್ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ವಿನೀತ್ ಜೋಶಿ ಈ ಹಿಂದೆ ರಾಷ್ಟೀಯ ಪರೀಕ್ಷಾ ಸಂಸ್ಥೆ (NTA) ಮಹಾನಿರ್ದೇಶಕರಾಗಿಯೂ ಹಾಗೂ CBSE ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಚಿವರೊಂದಿಗೆ ಮಹತ್ವದ ಸಭೆ
ಕೇಂದ್ರ ಸಚಿವರು ಶುಕ್ರವಾರ ಮಧ್ಯಾಹ್ನ 12:30 ಕ್ಕೆ ಸಿಜೆಪಿ ಪ್ರತಿನಿಧಿಗಳೊಂದಿಗೆ ಮಹತ್ವದ ಮಾತುಕತೆ ನಡೆಸಲಿಗಿದ್ದಾರೆ. ಈ ಸಭೆ ತಟಸ್ಥ ಸ್ಥಳದಲ್ಲಿ ನಡೆಯುವ ಸಾಧ್ಯತೆ ಇದ್ದು. ಶಿಕ್ಷಣ ಸುಧಾರಣೆ ಹಾಗೂ ಪ್ರತಿಭಟನೆಗೆ ಸಂಬಂಧಿಸಿದ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.