BELAGAVI NEWS :
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮತ್ತೆ ಚಟುವಟಿಕೆಗಳು ಜೋರಾಗಿವೆ. ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ವಿಚಾರದ ಚರ್ಚೆ ತಣ್ಣಗಾಗುತ್ತಿದ್ದಂತೆಯೇ ಇದೀಗ ಬಿಜೆಪಿ ಪಾಳಯದಲ್ಲೂ ಆಂತರಿಕ ಅಸಮಾಧಾನ ಮತ್ತು ಬಣರಾಜಕೀಯದ ಮಾತುಗಳು ಕೇಳಿ ಬರುತಿವೆ.
ಪಕ್ಷದೊಳಗೆ ಸಂಸದ ಡಾ.ಕೆ.ಸುಧಾಕರ್ ಹಾಗೂ ಎಸ್.ಆರ್.ವಿಶ್ವನಾಥ್ ಸೇರಿದಂತೆ ಹಲವು ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ತೀವ್ರಗೊಂಡಿದ್ದು, ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಈ ಬೆಳವಣಿಗೆಗಳು ರಾಜ್ಯ ರಾಜಕೀಯ ಸಮೀಕರಣದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಎಲ್ಲರೂ ಗಮನಿಸುತ್ತಿದ್ದಾರೆ.
ಇದರ ನಡುವೆ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಸುತ್ತಿಕೊಂಡು ಹಗ್ಗಜಗ್ಗಾಟ ಮತ್ತೆ ತೀವ್ರಗೊಂಡಿದೆ. ಬಿ.ವೈ.ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕೆಂಬ ಒತ್ತಾಯ ಹೊಸದೇನಲ್ಲ; ಆರಂಭದಿಂದಲೂ ಪಕ್ಷದೊಳಗಿನ ವಿರೋಧಿ ಬಣ ಈ ಬಗ್ಗೆ ಪಟ್ಟು ಹಿಡಿದಿದೆ.
ಆದರೆ, ಈವರೆಗೆ ಬಿಜೆಪಿ ಹೈಕಮಾಂಡ್ ಯಾವುದೇ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಇದರಿಂದ ರಾಜ್ಯಾಧ್ಯಕ್ಷ ಸ್ಥಾನ ಕುರಿತು ಅಸಮಾಧಾನ ಮತ್ತು ಚರ್ಚೆಗಳು ಮತ್ತೆ ರಾಜಕೀಯ ವಲಯದಲ್ಲಿ ಮುನ್ನೆಲೆಗೆ ಬಂದಿವೆ.
ಆದರೂ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಚಿವ ವಿ.ಸೋಮಣ್ಣ ಅವರ ಹೆಸರು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.
ಈ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸೋಮಣ್ಣ, "ನಾನು ಪಕ್ಷದ ಶಿಸ್ತಿನ ಸಿಪಾಯಿ. ಹೈಕಮಾಂಡ್ ನೀಡುವ ಯಾವುದೇ ಸಂದೇಶಕ್ಕೂ ನಾನು ಬದ್ಧ" ಎಂದು ತಿಳಿಸಿದ್ದಾರೆ. ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ವಿ.ಸೋಮಣ್ಣ, ತಾನು ಪಕ್ಷದ ನಿಲುವಿಗೆ ಸಂಪೂರ್ಣ ಬದ್ಧರಾಗಿರುವುದಾಗಿ ಪುನರುಚ್ಚರಿಸಿದರು. "ನಾನು ಪಕ್ಷದ ಶಿಸ್ತಿನ ಸಿಪಾಯಿ. ಹೈಕಮಾಂಡ್ ನೀಡುವ ಯಾವುದೇ ಸಂದೇಶಕ್ಕೂ ನಾನು ಬದ್ಧ," ಎಂದು ಅವರು ಹೇಳಿದರು.
ಅವರು ಮುಂದುವರೆದು , "ಅಮಿತ್ ಶಾ ಅವರು ವರುಣದಲ್ಲಿ ಸ್ಪರ್ಧಿಸು ಎಂದಾಗ ಅಲ್ಲಿ ಸ್ಪರ್ಧಿಸಿದೆ. ನಂತರ ತುಮಕೂರಿನಲ್ಲಿ ಸ್ಪರ್ಧಿಸು ಎಂದಾಗ ಅಲ್ಲಿ ಸ್ಪರ್ಧಿಸಿ ಗೆದ್ದೆ. ಹೈಕಮಾಂಡ್ ಏನು ಹೇಳುತ್ತದೋ ಅದನ್ನೇ ನಾನು ಪಾಲಿಸುತ್ತೇನೆ," ಎಂದು ಸ್ಪಷ್ಟಪಡಿಸಿದರು.
ಈ ಹೇಳಿಕೆಗಳ ಮೂಲಕ, ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ, ರಾಜ್ಯಾಧ್ಯಕ್ಷ ಜವಾಬ್ದಾರಿ ವಹಿಸಿಕೊಳ್ಳುವ ಸಿದ್ಧತೆ ಇದ್ದಂತೆ ರಾಜಕೀಯ ವಲಯದಲ್ಲಿ ವಿಶ್ಲೇಷಣೆ ನಡೆಯುತ್ತಿದೆ.