belagavi news :
ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ "ಜೋಸೆಫ್ ವಿಜಯ್ " ಅವರು ಆಗಸ್ಟ್ 3ರಂದು ಬೆಂಗಳೂರಿನ ಭೇಟಿ ನೀಡುವ ಸಾಧ್ಯತೆ ಇದ್ದು, ಅವರ ಸ್ವಾಗತಕ್ಕೆ ವಿಧಾನಸೌಧದಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಕಾವೇರಿ ನದಿ ನೀರು ಹಂಚಿಕೆ ಕುರಿತು ಚರ್ಚಿಸಲು ವಿಧಾನಸೌಧದಲ್ಲಿ ಮಹತ್ವದ ಸಭೆ ಆಯೋಜಿಸಲಾಗಿದ್ದು, ಅದಕ್ಕೂ ಮುನ್ನ ಸಭಾಂಗಣ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ.
ಸಿಎಂ ವಿಜಯ್ ಆಗಮಿಸುವ ಮಾರ್ಗದಲ್ಲಿ ಸುಣ್ಣ-ಬಣ್ಣ ಬಳಿಯುವುದು, ಸಭಾಂಗಣದಲ್ಲಿ ಆಸನ ವ್ಯವಸ್ಥೆ ಮಾಡುವುದು ಸೇರಿದಂತೆ ವಿವಿಧ ನವೀಕರಣ ಕಾರ್ಯಗಳು ಚುರುಕುಗೊಂಡಿವೆ. ಕಾವೇರಿ ನೀರು ವಿವಾದದ ನಡುವೆಯೇ ನಡೆಯುತ್ತಿರುವ ಈ ಭೇಟಿ ಮತ್ತು ಸಭೆ ರಾಜಕೀಯವಾಗಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ಇನ್ನೊಂದೆಡೆ, ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಸೂಚನೆಯಂತೆ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರನ್ನು 15 ದಿನಗಳ ಕಾಲ ಹರಿಸುವಂತೆ" ನೀಡಿರುವ ಆದೇಶಕ್ಕೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಮಂಡ್ಯ ರೈತರು ಹಾಗೂ ಕನ್ನಡಪರ ಸಂಘಟನೆಗಳು ನೀರು ಬಿಡುಗಡೆ ನಿರ್ಧಾರವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿವೆ.
ರಾಜ್ಯದಲ್ಲಿ ಮಳೆ ಕೊರತೆ ಹಾಗೂ ನೀರಿನ ಅಭಾವದ ನಡುವೆಯೇ ತಮಿಳುನಾಡಿಗೆ ನೀರು ಬಿಡುವುದು ಸರಿಯಲ್ಲ ಎಂದು ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಒಂದು ಹನಿ ನೀರು ಬಿಡುಗಡೆ ಮಾಡಿದರು ರಾಜ್ಯಾದ್ಯಂತ ಬಂದ್ ಕರೆ ನೀಡುವುದಾಗಿ ಕೆಲವು ಕನ್ನಡಪರ ಸಂಘಟನೆಗಳು ಎಚ್ಚರಿಕೆ ನೀಡಿವೆ.
ಈ ಎಲ್ಲ ಬೆಳವಣಿಗೆಗಳ ನಡುವೆಯೇ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಆಗಸ್ಟ್ 3ರ ಬೆಂಗಳೂರು ಭೇಟಿ ನಡೆಯುತ್ತದಯೇ ಎಂಬ ಕುತೂಹಲ ಹೆಚ್ಚಾಗಿದೆ. ಕಾವೇರಿ ವಿವಾದದ ನಡುವೆ ನಡೆಯಲಿರುವ ಈ ಸಭೆ ಉಭಯ ರಾಜ್ಯಗಳ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.