Belagavi News :
ಮುಂಬೈ (ಮಹಾರಾಷ್ಟ್ರ): ಮಂಗಳವಾರ ಸ್ವಲ್ಪ ಬಿಡುವು ನೀಡಿದ್ದ ಮಳೆ ಬುಧವಾರ ಮತ್ತೆ ಅಬ್ಬರಿಸಿದ್ದು, ಮುಂಬೈ ನಗರದಲ್ಲಿ ಜನಜೀವನದ ಮೇಲೆ ಪರಿಣಾಮ ಬೀರಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಸ್ಥಳೀಯ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಕಚೇರಿ ಹಾಗೂ ದೈನಂದಿನ ಕೆಲಸಗಳಿಗೆ ತೆರಳುವ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.
ಮುಂಬೈ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬುಧವಾರ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ನಿರಂತರ ಮಳೆಯ ಪರಿಣಾಮ ಪಶ್ಚಿಮ ರೈಲ್ವೆ ಜಾಲದ ಕೆಲವು ಮಾರ್ಗಗಳಲ್ಲಿ ರೈಲು ಸಂಚಾರಕ್ಕೆ ಅಡ್ಡಿಯಾಗಿದೆ.
ಮುಂಬೈ ಸೇರಿದಂತೆ ಮಹಾರಾಷ್ಟ್ರದ ಮಳೆ ಪರಿಸ್ಥಿತಿ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ದೂರವಾಣಿ ಮೂಲಕ ಮಾಹಿತಿ ಪಡೆದಿದ್ದಾರೆ. ಪರಿಸ್ಥಿತಿ ಎದುರಿಸಲು ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ನೀಡುವ ಭರವಸೆಯನ್ನು ನೀಡಿದ್ದಾರೆ.
ಇನ್ನೊಂದೆಡೆ, ಭಾರಿ ಮಳೆಯಿಂದಾಗಿ ಮುಂಬೈ - ಪುಣೆ ಮಾರ್ಗದಲ್ಲಿ ಸಂಚಾರದ ವೇಳೆ ಪರಿಣಾಮ ಉಂಟಾಗಿದೆ. ನಗರದ ಹಲವು ಕೆರೆಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಮುಂಬೈಗೆ ಕುಡಿಯುವ ನೀರು ಪೂರೈಸುವ ಪ್ರಮುಖ ಜಲಮೂಲಗಳಲ್ಲಿ ಒಂದಾದ ತುಳಸಿ ಕೆರೆ ಕೋಡಿ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಆಡಳಿತವು ಪರಿಸ್ಥಿತಿಯ ಮೇಲೆ ನಿಗಾ ವಹಿಸಿದೆ.
ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಮುಂಬೈ, ಥಾಣೆ, ಪಾಲ್ಘರ್ ಮತ್ತು ರಾಯಗಢ ಜಿಲ್ಲೆಗಳಲ್ಲಿ ಭಾರಿ ಅಥವಾ ಅತ್ಯಂತ ಭಾರಿ ಮಳೆ ಆಗುವ ಸಾಧ್ಯತೆ ಇದೆ. ವಿಶೇಷವಾಗಿ ಪಾಲ್ಘರ್ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ವ್ಯಕ್ತಪಡಿಸಲಾಗಿದೆ. ಕೊಂಕಣ ಭಾಗದ ಕೆಲವೆಡೆ ಗಂಟೆಗೆ 60 ರಿಂದ 70 ಕಿ. ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಜುಲೈ 9ರ ಬಳಿಕ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳ ಭಾಗಗಳಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಭಾರಿ ಮಳೆಯ ಪರಿಣಾಮ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದ್ದು, ರಸ್ತೆ, ರೈಲು ಮತ್ತು ವಾಯು ಸಂಚಾರದಲ್ಲಿ ವ್ಯತ್ಯಯ ಉಂಟಾಗಬಹುದು ಎಂದು ಐಎಂಡಿ ಎಚ್ಚರಿಕೆ ನೀಡಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಮುಂಬೈ ಮತ್ತು ಪಶ್ಚಿಮ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಮಳೆ ಬಿರುಸಾಗಿದ್ದರೂ, ರಾಜ್ಯದ ಇತರ ಪ್ರದೇಶಗಳಲ್ಲಿ ಒಟ್ಟಾರೆ ಮಳೆಯ ಪ್ರಮಾಣ ಸರಾಸರಿಗಿಂತ ಕಡಿಮೆಯಾಗಿದೆ. ಖಾಂದೇಶ್ ಭಾಗದ ಧುಲೆ ಮತ್ತು ನಂದುರ್ಬಾರ್, ಮಧ್ಯಮ ಮಹಾರಾಷ್ಟ್ರದ ಅಹಲ್ಯಾ ನಗರ ಮತ್ತು ಸೋಲಾಪುರ್, ಪಶ್ಚಿಮ ವಿದರ್ಭದ ಕೆಲವು ಭಾಗಗಳು ಹಾಗೂ ಮರಾಠವಾಡದ ಕೆಲ ಪ್ರದೇಶಗಳಲ್ಲಿ ಮಳೆಯ ಕೊರತೆ ಮುಂದುವರೆದಿದೆ.